2 Sept 2020

DVG Mankutimmana Kagga with Meaning in Kannada| ಮಂಕುತಿಮ್ಮನ ಕಗ್ಗ (ತಾತ್ಪರ್ಯ ಸಹಿತ)

 ಮಂಕುತಿಮ್ಮನ ಕಗ್ಗ (1-20)


ರಸಧಾರೆ - 001
ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ
ದೇವ ಸರ್ವೇಶ ಪರಬೊಮ್ಮನೆಂದು ಜನಂ ||
ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ
ಆ ವಿಚಿತ್ರಕೆ ನಮಿಸೊ  ಮಂಕು ತಿಮ್ಮ ||
ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣುಮಾಯಾಲೋಲದೇವರು ಪರಬ್ರಹ್ಮಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು.
ನಾವಿರುವ ಭೂಮಿಯಂತಹ 9 .80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ಸೌರಮಂಡಲವೂ ಸೇರಿದಂತೆ ಲಕ್ಷಾಂತರ ಸೌರಮಂಡಲಗಳಿರುವ ನಮ್ಮ ಕ್ಷೀರಪಥನಮ್ಮ ಕ್ಷೀರಪಥವೂ ಸೇರಿದಂತೆ ಲಕ್ಷಾಂತರ ಕ್ಷೀರಪಥಗಳಿರುವ ಆಕಾಶಗಂಗೆನಮ್ಮ ಆಕಾಶಗಂಗೆಯೂ ಸೇರಿದಂತೆ ಲಕ್ಷಾಂತರ ಆಕಾಶಗಂಗೆಗಳಿರುವ ಈ ವಿಶ್ವ. ಇಡೀ ವಿಶ್ವವನ್ನು ಒಂದು ಸೂತ್ರದಲ್ಲಿ ನಡೆಸುತ್ತಿರುವ ಒಂದು ಶಕ್ತಿ. ಅದನ್ನೇ ಬೇರೆ ಬೇರೆಯವರು ಬೇರೆ ಹೆಸರುಗಳಿಂದ ಕರೆಯುತ್ತಾರೆಂದು ಈ ಕಗ್ಗದ ಆಂತರ್ಯ ಮತ್ತು ವಿಶ್ವದ ಒಂದು ಅನುವಷ್ಟೂ ಅಲ್ಲದ ನಾವು ಕಾಣದಿದ್ದರೂ ಆ ಶಕ್ತಿಯ  ಅಧೀನದಲ್ಲಿರುವುದರಿಂದಅದಕ್ಕೆ ಭಕ್ತಿಯಿಂದ ಪ್ರೀತಿಯಿಂದ ನಮಿಸಬೇಕು ಎಂದು ಒಂದು ಆದೇಶ.
ಅವರವರ ಭಾವಕ್ಕೆ ಅವರವರ ಭಕುತಿಗೆ
ಅವರವರ ತೆರನಾಗಿ ಇರುತಿಹನು ಶಿವಯೋಗಿ
ಹರನ ಭಕ್ತರಿಗೆ ಹರ ಹರಿಯ ಭಕ್ತರಿಗೆ ಹರಿ
ನರರೇನು ಭಾವುಸುವರದರಂತೆ ಕಾಣುವನು
ಶಿವ ಶರಣರ ಮಾತು. ಹೀಗೆ ಒಂದೇ ಸತ್ಯವನ್ನು ಎಲ್ಲ ಮಹಾ ಮಹಿಮರೂ ಹೇಳಿದ್ದರೆ ಅಲ್ಲವೇ?
ರಸಧಾರೆ - 002
ಜೀವ ಜಡರೂಪ ಪ್ರಪಂಚವನದಾವುದೋ |
ಆವರಿಸಿಕೊಂಡುಮೊಳನೆರೆದುಮಿಹುದಂತೆ ||
ಭಾವಕೊಳಪಡದಂತೆ ಅಳತೆಗಳವಡದಂತೆ |
ಆ ವಿಶೇಷಕೆ ಮಣಿಯೋ  ಮಂಕುತಿಮ್ಮ ||
(ಜೀವ ಜಡ ರೂಪ ಪ್ರಪಂಚವನು ಅದಾವುದೋ ಆವರಿಸಿಕೊಂಡು ಒಳನೆರೆದು ಇಹುದಂತೆ ಭಾವಕ್ಕೆ ಒಳಪಡದಂತೆ ಅಳತೆಗೆ ಅಳವಡದಂತೆ ಆ ವಿಶೇಷಕೆ ಮಣಿಯೋ- ಮಂಕುತಿಮ್ಮ )
(ಒಳನೆರೆದು=ಒಳಗೆ ತುಂಬಿ ಅಳವಡದಂತೆ = ಸಿಕ್ಕದಂತೆಇಹುದಂತೆ = ಇದೆಯಂತೆ)
ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ ತುಂಬಿಕೊಂಡಿರುವಭಾವದಿಂದ ಊಹಿಸಲಸಾಧ್ಯವಾದಅಳತೆಗೆ ಸಿಗದ ವ್ಯಾಪಕತ್ವವು ಹೊಂದಿರುವ ಆ ವಿಶೇಷಕೆ (ಪರಮಾತ್ಮನಿಗೆ) ನಮಿಸೋಮಣಿಯೋ ನಮಸ್ಕರಿಸೋ ಮಂಕುತಿಮ್ಮ ಎಂದು ಹೇಳುತ್ತಾರೆ ಡಿ.ವಿ.ಜಿ.
ಯತಃ ಸರ್ವಾಣಿ ಭೂತಾನಿ ಭವ೦ನ್ತ್ಯಾದಿ ಯುಗಾಗಮೆ – ಯಸ್ಮಿನ್ಸ್ಚ ಪ್ರಳಯಂ ಯಾಂತಿ ಪುನರೇವ ಯುಗಕ್ಷಯೇ.” ಎಂದು ಯುಧಿಷ್ಠಿರನು ಕೇಳುವ ಐದು ಪ್ರಶ್ನೆಗಳಿಗೆ ಉತ್ತರಿಸುತ್ತಾಪರಮಾತ್ಮ ಸ್ವರೂಪವನ್ನು ವಿವರಿಸುವಾಗ ಮಹಾಭಾರತದಲ್ಲಿ ಭೀಷ್ಮ ಪಿತಾಮಹರು ಹೇಳುತ್ತಾರೆ. ಎಂದರೆ ಯುಗದ ಆದಿಯಲ್ಲಿ ಯಾರಿಂದ ಎಲ್ಲವೂ ಪ್ರಕಟಗೊಳ್ಳುತ್ತದೋ ಮತ್ತು ಯುಗದ ಅಂತ್ಯದಲ್ಲಿ ಯಾರಲ್ಲಿ ಎಲ್ಲವೂ ವಿಲೀನವಾಗುತ್ತದೋಅದೇ ಪರಮಾತ್ಮ ” ಎನ್ನುತ್ತಾರೆ.
ಈ ಪರಮಾತ್ಮ -ಜಡ-ಜೀವ ಪರಸ್ಪರ ಸಂಬಂಧವನ್ನು ಕುರಿತು ಹೇರಳವಾದ ವ್ಯಾಖ್ಯಾನಗಲಿದ್ದರೂ ಇದೇ” ಇದು ಎಂದು ಹೇಳುವುದು ಅಸಾಧ್ಯ. ಅದು ಅನುಭವ ವೇಧ್ಯ. ” ಅನ್ನಮಾಚಾರ್ಯರು” ಅಂದರಿಲೋ ಪುಟ್ಟಿ ಅಂದರಿಲೋ ಚೇರಿ ಅಂದರಿ ರೂಪಮುಲು ಆಟು ತಾನೈ” ಎಂದು ಹೇಳುತ್ತಾರೆ. ಅಂದರೆ ಎಲ್ಲರಲ್ಲೂ ಹುಟ್ಟು ಎಲ್ಲರಲ್ಲೂ ಸೇರಿ ಎಲ್ಲರ ರೂಪವು ತಾನೇ ಆಗಿ”  ಎಂದು ಆ ಪರಮಾತ್ಮನನ್ನು ವರ್ಣಿಸುತ್ತಾರೆ. ಇಲ್ಲಿ ನಮಗೆ ಆ ಪರಮ ಪುರುಷನು ತಾನೇ ಇಡೀ ಜಗತ್ತು ಮತ್ತು ಅದರಲ್ಲಿರುವ ಸಕಲವೂ ಆಗಿ ತಾನೇ ಪ್ರಕಟಗೊಂಡಿದ್ದಾನೆ ಎಂದು ಅರ್ಥ ಬರುತ್ತದೆ. ಇರಲಿ ನಾವೂ ಸಹ ಇದನ್ನು ನಮ್ಮ ನಮ್ಮ ಮತಿಯ ಮಿತಿಯಲ್ಲಿ ವಿಚಾರದ ಒರೆಗೆ ಹಚ್ಚಿ ನಮ್ಮ ನಮ್ಮ ವಿಚಾರದ ಪರಿಧಿಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನ ಪಡಬೇಕು.
ಆದರೆ ಎಂತೆಂತ ಮಹಾಮಹಿಮಾನ್ವಿತರಿಗೂ ಊಹಿಸಲುಅಳೆಯಲು ಮತ್ತು ತಿಳಿಯಲು ಕಷ್ಟಸಾಧ್ಯವಾದ ಆ ಪರಮಾತ್ಮ ಸ್ವರೂಪವನ್ನು ,ವಿಚಿತ್ರ-ವಿಶೇಷ ಎಂದು ಕರೆದಿದ್ದಾರೆಡಿ.ವಿ.ಜಿ.ಯವರು.ಅದಕ್ಕೆನಮಿಸು ಮಣಿ ಎಂದು ಆದೇಶಿಸುತ್ತಾರೆ ಮಾನ್ಯ ಗುಂಡಪ್ಪನವರು.
ರಸಧಾರೆ - 003
ಇಹುದೋ ಇಲ್ಲವೋ ತಿಳಿಯಗೊಡದೊಂದು ವಸ್ತು ನಿಜ |
ಮಹಿಯಿಂ ಜಗವಾಗಿ ಜೀವವೇಷದಲಿ ||
ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ |
ಗಹನ ತತ್ತ್ವಕೆ ಶರಣೋ  ಮಂಕುತಿಮ್ಮ ||
ತಿಳಿಯಗೊಡದೊಂದು=ತಿಳಿಯಗೊಡದ ಒಂದು
ವಿಹರಿಪುದದೊಳ್ಳಿತೆಂಬುದು = ವಿಹರಿಪುದು (ವಿಹಾರ ಮಾಡುವುದು) + ಅದು + ಒಳ್ಳಿತು = ಒಳ್ಳೆಯದು + ಎಂಬುದು
ನಿಸದವಾದೊಡಾ = ನಿಸದವಾದೊಡೆ + ಆ
ವಿಹಾರಮಾಡುವುದು ಎಂದರೆಎಲ್ಲದರಲ್ಲೂ ವ್ಯಾಪಕವಾಗಿ ಚೈತನ್ಯ ರೂಪದಲ್ಲಿರುವುದು ಎಂದೂ ಅರ್ಥೈಸಬಹುದು. ನಿಸದವಾದೊಡೆ ಎಂದರೆ ನಿಜವಾದರೆ ಎಂದೇ ಅರ್ಥೈಸಬೇಕು.
ಮಾನವರಲ್ಲಿ ಇದು ಒಂದು ನಿರಂತರ ಪ್ರಶ್ನೆ. ಆ ದೇವರೆಂಬ ವಸ್ತು ಇದೆಯೋ ಇಲ್ಲವೋ ಎಂದು. ಇದೆ ಎಂದರೆಅದಕ್ಕೆ ನಾನಾ ಹೆಸರುಗಳುರೂಪಗಳುಪೂಜೆಗಳುಹಲವು ಪೂಜಾ  ವಿಧಾನಗಳುಆಚಾರಗಳುಸಂಪ್ರದಾಯಗಳು ಆ ದೇವರ ರೂಪ ಮತ್ತು ಕಾರ್ಯವೈಖರಿಗೆ ನಾನಾ ಭಾಷ್ಯಗಳು. ಅನಾದಿ ಕಾಲದಲ್ಲೂ ಆ ದೇವರ ಅಸ್ತಿತ್ವವನ್ನು ಪ್ರಶ್ನಿಸುವ ” ಚಾರ್ವಾಕ” ರೆಂಬುವರೂ ಇದ್ದರು. ಇಂದಿಗೂ ಆ ದೇವರೆಂಬ ವಸ್ತುವನ್ನು ನಂಬದಿರುವರು ಇದ್ದಾರೆ. ಕೆಲವರಿಗೆ ಧೃಢವಾದ ನಂಬಿಕೆ. ಇನ್ನೂ ಕೆಲವರಿಗೆ ಅನುಮಾನ. ಮತ್ತೆ ಕೆಲವರಿಗೆ ಅದು ಆಗಾಗ ಬಂದು ಹೋಗುವ ವಿಚಾರ. ಕೆಲವರಿಗೆ ಸಂಕಟ ಬಂದಾಗ ಮಾತ್ರ ದೇವರ ನೆನಪುಕೆಲವರಿಗೆ ಬರೀ ತೋರಿಕೆಗೆ ಭಕ್ತಿ. ಮತ್ತು ಕೆಲವರಿಗೆ ಹೊರಗೆ ತೋರದಿದ್ದರೂ ಆಂತರ್ಯದಲ್ಲಿ ಶುಧ್ಧ ಭಕ್ತಿ.
ಇಲ್ಲಿ ಡಿ.ವಿ.ಜಿ ಯವರೂ ಸಹ “ ನಿಸದವಾದೊಡೆ” ಎಂದಿದ್ದಾರೆ. ” ಜಗವ ಸೃಜಿಸಿಗತಿ ಸೂತ್ರವನಾಡಿಸಿ” ಎಂದಿದ್ದಾರೆ ದಾಸರು. ಅಂದರೆ ಜಗತ್ತನ್ನು ಸೃಷ್ಟಿಸಿಜಗತ್ತಿನ ಎಲ್ಲ ಜೀವರಾಶಿಗಳನ್ನೂ ತನ್ನ ಇಷ್ಟದಂತೆ ಪರಮಾತ್ಮ ಆಡಿಸುವನೆಂಬ ಅರ್ಥದಲ್ಲಿದೆ ದಾಸರ ಉಕ್ತಿ. ಹಾಗೆ ಇಡೀ ವಿಶ್ವವನ್ನು ಸೃಷ್ಟಿಮಾಡಿಎಲ್ಲ ಜಡ ಮತ್ತು ಜೀವಿಗಳಲ್ಲೂ ತಾನೇ ತಾನಾಗಿ ವ್ಯಾಪಿಸಿರುವ ಆ ಪರಮಾತ್ಮನೆಂಬುವುದು ಒಳ್ಳೆಯದು ಮತ್ತು ಇರುವುದು ಸತ್ಯವಾದರೆಆ ಗಹನಕ್ಕೆ ಅಂದರೆ ಗೂಢವಾದಊಹೆಅರಿವು ಮತ್ತು ತರ್ಕಕ್ಕೆ ನಿಲುಕದ ಆ ಗುಹ್ಯವಾದ ವಸ್ತುವಿಗೆ ಶರಣಾಗು ಎನ್ನುತ್ತಾರೆ ಡಿ.ವಿ.ಜಿ . ಇಲ್ಲಿ ಸತ್ಯವಾದರೆ ಎಂದಿದ್ದಾರೆ. ಅಂದರೆ ಅದು ಅಸತ್ಯವೂ ಆಗಿರಬಹುದೇಎಂದರೆ ಅದು ಹಾಗಲ್ಲ. ನಂಬುವವನ ಮನಸ್ಸಿಗೆಮಾತಿಗೆ ಅದು ಸತ್ಯ ಎಂದು ಗೋಚರಿಸಿದರೆಅದನ್ನು ನಂಬು ಮತ್ತು ಶರಣಾಗು ಎಂದು ಹೇಳಿದ್ದಾರೆ. ನಾನು ನಂಬಲ್ಲ ಎಂಬುವವನೂ ಸಹ ” ನಾನು ದೇವರನ್ನು ನಂಬುವುದಿಲ್ಲ ” ಎನ್ನುತ್ತಾನೆ. ಅಂದರೆ ಅವನು ” ” ದೇವರು” ಎನ್ನುವ ವಸ್ತುವೊಂದಿದೆ ನಾನು ಅದನ್ನು ನಂಬುವುದಿಲ್ಲ ಎಂದು ಅರ್ಥವಲ್ಲವೇ?
ಹಾಗಾಗಿ ವಾಚಕರೆ ನಿಮಗೆ ಆ ಪರಮಾತ್ಮ ವಸ್ತುವಿನಲ್ಲಿ ನಂಬಿಕೆ ಇದ್ದರೆಶುಧ್ಧವಾಗಿ ನಂಬಿಶರಣಾಗಿ ಎನ್ನುತ್ತಾರೆ ಡಿ.ವಿ.ಜಿ .
ರಸಧಾರೆ - 004
ಏನು ಜೀವನದರ್ಥಏನು ಪ್ರಪಂಚಾರ್ಥ ?
ಏನು ಜೀವಪ್ರಪಂಚಗಳ ಸಬಂಧ?
ಕಾಣದಿಲ್ಲಿರ್ಪುದೇನಾನುಮುಂಟೆ ಅದೇನು?
ಜ್ಞಾನಪ್ರಮಾಣವೇಮ್ಮಂಕುತಿಮ್ಮ
ಕಾಣದಿಲ್ಲಿರ್ಪುದೇನಾನುಮುಂಟೆ = ಕಾಣದೆ + ಇಲ್ಲಿ + ಇರ್ಪುದು(ಇರುವುದು)+ ಏನಾನುಂ(ಏನಾದರೂ)+ ಉಂಟೆ
ಈ ನಮ್ಮ ಜೀವನಕ್ಕೆ ಏನಾದರೂ ಅರ್ಥ ಇದೆಯೇನಾವಿರುವ ಈ ಪ್ರಪಂಚದ ಅರ್ಥವೇನುನಮ್ಮ ಮತ್ತು ನಾವು ಇರುವ ಈ ಪ್ರಪಂಚದ ಪರಸ್ಪರ ಸ೦ಬ೦ಧವೇನುಇವೆರಡನ್ನೂ ಬೆಸೆದಿರುವನಮ್ಮ ಕಣ್ಣಿಗೆ ಕಾಣದ ಒಂದು ಶಕ್ತಿ ಏನಾದರೂ ಇದೆಯೇಹಾಗಿದ್ದರೆ ಅದೇನುಅದು ನಮ್ಮ ವಿಚಾರ ಮತ್ತು ಜ್ಞಾನದ ಪರಿಧಿಯಿಂದ ಮೀರಿದೆಯೇಹಾಗಾದರೆ ಅದು ಏನು? ” ಎಂಬ ಭಾವಗಳನ್ನು ವ್ಯಕ್ತಪಡಿಸುತ್ತಾರೆ ಈ ಕಗ್ಗದಲ್ಲಿ ಮಾನ್ಯ ಶ್ರೀ ಡಿ.ವಿ.ಜಿ ಯವರು.
ವಾಚಕರೆಅಲ್ಪ ಸ್ವಲ್ಪ ವಿಚಾರಮಾಡುವ ಶಕ್ತಿ ಇರುವವರೂ ಸಹ ಈ ರೀತಿಯ ಪ್ರಶ್ನೆಗಳನ್ನು ತಮ್ಮಲ್ಲೇ ತಾವು ಅನೇಕ ಬಾರಿ ಕೇಳಿಕೊಳ್ಳುತ್ತಾರೆ. ಅಲ್ಲವೇ?
ನಾವು ಹುಟ್ಟುತ್ತೇವೆಬೆಳೆಯುತ್ತೇವೆಬದುಕುತ್ತೇವೆ ಮತ್ತು ಒಂದು ದಿನ ಸಾವಿನ ತೆಕ್ಕೆಗೆ ಬೀಳುತ್ತೇವೆ. ಈ ಎಲ್ಲಕ್ಕೂ ಏನಾದರೂ ಅರ್ಥವಿದೆಯೇನಾವು ಇಲ್ಲಿರುವಾಗ ನಮ್ಮ ಜೀವನದಲ್ಲಿ ಜ್ಞಾನದ ಜೊತೆಯಲ್ಲಿ ಪ್ರೀತಿಪ್ರೇಮಕೋಪದ್ವೇಷಅಸೂಯೆಅನುರಾಗ ಮುಂತಾದ ಹಲವಾರು ಭಾವನೆಗಳನ್ನು ಬೆಳೆಸಿಕೊಳ್ಳುತ್ತೇವೆ. ಆ ಭಾವನೆಗಳ ಜೊತೆಗೆ ಜೀವಿಸುತ್ತೇವೆ. ಈ ರೀತಿಯ ಜೀವನಕ್ಕೇನಾದರೂ ಅರ್ಥವಿದೆಯೇವಾಸ್ತವ ಬದುಕಿಗೆ ಮಾತ್ರ ಮಾಸ್ತವವೇ ಕಾರಣವೋ ಅಥವಾ ನಮ್ಮ ಕಣ್ಣಿಗೆ ಕಾಣದ ಆದರೂ ಈ ಎಲ್ಲವನ್ನೂ ನಿಯಂತ್ರಿಸುವ ಬೇರೆ ಯಾವುದಾದರೂ ಶಕ್ತಿ ಇದೆಯೇ. ಇದ್ದರೆ ಅದರ ಸ್ವರೂಪವೇನು ಮತ್ತು ಅದರ ಕಾರ್ಯ ವೈಖರಿಯೇನು ಎನ್ನುವುದು ಎಲ್ಲ ವಿಚಾರವಂತರಿಗೂ ಬರುವ ಸಂದೇಹಗಳು.
ಪ್ರತಿ ಜೀವಿಯ ಹುಟ್ಟು ಏಕಾಗುತ್ತದೆಭೌತಿಕ ಕಾರಣವು ಎಲ್ಲರಿಗೂ ಗೊತ್ತು. ಆದರೆ ಈ ಭೌತಿಕ ಕಾರಣವಲ್ಲದೆ ಬೇರೆ ಏನಾದರೂ ಕಾರಣವಿದೆಯೇಆ ಕಾರಣವೇ ನಮ್ಮ ಪ್ರತಿ ನಿಮಿಷದ ಕಾರ್ಯಗಳನ್ನೂ ನಿಯಂತ್ರಿಸುತ್ತದೆಯೇ?
ನಮ್ಮ ಭಾರತೀಯ ಸಿದ್ಧಾಂತದ ಪ್ರಕಾರ ಪ್ರತಿ ಜೀವಿಯೂ ಒಂದು ಪೂರ್ವ ನಿಯೋಜಿತ ಕಾರಣಕ್ಕಾಗಿ ಜನಿಸಿ ಮತ್ತು ಆ ಪೂರ್ವ ನಿಯೋಜಿತ ಕ್ರಮದಲ್ಲಿಯೇ ತನ್ನ ಜೀವನವನ್ನು ನಡೆಸುತ್ತದೆ ಎಂದು ಹೇಳಲ್ಪಟ್ಟಿದೆ. ಹಾಗಿದ್ದರೆ ಆ ಕಾರಣದ ಮೂಲವೇನು ಕಾರಣಕ್ಕೆ ಕಾರಕರಾರುಬಹಳ ಕ್ಲಿಷ್ಟವಾದ ಪ್ರಶ್ನೆ.
ನಮ್ಮ ಋಷಿ ಮುನಿಗಳೂ ಸಹ ಈ ರೀತಿಯ ಪ್ರಶ್ನೆಗಳಿಗೆ ಉತ್ತರವನ್ನು ಕಾಣಲು ಮಾಡಿದ ಪ್ರಯತ್ನದ ಫಲವೇ ಭಾರತೀಯ ವೇದ ಶಾಸ್ತ್ರಗಳುಉಪನಿಷತ್ತುಗಳು . ಹೀಗೆ ಎಲ್ಲರಲ್ಲೂ ಸಾಮಾನ್ಯವಾಗಿ ಉದ್ಭವವಾಗುವ ಮತ್ತು ಎಲ್ಲರೂ ವಿಚಾರ ಮಾಡಬಹುದಾದ ಅಥವಾ ಮಾಡಲೇಬೇಕಾದ ಪ್ರಶ್ನೆಗಳ ಸ್ವರೂಪವೇ ಈ ಕಗ್ಗ.
ರಸಧಾರೆ - 005
ದೇವರೆಂಬುದದೇನು ಕಗ್ಗತ್ತಲ ಗವಿಯೆ?
ನಾವರಿಯಲಾದೆಲ್ಲದರೊಟ್ಟು ಹೆಸರೇ?
ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು ?
ಸಾವು ಹುಟ್ಟುಗಳೇನು?- ಮಂಕುತಿಮ್ಮ
ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ?
ಕಾವನು(= ಕಾಯುವವನು) ಓರ್ವನು(= ಒಬ್ಬನು) ಇರಲ್ಕೆ( = ಇರಲು) ಜಗದ ಕಥೆಯು ಏಕಿಂತುಸಾವು ಹುಟ್ಟುಗಳೇನು? – ಮಂಕುತಿಮ್ಮ.
ದೇವರು ಎನ್ನುವುದು ಏನುಅದೇನು ಕತ್ತಲು ಕವಿದ ಗವಿಯೆಎನ್ನುತ್ತಾರೆ ಮಾನನೀಯ ಗುಂಡಪ್ಪನವರು.
ಮಾನವನಿಗೆ ಯೋಚಿಸುವ ಶಕ್ತಿ ಬಂದಾಗಿನಿಂದ ಇದೊಂದು ಕಾಡುವ ಪ್ರಶ್ನೆ. ಅಂದು ಮನುಷ್ಯ ಕಾಡಿನಲ್ಲಿ ಅಲೆಮಾರಿಯಾಗಿದ್ದ. ಕೈಗೆ ಸಿಕ್ಕದ್ದನ್ನು ತಿಂದುತನ್ನನ್ನು ತಾನು ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದ. ಆಗ ಅವಿನಿಗೆ ಬಂದ ಯೋಚನೆ ಹೀಗಿದ್ದಿರಬಹುದು. ದಿನದ ಯಾವುದೋ ಸಮಯದಲ್ಲಿ ಒಂದು ವಸ್ತು ಗಗನದಲ್ಲಿ ಬರುತ್ತದೆ. ಆಗ ಎಲ್ಲವೂ ನಿಚ್ಚಳವಾಗಿ ಕಾಣುತ್ತದೆ. ಕಾಡು ಪ್ರಾಣಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಾಯವಾಗುತ್ತದೆ. ಆಹಾರವನ್ನು ಹುಡುಕಲು ಆಡುವ ಬೇಟೆಯೂ ಯಶಸ್ವೀ. ಆದರೆ ದಿನದ ಯಾವುದೋ ಸಮಯದಲ್ಲಿ ಗಗನದಲ್ಲಿ ಆ ವಸ್ತು ಕಾಣೆಯಾಗುತ್ತದೆ. ಆಗ ಎಲ್ಲವೂ ಕತ್ತಲೆ. ಕಾಡು ಪ್ರಾಣಿಗಳಿಂದ ತನ್ನ ರಕ್ಷಣೆ ಕಷ್ಟ ಅಥವಾ ಅಸಾಧ್ಯ. ಹಾಗಾಗಿ ಗಗನದಲ್ಲಿ ಬರುವ ವಸ್ತು ತನಗೆ ಸಹಾಯ ಮಾಡುತ್ತದೆ. ಆಕಾಶದಿಂದ ನೀರು ಬೀಳುತ್ತದೆ. ಗಿಡಮರಗಳು ಚಿಗುರಿ ಗೆಡ್ಡೆ ಗೆಣಸುಗಳುಹಣ್ಣು ಹಂಪಲುಗಳು ಯತೇಚ್ಚವಾಗಿ ಸಿಗುತ್ತದೆ. ಹಾಗೇ ಗಗನದಿಂದ ಬಂದ ಮಳೆ ತನಗೆ ಸಹಾಯಮಾಡುತ್ತದೆ. ಎಲ್ಲವೂ ಮೇಲಿಂದ ಬರುವುದರಿಂದಇದನ್ನೆಲ್ಲಾ ಕೊಡುವ ಅಥವಾ ಕಳುಹಿಸುವ ಯಾರೋ ಮೇಲಿರಬೇಕು. ಅದನ್ನೇ ಅಂದು ಅವನು” ದೇವರು” ಎಂದ. ಮುಂದೆ ತನಗೆ ಉಪಯೋಗಕ್ಕೆ ಬರುವ ಎಲ್ಲಕ್ಕೂ ಆ ದೈವತ್ವವನ್ನು ಆರೋಪಿಸುತ್ತಾ ಹೋದ. ವಿಡಂಬನೆಯೇನೆಂದರೆ ಇಂದಿಗೂ ಮಾನವನ ಸ್ತಿತಿ ಹಾಗೆ ಇದೆ. ತನಗೆ ಉಪಯೋಗಕ್ಕೆ ಬರುವುದೆಲ್ಲಾಅಂದರೆ ಭೂಮಿಮನುಷ್ಯಪ್ರಾಣಿ ಪಕ್ಷಿ ಗಿಡ ಮರ,ನದಿ ಸಮುದ್ರಮಳೆ ಬಿಸಿಲು ಬೆಳಕು ಹೂವು ಹಣ್ಣು ಹೀಗೆ ಎಲ್ಲವೂ ಅವನಿಗೆ ದೈವ ಸಮಾನ.
ಆದರೆ ಆ ದೇವರೇನು ಅಷ್ಟೊಂದು ಗಹನನೆಗುಹ್ಯನೆಅರ್ಥವಾಗದವನೇದೇವರು ಗಹನನನೋ ಅಲ್ಲವೋ ಗೊತ್ತಿಲ್ಲ. ಆದರೆ ಇಂದಿಗೂ ” ಅದು ” ಇದೇ” ಎಂದು ಹೇಳುವ ಒಂದು ಪ್ರಮಾಣ ಸಿಕ್ಕಿಲ್ಲ ಅಲ್ಲವೆ?. ಸಿಕ್ಕಿದ್ದಿದ್ದರೆ ಆ ದೇವರ ರೂಪ ಮತ್ತು ಸ್ವರೂಪಗಳ ಬಗ್ಗೆ ಇಷ್ಟೊಂದು ಭಿನ್ನ ಭಿನ್ನ ಅಭಿಪ್ರಾಯಗಳು ಇರುತ್ತಿರಲಿಲ್ಲ ಅಲ್ಲವೆದೇವರನ್ನು ಪರಿಭಾಷಿಸಿದವರೆಲ್ಲ( ಪರಿಭಾಷೆ = definition )ತಮ್ಮ ತಮ್ಮ ಅನುಭವದ ವೃತ್ತದಲ್ಲೇ ಆ ದೇವರನ್ನು ವಿವರಿಸಿದ್ದಾರೆ. ಅಂದರೆ ಆ ದೇವರು ಎನ್ನುವ ವಸ್ತು ಅನುಭವ ವೇದ್ಯ ಮಾತ್ರ.
ವಾಚಕರೆನೋಡಿ ಈ ಜಗತ್ತಿನ ಅಥವಾ ಸೃಷ್ಟಿಯಲ್ಲಿ ನಡೆಯುವ ವಿಧ್ಯಮಾನಗಳನ್ನೆಲ್ಲಅದರ ನಿಜ ಸ್ವರೂಪ ಮತ್ತು ಕಾರ್ಯ ವೈಖರಿ ಮತ್ತು ಆ ವಿಧ್ಯಮಾನಗಳಿಗೆ ಕಾರಣ ಮತ್ತು ಕಾರಕ ಯಾರು ಏನು ಅಂದು ಇಂದಿಗೂ ಮಾನವನಿಗೆ ಅರ್ಥೈಸಲಾಗಿಲ್ಲ. ವಿಜ್ಞಾನದ ಮೂಲಕ ಅವನು ಕಂಡು ಹಿಡಿದುಕೊಂಡಿರುವುದು ಕೇವಲ ಸಾವಿರಕ್ಕೆ ಒಂದು ಪಾಲೂ ಇಲ್ಲ. ಅಷ್ಟೇ ಅಲ್ಲ ನಿರಂತರ ಬದಲಾಗುತ್ತ ಹೊಸ ಹೊಸ ಆಯಾಮವನ್ನು ತಳೆಯುವ ಈ ಸೃಷ್ಟಿಯನ್ನು ಅರಿಯಲು ವಿಜ್ಞಾನದ ಪ್ರಯೋಗಗಳಿಂದ ಸಾಧ್ಯವೇಹಾಗಾಗಿ ಅವನು ಗುಹ್ಯನು ಎನ್ನುವ ಅರ್ಥದಲ್ಲಿ ಮಾನ್ಯ ಗುಂಡಪ್ಪನವರು ಕೇಳುತ್ತಾರೆ.
ಹಾಗೆ ಆ ದೇವರು ಈ ಪ್ರಪಂಚವನ್ನು ಮತ್ತು ಇಲ್ಲಿರುವ ಎಲ್ಲವನ್ನೂ ಸೃಷ್ಟಿಸಿ ಎಲ್ಲರನ್ನೂ ಕಾಪಾಡುವವನಾಗಿದ್ದರೆಎಲ್ಲರೂ ಸಮಾನವಾಗಿ ಸುಖವಾಗಿರಬೇಕಲ್ಲವೆಈ ಹುಟ್ಟು ಸಾವುಗಳೇಕೆನೋವು ದುಃಖಗಳೇಕೆ ಮನುಷ್ಯ ಮನುಷ್ಯರಲ್ಲಿ ಇಷ್ಟೊಂದು ಬೇಧವೇಕೆ ದೇವರು ಎಲ್ಲರನ್ನೂ ಕಾಯುವವನದರೆ ಎಲ್ಲರನ್ನು ಸಮಾನವಾಗಿ ಕಾಯಬೇಕಲ್ಲವೇಈ ಸಾವು ನೋವುಗಳಿಗೇನು ಅರ್ಥಹೀಗೆ ಹತ್ತು ಹಲವಾರು ಪ್ರಶ್ನೆಗಳನ್ನು ಈ ಕಗ್ಗದ ಮೂಲಕ ಮಾನನೀಯ ಗುಂಡಪ್ಪನವರು ಎತ್ತಿದ್ದಾರೆ. ಇಂತಹ ಪ್ರಶ್ನೆಗಳು ಸಾಮಾನ್ಯವಾಗಿ ಎಲ್ಲರಲ್ಲೂ ಅವರವರ ಜೀವನದ ಯಾವುದಾದರೂ ಘಳಿಗೆಯಲ್ಲಿ ಉದ್ಭವಿಸಿರಬಹುದು.
ರಸಧಾರೆ - 006
ಒಗಟೆಯೇನೀ ಸೃಷ್ಟಿಬಾಳಿನರ್ಥವೇನು ?
ಬಗೆದು ಬಿಡಿಸುವರಾರು ಸೋಜಿಗವನಿದನು ?
ಜಗವ ನಿರವಿಸಿದ ಕೈಯೊಂದಾದೊಡೇಕಿಂತು
ಬಗೆ ಬಗೆಯ ಜೀವಗತಿ  ಮಂಕುತಿಮ್ಮ
ಒಗಟೆಯೇನೀ (ಒಗಟೇ + ಏನು + ಈ) ಸೃಷ್ಟಿಬಾಳಿನ ಅರ್ಥವೇನು. ಬಗೆ ಬಿಡಿಸುವವರು ಯಾರು ಸೋಜಿಗವ ಇದನು.
ಜಗವ ನಿರವಿಸಿದ (ನಿರ್ಮಿಸಿದ) ಕೈ ಒಂದು ಆಡೋದೇ (ಆದರೆ) ಏಕೆ ಇಂತು(ಹೀಗೆ) ಬಗೆ ಬಗೆಯ ಜೀವಗತಿ – ಮಂಕುತಿಮ್ಮ.
ಈ ಸೃಷ್ಟಿಯು ಒಗಟೇಈ ಬಾಳಿಗೆ ಅರ್ಥವೇನು ?. ಆದರೆ ಈ ಒಗಟನ್ನು ಬಿಡಿಸುವವರು ಯಾರು. ಈ ಜಗತ್ತನ್ನು ಸೃಷ್ಟಿಮಾಡಿದ ಕೈ ಒಂದೇ ಆದರೆ ಸೃಷ್ಟಿಯಲ್ಲಿ ಸಮಾನತೆಯೇಕಿಲ್ಲ ?
ಬೇರೆ ಬೇರೆಯಾದ ಜೀವಗತಿ ಏಕೆಎನ್ನುವ ಪ್ರಶ್ನೆಗಳನ್ನು ತಮಗೆ ತಾವೇ ಕೇಳಿಕೊಳ್ಳುವ ರೀತಿಯಲ್ಲಿ ಶ್ರೀ ಗುಂಡಪ್ಪನವರುನಮ್ಮೆಲ್ಲರ ಮುಂದೆ ಈ ಕಗ್ಗದ ರೂಪದಲ್ಲಿ ಇಟ್ಟಿದ್ದಾರೆ.
ಎಲ್ಲ ಜೀವಿಗಳಲ್ಲೂ ಇರುವ ಆ ಚೇತನವು ಜ್ಞಾನ ಸ್ವರೂಪ. ಆದರೆ ಕೆಲವರು ಜ್ಞಾನಿಗಳು ಮತ್ತೆ ಕೆಲವರು ಏಕಿಲ್ಲ ಎಂದರೆಕೆಲವರ ಕನ್ನಡಿ ಒರೆಸಿ ಶುದ್ಧವಾಗಿದೆ.
ಕೆಲವರ ಕನ್ನಡಿಯ ಮೇಲೆ ಧೂಳು ಕೂತಿದೆ. ದೂಳನ್ನು ಒರೆಸಿದರೆ ಅದೂ ಸಹ ಪ್ರಕಾಶಿಸುತ್ತಾಶುದ್ಧ ಬಿಂಬವನ್ನು ಪ್ರತಿಫಲಿಸುತ್ತದೆ.
ಆದರೂ ಏನಿದು ಪ್ರಪಂಚ ಎಂಬ ಪ್ರಶ್ನೆ ಮತ್ತು ಅರ್ಥವೇ ಆಗುವುದಿಲ್ಲವಲ್ಲ ಅಥವಾ ನಮಗೆ ಅರ್ಥವಾಗಿರುವುದು ಪೂರ್ಣವಲ್ಲ ಎಂಬ ಭಾವ ಎಲ್ಲರಿಗೂ ಬರುತ್ತದೆ. ಇದು ಅರ್ಥವಾಗದ ಗಂಟಾದರೆ ಯಾರಾದರೂ ಬಿಡಿಸಬಹುದಲ್ಲ ಎನ್ನುವ ಪ್ರಶ್ನೆಯೂ ಉದ್ಭವವಾಗುತ್ತದೆ.
ಈ ಜಗತ್ತನ್ನು ನಿರ್ಮಿಸದ ಅಥವಾ ಸೃಷ್ಟಿಸಿದ ಕೈ” ಒಂದೇ ಎಂದಾದರೆವಿಧವಿದವಾದ ಅಸಮತೆಯಿಂದ ಏಕೆ ಕೂಡಿದೆ ಎನ್ನುವ ಸಂದೇಹಪ್ರಶ್ನೆ ವಿಚಾರವಂತರಾದ ಎಲ್ಲರ ಮನಸ್ಸಲ್ಲೂ ಉದ್ಭವವಾಗುತ್ತದೆ ಅಲ್ಲವೇಹಾಗೆಯೆ ಇದೆ ಈ ಕಗ್ಗದ ಭಾವ.
ನಾ ಹಿಂದೆಯೇ ಹೇಳಿದಂತೆಈ ಜಗತ್ತಿನ ಗುಟ್ಟನ್ನು ಚೇಧಿಸಲು ಈ ವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ. ಪ್ರಯತ್ನಪಟ್ಟವರಿಗೆಲ್ಲ ಒಂದೊಂದು ರೂಪದಲ್ಲಿ ಕಾಣುವ ಈ ಜಗತ್ತಿನ ನಿಜ ರೂಪ ಕಂಡುಕೊಳ್ಳುವಲ್ಲಿ ಯಾರೂ ಪೂರ್ಣ ಸಫಲರಲ್ಲ. ಹಾಗೆಯೇ ಈ ಜಗತ್ತಿನ ಎಲ್ಲ ಜೀವರಾಶಿಗಳಲ್ಲೂ ಹೇರಳವಾದ ವೈವಿಧ್ಯತೆ. ಒಬ್ಬ ಮನುಷ್ಯನಿದ್ದಂತೆ ಇನ್ನೊಬ್ಬನಿಲ್ಲ. ಒಬ್ಬನ ಮನಸ್ಸು ಬುಧ್ಧಿಗಳಿದ್ದಂತೆ ಮತ್ತೊಬ್ಬರದ್ದಿಲ್ಲ. ಅವರವರ ಜೀವನ ಅವರವರದ್ದು. ಅವರವರ ಭಾಗ್ಯ ಅವರವರದ್ದು. ಒಬ್ಬರ ನೋವು ಮತ್ತು ಆ ನೋವಿಗೆ ಕಾರಣ ಮತ್ತೊಬ್ಬರ ನೋವು ಮತ್ತು ಅದರ ಕಾರಣದಂತಿಲ್ಲ.
ಒಬ್ಬರ ಸುಖ ಮತ್ತದರ ಕಾರಣ ಇನ್ನೊಬ್ಬರಿಗಿಲ್ಲ. ಒಬ್ಬನ ಸುಖದ ಕಾರಣವು ಮತ್ತೊಬ್ಬರ ದುಃಖಕ್ಕೆ ಕಾರಣವಾಗಬಹುದು.ಇದರ ಗುಟ್ಟನ್ನು ಬಿಡಿಸುವವರಾರುಈ ಎಲ್ಲವೂ ಮಾನವನಿಗಷ್ಟೆ ಅಲ್ಲ ಸಕಲ ಪ್ರಾಣಿಗಳಿಗೂ ಅನ್ವಯಿಸಿದ್ದತೆ. ನಮ್ಮ ಮನೆಯ ಬೀದಿಯಲ್ಲಿ ಒಂದು ಮುದಿ ನಾಯಿ ಹೊತ್ತು ಹೊತ್ತಿನ ಊಟಕ್ಕೆ ಹೋರಾಡುವಾಗಹಾಕಿದ್ದ ಯಾವುದನ್ನೂ ತಿನ್ನಲಾಗದೆ ಮುದಿತನಸಾವುಬದುಕಗಳ ಮಧ್ಯದಲ್ಲಿನರಳುವಾಗ ಅಥವಾ ಬಹಳ ದಿನಗಳಿಂದ ಬೆಳೆದು ಹೆಮ್ಮರವಾಗಿ ಎಲ್ಲರಿಗೂ ನೆರಳನ್ನೂ ಪ್ರಾಣಿ ಪಕ್ಷಿಗಳಿಗೆ ಆಹಾರವನ್ನೂ ಆಶ್ರಯವನ್ನೂ ನೀಡಿದ ಒಂದು ಮರವನ್ನು ಯಾವುದೋ ಕಾರಣಕ್ಕೆ ಕಡಿದಾಗಲೂ ಹೇ! ಪರಮಾತ್ಮ ಏನಿದು ಈ ಜೇವಿಯ ಅವಸ್ಥೆ ಎಂದು ನನ್ನ ಮನಸ್ಸು ಕರಗುತ್ತದೆ.ಆದರೆ ಅದರ ಅವಸ್ಥೆಗೆ ಉತ್ತರ ಖಂಡಿತ ನನಗೆ ಸಿಗುವುದಿಲ್ಲ. ಇದು ಎಲ್ಲ ಪ್ರಾಣಿಗಳ ಪರಿಸ್ತಿತಿ.
ಅಷ್ಟೇ ಅಲ್ಲ ಇಂದು ಸುಖ ನಾಳೆ ದುಖಇಂದು ಆರೋಗ್ಯ ನಾಳೆ ಅನಾರೋಗ್ಯಇಂದು ಮಿತ್ರ ನಾಳೆ ಶತ್ರುಇಂದು ಸಂತೋಷ ನಾಳೆ ಬೇಸರ ಹೀಗೆ ಇಂದು ನಾಳೆಗಳಲ್ಲಿ ಮತ್ತು ದಿನದಿನಕ್ಕೆ ಬೇರೆಬೇರೆಯೇ ಭಾವಗಳು ಈ ರೀತಿಯ ವೈವಿಧ್ಯಕ್ಕೆ ಕಾರಣರಾರು ಅಥವಾ ಕಾರಣವೇನುನಾವೆಷ್ಟು ಕಾರಣಪರರೆಷ್ಟು ಕಾರಣವಿಧಿಯೆಷ್ಟು ಕಾರಣವಿಧಾತನೆಷ್ಟು ಕಾರಣಹೇಗೆ ಹತ್ತು ಹಲವಾರು ಪ್ರಶ್ನೆಗಳ ಭಾವವೇ ಈ ಆರನೆಯ ಕಗ್ಗ. ಈ ಕಗ್ಗದಲ್ಲಿ ಬರುವ ಸೂಕ್ತ ಪ್ರಶ್ನೆಗಳು ನಮ್ಮ ನಿಮ್ಮಲ್ಲಿಯೂ ಸಹ ಎಂದಾದರೂ ಉದ್ಭವಿಸಿರಬಹುದು ಉತ್ತರ ಸಿಕ್ಕಿಲ್ಲ ದಿರಬಹುದು.
ರಸಧಾರೆ - 007
ಬದುಕಿಗಾರ್ ನಾಯಕರುಏಕನೋ ಅನೇಕರೋ?
ವಿಧಿಯೋ ಪೌರುಷವೋ ಧರುಮವೋ ಅಂಧಬಲವೋ?
ಕುದುರುವುದೆಂತು ಈಯವ್ಯವಸ್ಥೆಯ ಪಾಡು?
ಅದಿಗುದಿಯೆ ಗತಿಯೇನೋ ಮಂಕುತಿಮ್ಮ ||
ಬದುಕಿಗಾರ್ = ಬದುಕಿಗೆ = ಯಾರ್ಧರುಮವೋ = ಧರ್ಮವೋಅಂಧಬಲವೋ = ಅಂಧ ಶ್ರದ್ಧೆಯೋಈಯವ್ಯವಸ್ಥೆಯ = ಈ + ಅವ್ಯವಸ್ಥೆಯಅದಿಗುದಿ = ಸಂದೇಹ ಅಥವಾ ತಳಮಳ.
ಈ ಬದುಕಿಗೆ ಯಾರು ನಾಯಕರುಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋಅಥವಾ ಈ ಬದುಕಿಗೆ ನಾಯಕವಿಧಿಯೋ,ಧರ್ಮವೋ,ಅಥವಾ ಅಂಧ ಶ್ರದ್ಧೆಯೋಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿರುವ ಅವ್ಯವಸ್ಥೆ ಸರಿಯಾಗುವುದೋ ಇಲ್ಲವೋಅಥವಾ ಇವೆಲ್ಲರದರ ವಿಚಾರದ ತಳಮಳದಲ್ಲಿಯೇ ನಾವು ಯಾವಾಗಲೂ ಇರಬೇಕೆಈ ರೀತಿಯ ಪ್ರಶ್ನೆಗಳನ್ನು ಸನ್ಮಾನ್ಯ ಡಿ ವಿ ಗುಂಡಪ್ಪನವರು ತಮ್ಮನ್ನೇ ತಾವು ಕೇಳಿಕೊಳ್ಳುತ್ತಾಓದುಗರ ಮುಂದೆ ಪ್ರಸ್ತಾಪಿಸುತ್ತಾರೆ.
ಈ ರೀತಿಯ ಸಂದೇಹಗಳು ಎಲ್ಲ ಕಾಲಕ್ಕೂ ಎಲ್ಲ ವಿಚಾರವಂತರಿಗೂ ಮನದಲ್ಲಿ ಉದ್ಭವವಾಗುತ್ತದೆ. ” ಕಿಮೇಕಂ ದೈವತಂ ಲೋಕೆಕಿಂ ವಾಪ್ಯೇಕಂ ಪರಾಯಣಂಸ್ತುವನ್ತಃ ಕಂಕಮರ್ಚಂತಃ ಪ್ರಾಪ್ನುಯುರ್ಮಾನವಾಃ ಶುಭಂಕೋ ಧರ್ಮಃ ಸರ್ವ ಧರ್ಮಾಣಾಂ ಭವತಃ ಪರಮೌ ಮತಃ ? ಕಿಂ ಜಪನ್ಮುಚ್ಯತೇರ್ಜ೦ತುರ್ ಜನ್ಮ ಸಂಸಾರ ಬಂಧನಾತ್ ” ಇವು ಮಹಾಭಾರತದಲ್ಲಿ ಧರ್ಮರಾಯನು ಭೀಷ್ಮರು ಶರ ಶಯ್ಯೆಯಲ್ಲಿರುವಾಗಸಂಜೆ ನಡೆಯುವ ಸತ್ಸಂಗದಲ್ಲಿ ಕೇಳುವ ಪ್ರಶ್ನೆ. ಒಬ್ಬನೇ ದೇವನಾರುಎಲ್ಲಕ್ಕಿಂತ ಮಿಗಿಲಾದ ಧರ್ಮವಾವುದುಎಂಬ ಸಂದೇಹಗಳು ಧರ್ಮರಾಯನಿಗೇ ಬರುವುದಾದರೆಇನ್ನು ನಮಗೆ ಎಂತಹ ಸಂದೇಹಗಳು ಬರಬೇಕು ಹೇಳಿಇದು ಸಹಜ. ಈ ಸೃಷ್ಟಿಯ ರಹಸ್ಯವನ್ನು ಛೇಧಿಸಲು ಅಷ್ಟು ಸುಲಭವೇ?
ದೇವನೊಬ್ಬ ನಾಮ ಹಲವು ಎಂಬ ಮಾತು ಎಲ್ಲರಿಗೂ ಗೊತ್ತಿರುವುದೇ. ಆದರೆ ಆ ದೇವನಾರುಮೂರ್ತರೂಪದಲ್ಲಿಹನೆ ಅಥವಾ ಅಮೂರ್ಥನೆ ಅಂದರೆ ಆಕಾರ ಉಂಟೆ ಇಲ್ಲವೇ ಜಗತ್ತಿಗೆ ಮತ್ತು ಜಗತ್ತಿನ ಜೀವಿಗಳಿಗೆ ಅವನು ನಾಯಕನೇಧರ್ಮಕ್ಕೆ ನಮ್ಮಲ್ಲಿ ಬಹಳ ಪ್ರಾಧಾನ್ಯವಿದೆ. ಧರ್ಮವೆಂದರೆ ಒಂದು ವಸ್ತುವಿನ ಸ್ವಭಾವ ಎನ್ನುವ ಅರ್ಥವೂ ಇದೆ. ಹಾಗೆಯೆ ಧರ್ಮಕ್ಕೆ ಬೇರೆ ಬೇರೆಯವರು ಬೇರೆ ಬೇರೆ ರೀತಿಯಲ್ಲಿ ವ್ಯಾಕ್ಯಾನ ಮಾಡಿದ್ದಾರೆ .ಹಾಗಾಗಿ ಜಗತ್ತಿನಲ್ಲಿ ಇಷ್ಟೊಂದು ಭಿನ್ನ ಭಿನ್ನ ಮತಗಳು. ಅಂತ ಧರ್ಮವೇ ಈ ಜಗತ್ತಿನ ನಾಯಕನೇ ವಿಧಿ ಎಂದರೆ ಪೂರ್ವ ನಿಯಮಿತ ಕ್ರಮ ಎಂದು ಅರ್ಥ. ಮೊದಲೇ ವಿಧಿಸಿದ ಬಗೆ. ಹಣೆಯ ಬರಹವೆಂದೂ ಅನ್ನುತ್ತಾರೆ. ನಮ್ಮ ಬದುಕನ್ನು ನಡೆಸುವುದು ಈ ಹಣೆಯ ಬರಹವೇ ಯಾವುದಾದರೂ ಆಗಲಿ ಅಥವಾ ಇರಲಿಈ ಜಗತ್ತಿನ ಅಸಮತೆಅಸಮಾನತೆವೈಚಿತ್ರ್ಯಅಥವಾ ಅವ್ಯವಸ್ಥೆಯು ಸರಿಯಾಗುವ ಬಗೆ ಇದೆಯೋ ಇಲ್ಲವೋ ಅಥವಾ ಇದನ್ನು ಅರಿಯುವ ಮತ್ತು ನಿರ್ಧರಿಸುವ ತಳಮಳದಲ್ಲಿಯೇ ನಾವು ಎಂದಿಗೂ ಇರಬೇಕೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ
ದೇವರನ್ನೇ ನಂಬುವದೇವರನ್ನು ಮತ್ತು ಧರ್ಮವನ್ನು ನಂಬುವ (ಇಲ್ಲಿ ಧರ್ಮ ಬೇರೆಯಲ್ಲ ದೇವರು ಬೇರೆಯಲ್ಲ ಎಂಬ ವಾದ ಮಾಡುವವರೂ ಉಂಟು) ದೇವರನ್ನು ಮತ್ತು ವಿಧಿಯನ್ನುಎಂದರೆ ಹಣೆಬರಹವನ್ನೇ ನಂಬುವ ಮತ್ತು ತಮ್ಮ ಸ್ವಶಕ್ತಿಯನ್ನೇ ನಂಬುವ ಎಲ್ಲ ರೀತಿಯ ಜನರು ಜಗತ್ತಿನ ಎಲ್ಲೆಡೆಯಲ್ಲೂಎಲ್ಲ ಮತಗಳಲ್ಲೂ ಇದ್ದಾರೆ. ಕಾರಣವೇ ತಿಳಿಯದಈಜಗತ್ತಿನ ಅಸಮಾನತೆ ಜಗತ್ತಿನಲ್ಲಿ ಎಲ್ಲೆಲ್ಲೂ ಇದೆ ಅಲ್ಲವೆ ಇದು ಏಕೆ ಹೀಗೆಇದು ಸರಿಯಾಗುವುದೋ ಇಲ್ಲವೋ ಎನ್ನುವ ನೆನೆಗುದಿಯಲ್ಲೇ ಮಾನವರು ಬದುಕು ದೂಡುತ್ತಿದ್ದಾರೆ. ಇಂತಹ ಭಾವಗಳನ್ನೇ ವ್ಯಕ್ತಪಡಿಸುತ್ತಾರೆ ಮಾನ್ಯ ಗುಂಡಪ್ಪನವರು.
ಇಂತಹ ಸಂದೇಹಗಳು ನಮ್ಮ ನಿಮ್ಮ ಮತ್ತು ಸಕಲರಲ್ಲೂ ಉಂಟಾಗುತ್ತದಲ್ಲವೇ?
ರಸಧಾರೆ - 008
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
ಭ್ರಮಿಪುದೇನಾಗಾಗ ಕರ್ತೃವಿನ ಮನಸು?
ಮಮತೆಯುಳ್ಳವನಾತನಾದೊಡೀ ಜೀವಗಳು
ಶ್ರಮಪಡುವುದೇಕಿಂತು -ಮಂಕುತಿಮ್ಮ ?
ಕ್ರಮವು ಒಂದು ಲಕ್ಷ್ಯವು ಒಂದು ಉಂಟೇನು ಸೃಷ್ಟಿಯಲಿ ಭ್ರಮಿಪುದು ಅದೇನು ಆಗಾಗ ಕರ್ತೃವಿನ ಮನಸು
ಮಮತೆಯುಳ್ಳವನು ಆತನು ಆದೊಡೆ ಜೀವಗಳು ಶ್ರಮಪದುವುದೇಕೆ ಇಂತು  ಮಂಕುತಿಮ್ಮ
ಕ್ರಮವು = ರೀತಿಲಕ್ಷ್ಯವು = ಗುರಿ(purpose ), ಭ್ರಮಿಪುದು = ವಿಕಾರಗೊಳ್ಳುವುದು ಅಥವಾ ವಿಚಲಿತವಾಗುವುದು,
ಕರ್ತೃ = ಜಗತ್ತನ್ನು ಸೃಷ್ಟಿದವ ಆದೊಡೆ= ಆದರೆಶ್ರಮ = ಕಷ್ಟ .
ಇಲ್ಲಿ ಗುಂಡಪ್ಪನವರು ಕೇಳುವ ಪ್ರಶ್ನೆ ಹೀಗಿದೆ
” ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ ಸೃಷ್ಟಿಕರ್ತನ ಮನಸ್ಸು ಏಕೆ ಆಗಾಗ ವಿಚಲಿತವಾಗಿ ಎಲ್ಲೆಲ್ಲೋ ಹರಿದಾಡುತ್ತದೆ. ?
ತಾನು ಸೃಷ್ಟಿಸಿದ ಜೀವಿಗಳ ಮೇಲೆ ಅವನಿಗೆ ಪ್ರೀತಿ ವಾತ್ಸಲ್ಯಗಳು ಇರುವುದಾದರೆ ಈ ಜೀವಿಗಳು ಏತಕ್ಕಾಗಿ ಈ ರೀತಿಯ ಕಷ್ಟಗಳನ್ನು ಅನುಭವಿಸುತ್ತವೆ?
ಗುಂಡಪ್ಪನವರ ಮನಕರಗಿ ಇಂತಹ ಪ್ರಶ್ನೆಗಳನ್ನು ತಮ್ಮನ್ನು ತಾವೇ ಕೇಳಿಕೊಳ್ಳುತ್ತಾಓದುಗರ ಮುಂದಿಡುತ್ತಾರೆ. ಇಡೀ ಜಗತ್ತಿನ ಆಗು ಹೋಗುಗಳಿಗೆ ಏನಾದರೂ ಒಂದು ಕ್ರಮವಿದೆಯೇ ಎಂದು ಅವರ ಪ್ರಶ್ನೆ. ಇದೆ ಎಂದು ಹೇಳಬಹುದು. ಹಗಲು ರಾತ್ರಿಗಳು ಭೂಮಿಯ ಸುತ್ತುವಿಕೆಯಿಂದ ಆಗುತ್ತದೆ. ಭೂಮಿಯೂ ಒಂದು ಲೆಕ್ಕಾಚಾರದಲ್ಲೇ ಸುತ್ತುತ್ತದೆ. ಹಾಗೆ ಸುತ್ತುವುದರಿಂದ ಋತುಮಾನಗಳು. ಬಿಸಿಲುಮಳೆಚಳಿ ಮತ್ತು ಗಾಳಿ ಕಾಲಗಳು. ಬೆಳೆಗಳುಹೂಹಣ್ಣುಗಳಿಗೂ ಒಂದೊಂದು ಕಾಲ.
ಆದರೂ ಆಗಾಗ ನಮಗರಿಯದಂತ ವ್ಯತ್ಯಾಸಗಳು ಆಗುತ್ತವೆ. ಅತೀವೃಷ್ಟಿ- ಅನಾವೃಷ್ಟಿಗಳುಜ್ವಾಲಾಮುಖಿಗಳುಭೂಕಂಪಗಳುಯುದ್ಧಗಳುಹೀಗೆ ಮಾನವನಿಗೆ ಮತ್ತು ಜೀವಿಗಳಿಗೆ ಮಾರಕವಾದ ನೈಸರ್ಗಿಕ ವಿಧ್ಯಮಾನಗಳು ನಡೆಯುವಾಗ ಏಕೆ ಈ ಭಗವಂತನ ಸೃಷ್ಟಿಯಲಿ ಒಂದು ಕ್ರಮವೇ ಇಲ್ಲವೇ ಮತ್ತು ಇದನ್ನೆಲ್ಲಾ ಆಗಗೊಡುವ ಆ ಪರಮಾತ್ಮನ ಮನಸ್ಸು ಏಕೆ ವಿಚಲಿತಗೊಳ್ಳುತ್ತದೆ ಎಂಬ ಪ್ರಶ್ನೆ ಸಹಜವಾಗೇ ಮೂಡುತ್ತದೆ. ಅಂತಹ ಪ್ರಶ್ನೆಯನ್ನೇ ಡಿ.ವಿ.ಜಿ. ಯವರು ಕೇಳುತ್ತಾರೆ.
ಆದರೆ ಈ ಜಗತ್ತಿನಲ್ಲಿ ನಡೆಯುವ ಜೀವನದ ನಾಟಕದಲ್ಲಿ ಒಬ್ಬೊಬ್ಬರು ಒಂದು ರೀತಿ. ಒಬ್ಬರಂತೆ ಒಬ್ಬರಿಲ್ಲಒಬ್ಬರ ಯೋಚನೆಯಂತೆ ಮತ್ತೊಬ್ಬರದಿಲ್ಲಪ್ರತಿಯೊಬ್ಬರ ಆಸೆ ಆಕಾಂಕ್ಷೆಗಳೂ ಭಿನ್ನ ಭಿನ್ನ ಅಲ್ಲವೇಅವನ ಬುದ್ಧಿ ಏಕೆ ಹಾಗೆ ಭಿನ್ನ ಭಿನ್ನ ಎನ್ನುವುದಕ್ಕೆ ವಿಜ್ಞಾನಿಗಳುಶಾಸ್ತ್ರಜ್ಞರೂತತ್ವವೇತ್ತರೂ ಸಹ ಭಿನ್ನ ಭಿನ್ನವಾದ ವ್ಯಾಖ್ಯಾನಮಾಡುತ್ತಾರೆ. ಹಾಗಾಗಿ ಭಿನ್ನತೆಯೇ ಜೀವನದ ಲಕ್ಷಣ ಅಥವಾ ಗುಣ.
ಈ ಭಿನ್ನತೆಗೂ ಆ ಪರಮಾತ್ಮನೇ ಕಾರಣನೋಎಂದರೆ. ಅಹುದು ಮತ್ತು ಅಲ್ಲ. ಇಲ್ಲಿ ಎರಡು ವಿಚಾರಗಳಿವೆ. ಒಂದು ” ಎಲ್ಲವೂ ಪರಮಾತ್ಮನ ಇಚ್ಚೆಯಂತೆ ನಡೆಯುತ್ತದೆ” ಎಂದರೆ ಈ ಭಿನ್ನತೆಯೂ ಅವನ ಇಚ್ಚೆಯಂತೆಯೆ ಎಂದು ಆಯಿತು. ” ಪ್ರತಿ ಜೀವಿಯೂ ಅವನವನ ಕರ್ಮಕ್ಕನುಗುಣವಾಗಿ ಫಲಾಫಲಗಳನ್ನು ಪಡೆದು ಜೀವಿಸುತ್ತಾನೆ ” ಎಂದಾದರೆ ಇಲ್ಲಿಪರಮಾತ್ಮನ ಪ್ರಮೇಯ ಕಡಿಮೆ. ಆದರೆ ಇದೋ” ಅಥವಾ ಅದೋ” ಎನ್ನುವ ದ್ವಂದ್ವ ಸಹ ಸದಾ ಮಹಾ ಮಹಾ ಪಂಡಿತರನ್ನೇ ಕಾಡಿದೆಮತ್ತು ಇಂದಿಗೂ ಇತ್ಯರ್ಥವಾಗದೆ ಉಳಿದಿದೆ.
ಈ ಕಗ್ಗಕ್ಕೆ ಮತ್ತು ಈ ಕಗ್ಗದ ಹಿಂದಿನ ನಾಲ್ಕು ಕಗ್ಗಗಳಿಗೂ ಮತ್ತು ಮುಂದೆ ಬರುವ ಕಗ್ಗಗಳಿಗೂ ಒಂದು ಹಿನ್ನೆಲೆಯುಂಟು. ಗುಂಡಪ್ಪನವರು ಈ ಕಗ್ಗವನ್ನು ಮೊದಲು ಪ್ರಕಟಿಸಿದ್ದು ೧೯೪೨ರಲ್ಲಿ. ಆಗ ಜಗತ್ತಿನೆಲ್ಲೆಲ್ಲೂ ಬರಅನಾವೃಷ್ಟಿ ೨ನೆ ವಿಶ್ವ ಯುದ್ಧದ ಕಾಲ. ಎಲ್ಲೆಲ್ಲೂ ಹಾಹಾಕಾರಆಕ್ರಂದನಬಡತನ ಆಹಾರದ ಕೊರತೆರೋಗ ರುಜಿನಗಳ ಮಹಾಪೂರ ಹೀಗೆ ಹತ್ತು ಹಲವಾರು ಪ್ರಕೊಪಗಳಿಗೆ ಬಲಿಯಾಗಿ ಜನರು ತೊಳಲಾಡುತ್ತಿದ್ದರು. ಹಾಗಾಗಿ ಡಿ.ವಿ.ಜಿ. ಯವರು ಅಂದಿನ ಪರಿಸ್ತಿತಿಗೆ ಪ್ರತಿಕ್ರಿಯೆಯ ರೂಪದಲ್ಲಿ ಪರಮಾತ್ಮನು ಎಲ್ಲರನ್ನೂ ಸೃಷ್ಟಿಸಿಎಲ್ಲರಲ್ಲೂ ಸಮಾನವಾದ ಪ್ರೀತಿ ಇದ್ದರೆ ಈ ರೀತಿಯ ಸಂಕಷ್ಟಗಳು ಜನರಿಗೆ ಏಕೆ ಎಂಬಂತಹ ಕರುಣಾ ಪೂರಿತವಾದ ಪ್ರಶ್ನೆಗಳನ್ನು ತಮ್ಮನ್ನು ತಾವೇ ಕೇಳಿಕೊಳ್ಳುತ್ತಾರೆ.
ಆದರೆ ವಾಚಕ ಮಿತ್ರರೇಅಂದಿನ ಸ್ಥಿತಿಗೂ ಇಂದಿನ ಸ್ಥಿತಿಗೂ ಏನೂ ವ್ಯತ್ಯಾಸವಿಲ್ಲ. ಪ್ರಪಂಚದಲ್ಲಿ ಮಾನವನ ಜೀವನ ಇನ್ನಷ್ಟು ಕ್ಲಿಷ್ಟವಾಗಿದೆಇನ್ನಷ್ಟು ಹದಗೆಟ್ಟಿದೆಸ್ವಾರ್ಥದ ಬುದ್ಧಿ ಇನ್ನಷ್ಟು ಬಲವಾಗಿದೆದೇಶ ದೇಶಗಳನಡುವೆ ದ್ವೇಷದ ಭಾವ ಇನ್ನೂ ಹಾಗೆ ಇದೆ. ಹಳೆಯದನ್ನು ಮರೆತುಪ್ರೀತಿ ವಿಶ್ವಾಸದಲಿತೃಪ್ತಿ ಸಂತೋಷದಲಿ ಬದುಕಿ ಪ್ರಗತಿಯತ್ತ ಹೋಗಲು ಯಾರಿಗೂ ಇಷ್ಟವಿಲ್ಲ. ಹಾಗಾಗಿ ಮಾನ್ಯ ಗುಂಡಪ್ಪನವರು ಅಂದು ಕೇಳಿದ ಪ್ರಶ್ನೆಗಳು ಇಂದಿಗೂ ಪ್ರಸ್ತುತ.
ಹಾಗಾಗಿ ಅವರ ವಿಚಾರಗಳನ್ನು ನಮ್ಮ ಮನಸ್ಸುಗಳಲ್ಲೂ ವಿಚಾರದ ಓರಗೆ ಹಚ್ಚಿ ನೋಡೋಣ ಬನ್ನಿ ಮಿತ್ರರೇ.
ರಸಧಾರೆ - 009
ಏನು ಭೈರವಲೀಲೆಯೀ ವಿಶ್ವಭ್ರಮಣೆ!
ಏನು ಭೂತಗ್ರಾಮನರ್ತನೋನ್ಮಾದ ! |
ಏನಗ್ನಿ ಗೋಳಗಳು ! ಏನಂತರಾಳಗಳು !
ಏನು ವಿಸ್ಮಯ ಸೃಷ್ಟಿ!  ಮಂಕುತಿಮ್ಮ ||
ಭೈರವಲೀಲೆಯೀ = ಭೈರವ + ಲೀಲೆಯು + ಈ ಭೂತಗ್ರಾಮನರ್ತನೋನ್ಮಾದ = ಭೂತ + ಗ್ರಾಮ + ನರ್ತನ + ಉನ್ಮಾದಏನಗ್ನಿ = ಏನು+ ಅಗ್ನಿ
ಬೈರವ = ಪರಮ ಶಿವರುದ್ರಉನ್ಮಾದ = ಉದ್ವೇಗಗೋಳ = ಉಂಡೆವಿಸ್ಮಯ = ಆಶ್ಚರ್ಯ.
ಏನಿದು ಭೈರವ ಲೀಲೆ. ಏನಿದು ಇಡೀ ವಿಶ್ವದ ಸುತ್ತಾಟ. ಏನಿದು ಪಂಚ ಮಹಾ ಭೂತಗಳ ಮತ್ತು ಆ ಭೂತಗಳ ವಾಸಸ್ಥಳವಾದ ಆ ಮಹಾ ಚೈತನ್ಯ ಮತ್ತು ಮತ್ತು ಆ ಚೈತನ್ಯದ ಉನ್ಮಾದಭರಿತ ನರ್ತನ. ಏನಿದು ಅಗ್ನಿ ಗೋಳಗಳು ಈ ಸೃಷ್ಟಿಯ ಅಂತರಾಳ. ಆಹಾ ಎಂತಹ ಈ ವಿಸ್ಮಯ ಈ ಸೃಷ್ಟಿ. ಇದು ಈ ಕಗ್ಗದ ಅಂತರ್ಯದ ಭಾವ.
ರುದ್ರ ತಾಂಡವ ಎನ್ನುವ ಅರ್ಥದಲ್ಲಿ ಈ ವಿಶ್ವದ ಸೃಷ್ಟಿಯನ್ನು ವಿಸ್ಮಯವೆಂದು ಕರೆಯುತ್ತಾರೆ ಶ್ರೀ ಗುಂಡಪ್ಪನವರು. ಹೌದು ಇದು ವಿಸ್ಮಯವೇ ಸರಿ. ಆ ಹಿಂದೆಯೇ ವಿವರಿಸಿದಂತೆ ಸೌರವ್ಯೂಹಗಳುಕ್ಷೀರಪಥಗಳುಆಕಾಶಗಂಗೆಗಳು ಮತ್ತು ಇಡೀ ವಿಶ್ವ. ಈ ವಿಶ್ವದ ಅಂತರ್ಯದಲ್ಲಿ ನಡೆಯುವ ಅಗ್ನಿಸ್ಪೋಟಗಳುಹೊಸ ಹೊಸ ನಕ್ಷತ್ರಗಳಗ್ರಹಗಳ ಹುಟ್ಟುಸಿಡಿತಒಂದರೊಳಗೆ ಒಂದು ವಿಲೀನವಾಗುವ ಪ್ರಕ್ರಿಯೆಇವೆಲ್ಲವನ್ನೂ ನಾವು ಕಾಣುವುದಿರಲಿಊಹಿಸಲೂ ಅಸಾಧ್ಯವಾದ ರೂಪ. ಅದನ್ನು ಪರಶಿವನ ಅಥವಾ ನಟರಾಜನ ರುದ್ರ ತಾಂಡವಕ್ಕೆ ಹೋಲಿಸುತ್ತಾರೆ. ಈ ಸೃಷ್ಟಿಸೃಷ್ಟಿಯಲ್ಲಿನ ಪಂಚ ಮಹಾಭೂತಗಳು ಮತ್ತು ಅವುಗಳ ಕಾರ್ಯ ವೈಖರಿಯಾವುದೂ ಸಹಊಹಾತೀತ. ಇದೊಂದು ಯಾರಿಗೂ ಅರ್ಥವಾಗದ ವಿಸ್ಮಯವೆನ್ನುತ್ತಾರೆ ಮಾನ್ಯ ಗುಂಡಪ್ಪನವರು.
152 ದಶಲಕ್ಷ ಕಿಲೋ ಮೀಟರ್ ದೂರದಲ್ಲಿರುವ ನಮ್ಮ ಸೌರಮಂಡಲದ ಸೂರ್ಯನಿಂದ ಹೊರಟ ಬೆಳಕು ಭೂಮಿಯನ್ನು ತಲುಪಲು ಬೇಕಾಗುವ ಸಮಯ 8 .28 ನಿಮಿಷಗಳು. ಸೂರ್ಯ ಒಂದು ನಕ್ಷತ್ರ. ನಮಗೆ ಆಕಾಶದಲ್ಲಿ ಕಾಣುವ ಅನ್ಯ ಅನೇಕ ನಕ್ಷತ್ರಗಳಂತೆ. 152 ದಶಲಕ್ಷ ಕಿಲೋ ಮೀಟರ್ ದೂರದಲ್ಲಿದ್ದರೂ ಇಷ್ಟು ಹತ್ತಿರದಲ್ಲಿ ಕಂಡಂತೆ ಕಂಡು ಇಷ್ಟು ಬೆಳಕನ್ನು ಮತ್ತು ಶಾಖವನ್ನು ನೀಡುತ್ತಾನೆ ಈ ನಮ್ಮ ಸೂರ್ಯನೆಂಬ ನಕ್ಷತ್ರ. ಬೇಸಿಗೆ ಕಾಲದಲ್ಲಿ ಅವನ ಶಾಕವನ್ನು ತಡೆಯಲಾರದೆ ಸಾವನ್ನಪ್ಪುವ ಜನರೆಷ್ಟೋ.! ಇದನ್ನೇ ಅಗ್ನಿ ಗೋಳವೆಂದರು ಶ್ರೀ ಗುಂಡಪ್ಪನವರು.
ವಾಚಕರೆ ಯೋಚಿಸಿಇಷ್ಟು ಹತ್ತಿರ ಕಾಣುವ ನಮ್ಮ ಸೂರ್ಯನೇ 152 ದಶಲಕ್ಷ ಕಿಲೋ ಮೀಟರ್ ದೂರದಲ್ಲಿದ್ದಾನೆಂದರೆಇನ್ನು ನಮ್ಮ ಕಣ್ಣಿಗೆ ಬೆಳ್ಳಿ ಚುಕ್ಕಿಯಂತೆ ಕಾಣುವ ಎಷ್ಟೋ ನಕ್ಷತ್ರಗಳು ಎಷ್ಟು ದೂರದಲ್ಲಿರಬೇಕುನಮ್ಮ ಸೌರಮಂಡಲದ ಸೂರ್ಯನ ನಂತರ ನಮಗೆ ಹತ್ತಿರದಲ್ಲಿರುವ ನಕ್ಷತ್ರವೆಂದರೆ ಆಲ್ಫಾ ಸೆಂಚ್ಯುರಿ ಅಥವಾ ಮ್ಯಾಗ್ಜಿಮಾ ಸೆಂಚ್ಯುರಿ . ಇದು ನಮಗೆ ಎಷ್ಟು ದೂರದಲ್ಲಿದೆಯೆಂದರೆಅಲ್ಲಿಂದ ಹೊರಟ ಬೆಳಕು ನಮ್ಮ ಭೂಮಿಯನ್ನು ತಲುಪಬೇಕಾದರೆ 4 .7 ವರ್ಷಗಳು ಬೇಕಾಗುತ್ತದೆ. ಇನ್ನೂ ದೂರದಲ್ಲಿರುವ ನಕ್ಷತ್ರಗಳ ದೂರವೆಷ್ಟೋನಮಗೆ ಕಾಣದಿರುವ ನಕ್ಷತ್ರಪುಂಜಗಳೆಷ್ಟೋ!! ಅಂದರೆ ಈಗ ನಾವು ಒಂದು ನಕ್ಷತ್ರವನ್ನು ನೋಡುತ್ತಿದ್ದೇವೆ ಎಂದರೆ ಅಲ್ಲಿಂದ ಎಂದೋ ಹೊರಟ ಬೆಳಕನ್ನು ನಾವು ಇಂದು ನೋಡುತ್ತಿದ್ದೇವೆ. ಹಾಗೆ ನಮಗೆ ಕಾಣುವ ಅತೀ ದೂರದ ನಕ್ಷತ್ರ ನಮಗಿಂತ ಎಷ್ಟು ದೂರದಲ್ಲಿರಬಹುದು. ಕಾಣುವುದೇ ಎಷ್ಟೋ ದೂರದಲ್ಲಿದ್ದರೆ ಕಾಣದ್ದೆಷ್ಟೋ ಯಾರಿಗೆ ಗೊತ್ತು. ಇಂತಹ ವಿಶ್ವನಮ್ಮ ಯೋಚನೆಗೂ ನಿಲುಕದ ಅದ್ಭುತ ಸೃಷ್ಟಿ.
ಈ ಸೃಷ್ಟಿಯ ಗೂಢ ನಿಗೂಢ ವಿಸ್ಮಯಗಳು.ಅಬ್ಬ! ಎಂತಹ ವಿಚಿತ್ರ. ಇದನ್ನೇ ಗುಂಡಪ್ಪನವರು ವಿಸ್ಮಯ ಅಥವಾ ವಿಚಿತ್ರವೆನ್ನುತ್ತಾರೆ. ಈ ಸೃಷ್ಟಿಯನ್ನು ಒಂದು ಸೂತ್ರದಲ್ಲಿ ಹಿಡಿದಿಟ್ಟಿರುವ ಆ ಪರಮ ಶಕ್ತಿ. ಇವುಗಳ ಮುಂದೆ ನಾವೆಷ್ಟರವರುನಮ್ಮ ಸಾಮರ್ಥ್ಯದ ಮಿತಿ ಏನುನಾವು ಅಹಂಕಾರಪಡಲು ಏನಾದರೂ ಕಾರಣವಿದೆಯೇಯೋಚಿಸಿ ವಾಚಕರೆ.
ಈ ವಿಸ್ಮಯಭರಿತ ಮತ್ತು ವಿಚಿತ್ರವಾದ ವಿಶ್ವಅದರ ನಿಗೂಢತೆ ಮತ್ತು ಇದರ ಸೃಷ್ಟಿಕರ್ತನ ಸಾಮರ್ತ್ಯಗಳ ಬಗ್ಗೆ ಆಲೋಚಿಸುತ್ತಾ ನಾವೆಲ್ಲರೂ ಮುಂದಿನ ಕಗ್ಗಕ್ಕೆ ಹೋಗುವ.
ರಸಧಾರೆ - 010
ಏನು ಪ್ರಪಂಚವಿದು! ಏನು ಧಾಳಾಧಾಳಿ|
ಏನದ್ಭುತಾಪಾರಶಕ್ತಿ ನಿರ್ಘಾತ! ||
ಮಾನವನ ಗುರಿಯೇನುಬೆಲೆಯೇನು?ಮುಗಿವೇನು? |
ಏನರ್ಥವಿದಕೆಲ್ಲ ಮಂಕುತಿಮ್ಮ ||
ಏನದ್ಭುತಾಪಾರಶಕ್ತಿ ನಿರ್ಘಾತ = ಏನು ಅದ್ಭುತ + ಅಪಾರ+ ಶಕ್ತಿನಿಘಾತ = ಹೊಡೆತ.
ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿಮೊದಲ ಮೂರು ಕಗ್ಗಗಳಲಿಶ್ರೀ ಗುಂಡಪ್ಪನವರುಆ ಪರಮಾತ್ಮನೆಂದೆನಿಸಿಕೊಂಡಪರಮಶಕ್ತಿಗೆ ನಮಿಸುತ್ತಾಮುಂದಿನ ಕಗ್ಗಗಳಲ್ಲಿಮನುಷ್ಯನ ಜೀವನದ ಮತ್ತು ಸೃಷ್ಟಿಯ ವಿಚಿತ್ರಗಳನ್ನು ಬರೆದಿದ್ದಾರೆ. ಈ ಸಮಯಕ್ಕೆ ನಾ ಹಿಂದೆ ಹೇಳಿದಂತೆ ಎರಡನೇ ಮಹಾ ಯುದ್ಧ ಆರಂಭವಾಗಿ ಎಲ್ಲೆಲ್ಲೂ ಹಾಹಾಕಾರ ದಾಳಿಗಳು. ಇವಗಳನ್ನು ಕಂಡು ಅಂದಿನ ಸಮಯಕ್ಕೆ ಅವರ ಅನುಭೂತಿ ಏನಿತ್ತು ಎಂಬುದು ಇಂದಿನ ಮತ್ತು ಮುಂದಿನ ಕೆಲವು ಕಗ್ಗಗಳಲ್ಲಿ ಕಾಣಬಹುದು.
ಈ ಪ್ರಪಂಚಕ್ಕೆ ಏನಾಗಿದೆಏಕೆ ಈ ಮುತ್ತಿಗೆಗಳುಏನು ಈ ಹೊಡೆತಗಳು ಮತ್ತು ಆ ಹೊಡೆತಗಳ ಹಿಂದಿನ ಅಪಾರ ಶಕ್ತಿ ಏನು ?ಮಾನವನ ಗುರಿಯೇನುಇದಕ್ಕೆಲ್ಲ ಬೆಲೆಯೇನುಇದಕ್ಕೆಲ್ಲ ಅಂತ್ಯವೇನುಮತ್ತು ಇದಕ್ಕೆಲ್ಲ ಏನು ಅರ್ಥ ಎಂಬ ಬಾವಗಳನ್ನು ವ್ಯಕ್ತ ಪಡಿಸುತ್ತಾ ಅಂದು ನಡೆಯುತ್ತಿದ್ದ ಪ್ರಾಪಂಚಿಂಕ ವಿಧ್ಯಮಾನಗಳನೆಲ್ಲ ಒಟ್ಟುಗೂಡಿಸಿ ಹಲವು ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತಾರೆ.
ಯಾರೋ ಒಬ್ಬ ಸರ್ವಾಧಿಕಾರಿಯ ಅಧಿಕಾರ ದಾಹಅಧಿಕಾರವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆ ಮತ್ತು ಅಹಂಕಾರವನ್ನು ತಣಿಸುವ ಅತೀ ಆಸೆಗೆ ಬಲಿಯಾದದ್ದು ಇಡೀ ವಿಶ್ವ. ಒಂದು ರಾಷ್ಟ್ರ ಮತ್ತೊಂದು ರಾಷ್ಟ್ರದಮೇಲೆ ದಾಳಿ. ಆ ರಾಷ್ಟ್ರಕ್ಕೆ ಕೆಲವು ಮತ್ತು ಈ ರಾಷ್ಟ್ರಕ್ಕೆ ಕೆಲವು ರಾಷ್ಟ್ರಗಳು ಸಹಾಯಕ್ಕೆ ನಿಲ್ಲುತ್ತವೆ. ಆಗ ಆ ಎರಡು ರಾಷ್ಟ್ರಗಳು ಮತ್ತು ಆ ರಾಷ್ಟ್ರಗಳ ಸಹಾಯಕ್ಕೆ ನಿಂತ ಬೇರೆ ರಾಷ್ಟ್ರಗಳ ಎಲ್ಲ ಸೈನಿಕರೂ ಹೊಡೆದಾಡುತ್ತಾರೆ. ಯಾರೋ ಯಾರ ಮೇಲೋ ದಾಳಿ. ದಾಳಿಗೊಳಗಾದ ರಾಷ್ಟ್ರಕ್ಕಾಗಲೀ ದಾಳಿಮಾಡಿದ ರಾಷ್ಟ್ರಕ್ಕಾಗಲೀ ದಾಳಿಯ ಕಾರಣವೇ ಗೊತ್ತಿಲ್ಲ. ಹೊಡೆದಾಡುವುದುಪಾಪ ಮುಗ್ದ ಸೈನಿಕರು. ಕೇವಲ ಜೀವಿಕೆಗಾಗಿ.
ಇದು ಮಾನವನ ಜೀವನದ ಇತಿಹಾಸದಲ್ಲಿ ನಿರಂತಾರವಾಗಿ ನಡೆದಿದೆ. ಕ್ರಿಸ್ತಪೂರ್ವ ಸುಮಾರು ೩೨೫ ವರ್ಷದಲ್ಲಿ ಅಲೆಕ್ಸಾಂಡರನ ವಿಶ್ವ ವಿಜಯ ಯಾತ್ರೆಯಿಂದ ಹಿಡಿದುಇಂದಿನವರೆಗೆ ನಡೆದ ಯುದ್ಧಗಳು ಆಯಾಯಾ ರಾಷ್ಟ್ರಗಳ ನಾಯಕರ ಭೌದ್ಧಿಕ ಮತ್ತು ನೈತಿಕ (intellectual & moral) ದಿವಾಳಿತನದಿಂದಲೇ ನಡೆದಿದೆ ಅಲ್ಲವೆ.
ಅಂತಹ ಒಂದು ಸ್ಥಿತಿಯೇ ೨ನೆ ಮಹಾಯುದ್ಧದ ಕಾಲದಲ್ಲಿ ಹಿಟ್ಲರನ ತಿಳಿಗೇಡಿತನದಿಂದಾಗಿ ಆರಂಭವಾಗಿ ವಿಶ್ವವೆಲ್ಲ ಹರಡಿ ಹಲಕೆಲವರು ಕೆಲಕೆಲವರ ಪಕ್ಷ ಹಿಡಿದು ಹೋರಾಡಿಇಡೀ ಪ್ರಪಂಚವನ್ನು ವಿನಾಶದಂಚಿಂಗೆ ತಳ್ಳಿದರು ಘನಘೋರ ಯುದ್ಧಅಪಾರ ಶಕ್ತಿಯ ವ್ಯಯಸಾವು ನೋವು. ಪ್ರತಿ ದೇಶಕ್ಕೂ ಯುದ್ಧಕ್ಕಾಗಿ ಅಪಾರ ವೆಚ್ಚ. ಆ ವೆಚ್ಚವನ್ನು ಭರಿಸಲಿಕ್ಕಾಗಿ ಅಧಿಕ ಕರಗಳು ಮತ್ತು ಕರಭಾರದಿಂದ ತತ್ತರಿಸಿದ ಪ್ರಜೆಗಳು. ಯುದ್ಧದಲ್ಲಿ ಸಾವು ನೋವುಗಳು. ಇದು ಸಾಲದೆಂಬಂತೆ ಅಂದು ಇಡೀ ಪ್ರಪಂಚದಲ್ಲೇ ಬರದ ಕರಾಳ ನೃತ್ಯ. ಎಲ್ಲದಕ್ಕೂ ಕೊರತೆಕಾಲರಾ ಪ್ಲೇಗ್ ನಂತಹ ಸೋಂಕು ರೋಗಗಳ ರುದ್ರ ನರ್ತನ. ನೋವು ಮಾತ್ರ ಅಧಿಕ . ಇದನ್ನು ಕಂಡೆ ಗುಂಡಪ್ಪನವರು, “ಮಾನವನ ಗುರಿಯೇನು”? ಎಂದು ಪ್ರಶ್ನಿಸುತ್ತಾರೆ. ಇದಕ್ಕೆಲ್ಲ ಏನು ಅರ್ಥ ಎಂದು ಕೇಳುತ್ತಾರೆ.
ವಾಚಕರೆನಿಮ್ಮಲ್ಲಿ ಬಹಳಷ್ಟು ಜನಗಳಿಗೆ ಗೊತ್ತೋ ಇಲ್ಲವೋ ನನಗೆ ಗೊತ್ತಿಲ್ಲಅಂದು ಅನ್ನಕ್ಕೆ ಬರ.ಬಟ್ಟೆಗೆ ಬರ. ಹಾಲು ನೀರಿಗೂ ಬರ. ಪ್ರತಿ ಊರಿನಲ್ಲೂ ಗಂಜಿ ಕೇಂದ್ರಗಳು. ಪ್ರತಿಯೊಬ್ಬರಿಗೂ ಬೆಳಗ್ಗೆ ಎರಡು ಸೌಟು ಮತ್ತು ಸಂಜೆ ಎರಡು ಸೌಟು. ಬಟ್ಟೆ ಬೇಕಾದರೆಸರ್ಕಾರದಿಂದ ಪರವಾನಗಿ(permit) ತೆಗೆದುಕೊಂಡು ಗುಟ್ಟಲ್ಲಿ ಖರೀದಿ ಮಾಡಬೇಕಾದ ಪರಿಸ್ಥತಿ.
ಅಂತಹ ಪರಸ್ಥಿತಿಗೆ ಅರ್ಥವೇನುಅಂದರೆ ಅರ್ಥಹೀನ ಎಂಬ ರೀತಿ ಗುಂಡಪ್ಪನವರು ಪ್ರಶ್ನಿಸುತ್ತಾರೆ.
ಇಂದು ಕೂಡ ಪರಸ್ಥಿತಿ ಬದಲಾಗಿಲ್ಲ.ಅಂದು ಕೊರತೆಯಿಂದ  ಇಂದು ಆಧಿಕ್ಯದಿಂದ ಮಾನವನಿಗೆ ತೊಂದರೆ. ಅಹಂಕಾರದದ್ವೇಷದಯುದ್ಧಗಳನೋವಿನಕೊರತೆಗಳ ರೂಪ ಬೇರೆ ಅಷ್ಟೇ! ಇಂದು ಕೂಡ ನಾವು ಅಂದು ಅವರು ಕೇಳಿದ ಪ್ರಶ್ನೆಗಳನ್ನೇ ಕೇಳುವ ಸ್ಥತಿ ಇದೆ ಇಲ್ಲವೇ?
ರಸಧಾರೆ - 011
ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ |
ಮೃತ್ಯುಕುಣಿಯುತಲಿಹನು ಕೇಕೆಹಾಕುತಲಿ ||
ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ |
ಎತ್ತಲಿದಕೆಲ್ಲ ಕಡೆ ಮಂಕುತಿಮ್ಮ ||
ಮುತ್ತಿರುವುದು ಇಂದು ಭೂಮಿಯನು ಅದೊಂದು ದುರ್ದೈವ
ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ.
ಸುತ್ತಿಪುದು ತಲೆಯನು ಅನು ದಿನವು ಲೋಕದ ವಾರ್ತೆ
ಎತ್ತಲಿದಕೆಲ್ಲ ಮಂಕು ತಿಮ್ಮ
ಸುತ್ತಿಪುದು = ಸುತ್ತಿಸುತ್ತದೆಅನುದಿನವು = ಪ್ರತಿನಿತ್ಯವುಎತ್ತಲಿದಕೆಲ್ಲ = ಇದಕ್ಕೆಲ್ಲ ಎಲ್ಲಿ.
ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ ಯುದ್ಧ. ಇಡೀ ವಿಶ್ವವೇ ಅಲುಗಾಡುವಂಥ ಯುದ್ಧ. ಎಲ್ಲೆಲ್ಲೂ ರಕ್ತಪಾತ. ಎಲ್ಲೆಲ್ಲೂ ಯುದ್ಧದ ಕೂಗು. ಅದು ಈ ಭೂಮಿಗೆ ಆವರಿಸಿಕೊಂಡ ದುರ್ದೈವವೆಂದು ವ್ಯಾಖ್ಯಾನಿಸುತ್ತಾರೆಮಾನ್ಯ ಗುಂಡಪ್ಪನವರು. ಎಲ್ಲೆಲ್ಲೂ ಮೃತ್ಯುವಿನ ತಾಂಡವ. ಯುದ್ಧದಲ್ಲಿತಂದೆಯನ್ನೂಅಣ್ಣನನ್ನೋಮಗನನ್ನೂಮಿತ್ರನನ್ನೋತಮ್ಮನನ್ನೋಭೂಮಿಯನ್ನೋಹುಟ್ಟಿದೂರಲ್ಲಿ ಬಿಟ್ಟ ಬೇರನ್ನೋಆ ಊರಿನ ಮಣ್ಣಿನ ಋಣವನ್ನೋಕಳೆದುಕೊಂಡವರೆ ಬಹಳ ಜನ. ಕಳೆದುಕೊಂಡವರೆಲ್ಲರಿಗೂ ನೋವು. ಕಳೆದುಕೊಳ್ಳದವರಿಗೂ ಕಳೆದುಕೊಂಡವರ ನೋವಿಗಾಗಿ ಸಂತಾಪ. ಒಟ್ಟಾರೆ ಇಡೀ ಭೂಮಿಗೆ ಸೂತಕದ ಭಾವ. ಎಲ್ಲ ಕಡೆಯಿಂದಲೂ ಸಾವಿನ ನಷ್ಟದ ಸಮಾಚಾರ. ಪ್ರತಿನಿತ್ಯ ಈ ಸಮಾಚಾರಗಳನೆಲ್ಲ ಕೇಳಿ ಕೇಳಿಪತ್ರಿಕೆಗಳಲ್ಲಿ ಓದಿ ಓದಿ ತಲೆ ಸುತ್ತುವಂತಾಗುತ್ತದೆ. ಇದಕ್ಕೆಲ್ಲ ಎಂದಿಗಾದರೂ ಕೊನೆಯುಂಟೆ ಎಂದು ಲೋಕ ಶಾಂತಿಗಾಗಿ ಮರುಗುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
ಆ ಯುದ್ಧದಲ್ಲಿ ಗೆಲುವು ಯಾರದಾಯಿತು ಎಂದು ಯೋಚಿಸಿದರೆಗೆದ್ದದ್ದು ” ಮೃತ್ಯು” ಮತ್ತೆಲ್ಲರೂ ಸೋತವರೇ. ಆ ಯುದ್ಧದಲ್ಲೇ ಅಲ್ಲ ಯಾವುದೇ ಯುದ್ಧವನ್ನು ನಾವು ಸೂಕ್ಷ್ಮವಾಗಿ ಅವಲೋಕಿಸಿದರೆಗೆಲ್ಲುವುದು ಮೃತ್ಯು” ಮಾತ್ರ. ಮಿಕ್ಕೆಲ್ಲರೂಎಲ್ಲ ದೇಶಗಳೂ ಸೋಲುತ್ತವೆ. ಕೇವಲ ಮೃತ್ಯು ಗೆಲ್ಲುತ್ತದೆ. ಎರಡನೇ ಮಹಾ ಯುದ್ಧದ ಸಮಯದಲ್ಲಿ ಕ್ರೂರತ್ವಕ್ಕೆ ಒಂದು ಅಂತ್ಯವೇ ಇರಲಿಲ್ಲ. ಹಿಟ್ಲರನ ರಕ್ತ ದಾಹಕ್ಕೆ ಕೊನೆಯೇ ಇರಲಿಲ್ಲ. ಅದಕ್ಕೊಂದು ನಿದರ್ಶನವೆಂದರೆ ” ಸಾಬಿಬಾರ್ ” ಎಂಬಲ್ಲಿ ವಿಷಾನಿಲ ಘಟಕಗಳನ್ನು ನಿರ್ಮಿಸಿವೈರಿ ದೇಶದ ಸೈನಿಕರಷ್ಟೇ ಅಲ್ಲ ಸೆರೆಸಿಕ್ಕ ಸಾಮಾನ್ಯ ಪ್ರಜೆಗಳನ್ನೂ ಅಲ್ಲಿಗೆ ತಂದುಕೆಲಸಮಾಡಲು ಶಕ್ತಿ ಇರುವವರನ್ನು ಹಲವಾರು ಕೆಲಸಗಳಿಗೆ ಹಚ್ಚಿಕೆಲಸ ಮಾಡಲಾಗದ ಸ್ತ್ರೀಯರುವೃದ್ಧರುಮಕ್ಕಳು ಹೀಗೆ ಎಲ್ಲರನ್ನೂ ಅಮಾನವೀಯ ಕ್ರೌರ್ಯದಿಂದ ಆ ವಿಷಾನಿಲ ಘಟಕದೊಳಕ್ಕೆ ತಳ್ಳಿ ಕೊಂದು ಬಿಡುವ ಪರಮ ನೀಚತನವನ್ನು ಹಿಟ್ಲರ ತೋರಿಸಿದ್ದ. ಅದು ಕ್ರೌರ್ಯದ ಹಲವಾರು ಮಾರ್ಗಗಳಲ್ಲಿ ಒಂದಾಗಿತ್ತು. ಎಲ್ಲ ದೇಶಗಳೂ ಒಂದಲ್ಲ ಒಂದು ದೇಶದ ಪಕ್ಷವನ್ನು ತೆಗೆದುಕೊಂಡು ಇಡೀ ವಿಶ್ವವನ್ನೇ ವಿನಾಶದ ಅಂಚಿಗೆ ತಳ್ಳುವಂಥಾ ಯುದ್ದವನ್ನು ನಡೆಸಿದರು. ಜಪಾನಿನ ಮೇಲೆ ಬಿದ್ದ ಎರಡು ಅಣು ಬಾಂಬುಗಳುಈ ಯುದ್ಧವನ್ನು ಒಂದು ಕೊನೆ ಮುಟ್ಟಿಸಿತು. ಇದು ಚರಿತ್ರೆ.
ಆದರೆ ವರ್ತಮಾನವೇನೂ ಭಿನ್ನವಾಗಿಲ್ಲ. ಇನ್ನೂ ಭೀಕರವಾಗುತ್ತಿದೆ. ಆಗ ಒಂದು ಯುದ್ಧ ನಡೆದರೆಈಗ ಹಲವಾರು ಯುದ್ಧಗಳು. ವೈಜ್ಞಾನಿಕವಾಗಿಆರ್ಥಿಕವಾಗಿ ಮುಂದುವರೆದ ರಾಷ್ಟ್ರಗಳು ಹಿಂದಿರುವ ರಾಷ್ಟ್ರಗಳಮೇಲೆ ಆಧಿಪತ್ಯದಬ್ಬಾಳಿಕೆ. ಷಡ್ಯಂತ್ರಒತ್ತಡಅನವಶ್ಯಕ ಹಸ್ತಕ್ಷೇಪದಿಂದ ಇಂದಿಗೂ ದೇಶದೇಶಗಳ ಮಧ್ಯೆ ದ್ವೇಷದ ಭಾವ ಒಂದಿಷ್ಟೂ ಕಡಿಮೆಯಾಗಿಲ್ಲ. ಜಾತಿಮತಭಾಷೆಎಲ್ಲೆಗಡಿ ಹೀಗೆ ಹೊಡೆದಾಟಕ್ಕೆ ಹಲವಾರು ಕಾರಣಗಳು. ತನ್ನ ಬಲದ ಕಾರಣ ಪರರ ದೇಶಗಳಿಗೆ ಕುಂಟು ನೆಪ ಒಡ್ಡಿ ನುಗ್ಗಿ ಮಾರಣ ಹೋಮ ನಡೆಸಿ ಅಲ್ಲಿರುವ ಸಂಪತ್ತನ್ನು ಲೂಟಿಮಾಡುವ ಪ್ರವೃತ್ತಿ ಸರಿ ಸುಮಾರು ಮೂರು ಸಾವಿರ ವರ್ಷಗಳ ಹಿಂದೆಯೂ ಇತ್ತು. ಇಂದೂ ಇದೆ. ಜನಾಂಗಗಳನ್ನು ಒಂದುಗೂಡಿಸುವುದಕ್ಕೆ ಪೂರಕವಾದ ಜಾತಿಮತಭಾಷೆಗಳೇ ಜನ ಜನರ ಮಧ್ಯೆದೇಶ ದೇಶಗಳ ಮಧ್ಯೆ ವೈರಕ್ಕೆ ಕಾರಣವಾಗಿರುವುದು ಒಂದು ವಿಪರ್ಯಾಸ. ಅಷ್ಟೇ ಅಲ್ಲಅಂದು ಇದ್ದ ಅಸ್ತ್ರ -ಶಶ್ತ್ರಾಸ್ತ್ರ ಗಳಿಗೆ ಹೋಲಿಸಿದರೆ ಇಂದು ಪ್ರಪಂಚದಲ್ಲಿಇಂತಹ ಹತ್ತು ಪ್ರಪಂಚಗಳನ್ನು ನಿಮಿಷದಲ್ಲಿ ಧ್ವಂಸ ಮಾಡಬಲ್ಲ ಮಾರಕಾಸ್ತ್ರಗಳನ್ನು ಹೊಂದಿರುವ ಹಲವಾರು ದೇಶಗಳುಂಟು. ನಮ್ಮಲ್ಲಿ ಬತ್ತಿಯನ್ನು ಕಿತ್ತು ಸಿದ್ಧವಾಗಿರುವ ಅಸ್ತ್ರಗಳುಂಟು. ಬೆಂಕಿ ಕಡ್ಡಿ ಗೀರಬೇಕಷ್ಟೇ. ಸಮಗ್ರವಾಗಿ ಇದನ್ನೆಲ್ಲಾ ಸೇರಿಸಿ ದುರ್ದೈವ ಎಂದರು ಮಾನ್ಯ ಗುಂಡಪ್ಪನವರು.
ಅಂದು ಗುಂಡಪ್ಪನವರು ಖೇದ ವ್ಯಕ್ತಪಡಿಸಿದ ಕಾರಣಗಳು ಇಂದಿಗೂ ಇವೆ. ಅಷ್ಟೇ ಅಲ್ಲ,ಇನ್ನೂ ವಿಕೃತ ರೂಪ ಪಡೆದುಕೊಂಡು ಇಡೀ ಪ್ರಪಂಚವನ್ನೇ ಎತ್ತಕೊಂಡುಹೋಗುತ್ತಿದೆಯೋ ಯಾರು ಬಲ್ಲರು. ಅಂದು ಅಷ್ಟಕ್ಕೇ ಮರುಗಿದ ಗುಂಡಪ್ಪನವರು ಇಂದು ಈ ಸ್ಥಿತಿಯನ್ನು ನೋಡಿದರೆ ಏನು ಹೇಳಿರಬಹುದೆಂದು ಊಹಿಸಲೂ ಕಷ್ಟ.
ಇಂತಹ ವಿಚಾರಗಳನ್ನು ಮಂಥನಮಾಡುತ್ತಒಂದು ಶಾಂತ ಪ್ರಪಂಚವನ್ನು ನಿರ್ಮಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಾನಾವು ಮುಂದಿನ ಕಗ್ಗಕ್ಕೆ ಹೋಗೋಣವೆ?
ರಸಧಾರೆ - 012
ಮಾನವರೋ ದಾನವರೋ ಭೂಮಾತೆಯನು ತಣಿಸೆ
ಶೋಣಿತವನೆರೆಯುವರು ಬಾಷ್ಪಸಲುವುದಿರೆ?
ಏನು ಹಗೆ! ಏನು ಧಗೆ!ಏನು ಹೊಗೆ! ಯೀ ಧರಿಣಿ
ಸೌನಿಕನ ಕಟ್ಟೆಯೇಂ ಮಂಕುತಿಮ್ಮ
ಶೋಣಿತವನೆರೆಯುವರು = ಶೋಣಿತವನು + ಎರೆಯುವರು/ಬಾಷ್ಪಸಲುವುದಿರೆ = ಭಾಷ್ಪ + ಸಲುವುದು + ಇರೆ
ಶೋಣಿತ = ರಕ್ತಭಾಷ್ಪ = ಕಣ್ಣೀರುಎರೆಯುವುದು = ಸುರಿಸುವುದುಸಲುವುದಿರೆ = ಸುರಿಸಬೇಕಾದರೆ. ಸೌನಿಕ = ಕಟುಕ, /ಕಟ್ಟೆ = ಜಗುಲಿ.
ಇವರೇನು ಮನುಷ್ಯರೋ ಅಥವಾ ರಾಕ್ಷಸರೋಈ ಭೂಮಾತೆಯನು ತಣಿಸಲು ಅಂದರೆ ದಾಹವಿಂಗಿಸಲು ಕಣ್ಣೇರು ಸುರಿಸುವಬದಲು ರಕ್ತವನ್ನು ಸುರಿಸಿಹರಲ್ಲ! ಈ ಪ್ರಪಂಚದಲ್ಲಿನ ಹಗೆ ಮತ್ತು ಹೊಗೆಗಳನ್ನು ನೋಡಿದರೆ ಇಡೀ ಪ್ರಪಂಚವೇ ಕಟುಕನ ಜಗುಲಿಯಂತಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
ಮತ್ತದೇ ಯುದ್ಧದ ಸನ್ನಿವೇಶವನ್ನು ಈ ಕಗ್ಗದಲ್ಲೂ ಉಲ್ಲೇಖಿಸುತ್ತಾರೆಶ್ರೀ ಗುಂಡಪ್ಪನವರು. ಪಾಪ ಅವರ ಮನ ಎಷ್ಟು ನೊಂದಿತ್ತೋ ಏನೋಇಲ್ಲದಿದ್ದರೆ ಅಂದಿನ ವರ್ತಮಾನ ಸ್ಥಿತಿಗೆ ಇಷ್ಟೊಂದು ಪ್ರತಿಕ್ರಿಯೆ ಬರುತಿತ್ತೆ.
ಇರಲಿ. ಮಾನವರಾದ ನಾವು ಮಾನವರಂತೆ ಇರದೇ ದಾನವರಂತೆ ಏಕೆ ಒಬ್ಬರಿಗೆ ಮತ್ತೊಬ್ಬರ ರಕ್ತದಾಹ. ಬಾಳುವವನು ಮಾನವ ಎನ್ನುತ್ತದೆ ಪರಿಭಾಷೆ. ಬಾಳದೆ ಯುದ್ಧಮಾಡಿ ನಾಶಕ್ಕೆ ಕಾರಣರಾದವರನ್ನು ಮಾನ್ಯ ಗುಂಡಪ್ಪನವರು ದಾನವರೆಂದು ಸೂಕ್ತವಾಗೆ ಹೇಳಿದ್ದರೆ.
ಅಹಂಕಾರದಿಂದಆಸೆಯಿಂದಮದಮತ್ಸರಗಳ ಕಾರಣಗಳಿಂದ ಎಲ್ಲ ಯುದ್ಧಗಳೂ ನಡೆಯುತ್ತವೆ. ನಮ್ಮ ಪುರಾಣಗಳಲ್ಲೂ ಇಂತಹ ಯುದ್ಧಗಳನ್ನು ನೋಡಬಹುದು. ದಾನವರಾಗೆ ಹುಟ್ಟಿದ ಹಿರಣ್ಯಾಕ್ಷ - ಹಿರನ್ಯಕಶಿಪುಗಳೂ ಸಹ ತಮಗೆ ಸಿಕ್ಕ ವಾರಗಳ ಬಲದಿಂದಮದೋನ್ಮತ್ತರಾಗಿ ಭೂಲೋಕವೇನು ದೇವಲೋಕಕ್ಕೂ ಲಗ್ಗೇ ಇಟ್ಟ ಉಲ್ಲೇಖವುಂಟು. ಮಹಾಭಾರತದ ಯುದ್ಧದಲ್ಲೂ ಇಡೀ ಆರ್ಯವರ್ತವೇ ಇಬ್ಬಾಗವಾಗಿ ಕೆಲವರು ಕೌರವರ ಮತ್ತೆ ಕೆಲವರು ಪಾಂಡವರ ಪಕ್ಷ ವಹಿಸಿ ಯುದ್ಧಮಾಡಿ ೧೮ ಅಕ್ಷೋಹಿಣಿ (೧.೫೬ ಸಾವಿರ) ಜನರನ್ನು ಬಳಿ ತೆಗೆದುಕೊಂಡಿತಂತೆ. ಅದು ಪುರಾಣ. ಗ್ರೀಕ್ ಪುರಾಣದಲ್ಲಿ ಬರುವ ಟ್ರೋಜನ್ ಯುದ್ಧವೂ ಸಹ ಒಂದು ” ಹೆಲನ್” ಎನ್ನುವ ಹೆಣ್ಣಿಗಾಗಿ ನಡೆದು ಸುಮಾರು ವರ್ಷಗಳಕಾಲ ನಡೆದು ಅಪಾರ ಸಾವು ನೋವುಗಳಿಗೆ ಕಾರಣವಾಯಿತಂತೆ.
ಇನ್ನು ನಮ್ಮ ದೇಶದಲ್ಲಿ ಕ್ರಿಸ್ತ ಪೂರ್ವ ೩೨೩ ರ ಸುಮಾರಿಗೆ ಚಾಣಕ್ಯ ಬರುವವರೆಗೆಸಣ್ಣ ಸಣ್ಣ ರಾಜರು ಮತ್ತು ಕೆಲವು ದೊಡ್ಡ ರಾಜರುಗಳು ಸದಾ ಯುದ್ಧನಿರತರು. ಮಾತ್ರ ಅವರ ದಾನವೀ ಅಹಂಕಾರವನ್ನು ತಣಿಸಲಿಕ್ಕಾಗಿಯೇ ನಡೆದ ಯುದ್ದ್ಧಗಳು. ಕ್ಷುಲ್ಲಕ ಕಾರಣಕ್ಕಾಗಿಯೇ ನಡೆವ ಯುದ್ಧಗಳಲ್ಲೆಲ್ಲ ನಡೆಯುವುದು ಸಾಮಾನ್ಯರ ಮಾರಣ ಹೋಮ. ಅದು ದಾನವೀ ಪ್ರವೃತ್ತಿ. ನಮ್ಮ ದೇಶವನ್ನೇ ತೆಗೆದುಕೊಂಡರೆಮೊದಲು ಯವನರುನಂತರ ಮೊಘಲರು ನಂತರ ಬ್ರಿಟಿಷರು. ಹೀಗೆ ಆಕ್ರಮಣಕಾರರ ದಂಡೇ ನಮ್ಮ ದೇಶವನ್ನು ಲೂಟಿಮಾಡಲು ಹಿಂದೂ ಹಿಂಡಾಗಿ ಬಂದವರೇ ಹೆಚ್ಚು. ಇವರು ಸಾಲದೆಂಬಂತೆ,ಬಂದವರು ಡಚ್ಚರುಪೋರ್ಚ್ಯುಗೀಸರುಎಲ್ಲರೂ ನಮ್ಮ ನಾಡಿನಮೇಲೆ ದಾಳಿಮಾಡಿದರು. ವಾಚಕರೆ ನೋಡಿ ಭಾರತವು ಯಾವುದೇ ಅನ್ಯ ದೇಶದಮೇಲೆ ದಾಳಿ ಮಾಡಿದ್ದನ್ನು ಯಾವುದಾದರೂ ಪುಸ್ತಕದಲ್ಲಿ ಕಂಡಿದ್ದೀರಾಅಖಂಡವಾಗಿದ್ದ ಭಾರತ ೨೦೦ ವರ್ಷಗಳಲ್ಲಿ ತುಂಡು ತುಂಡಾಗಿ ಹರಿದು ಹಂಚಿಹೋಗಿದೆ.
ಹಾಗಾಗಿ ವಾಚಕರೆಅಹಂಕಾರ ದುರಾಸೆ ಈ ಎಲ್ಲ ಯುದ್ಧಗಳಿಗೂ ಕಾರಣವಾಗಿತ್ತು. ಈ ಜಗತ್ತಿನಲ್ಲಿ ಮಾನವರು ಸುಸಂಸ್ಕೃತ ಪ್ರಾಣಿಗಳು. ಅನ್ಯ ಪ್ರಾಣಿಗಳಿಗಿಂತ ಭಿನ್ನ. ಮಾನವತೆಯಿಂದ ತನ್ನ ಜೀವನವನ್ನು ಮತ್ತು ಅನ್ಯರ ಜೀವನವನ್ನೂ ಸಹ ಸುಂದರವಾಗಿ ರೂಪಿಸಿಕೊಳ್ಳಬಲ್ಲ ಶಕ್ತಿ ಅವನಿಗೆ ಇದೆ. ಆದರೆ ಮಾತ್ರ ಅಹಂಕಾರದಿಂದ ತನ್ನ ಬುಡಕ್ಕೆ ತಾನೇ ಕೊಳ್ಳಿ ಇಟ್ಟುಕೊಂಡು ಅನ್ಯರನೂ ಸುಡುವ ಈ ದಾನವೀ ಅಥವಾ ಪೈಶಾಚಿಕ ಪ್ರವೃತ್ತಿ ಏಕೆ?
ದರಣಿ ಸಸ್ಯಶ್ಯಾಮಲವಾಗಿರಬೇಕಾದರೆನೀರು ಮತ್ತು ಶ್ರಮದ ಅವಶ್ಯಕತೆ ಉಂಟು ಅದನ್ನು ಬಿಟ್ಟು ದ್ವೇಷದ ಬೀಜ ಮತ್ತು ರಕ್ತದ ಸಿಂಚನವಾದರೆಬೆಳೆ ಬೆಳೆದೀತೆಹೊಟ್ಟೆ ತುಂಬೀತೆಹಗೆಯ ಹೊಗೆಯಿಂದ ಉಸಿರು ಕಟ್ಟುತ್ತದೆಯೇ ಹೊರತು ಜೀವ ಪೋಷಣೆಯಾಗದು. ಜೀವನದ ನಡೆಯದು. ಈ ಪ್ರಪಂಚದ ಗತಿಯೇನುಅದು ಹಾಗಾದರೆ ಇಡೀ ಪ್ರಪಂಚವೇ ಕಟುಕನ ಜಗಲಿಯಂತಾಗುತ್ತದೆ ಅಲ್ಲವೆಅಂಥಹ ಭಾವಗಳನ್ನೇ ಮಾನ್ಯ ಶ್ರೀ ಗುಂಡಪ್ಪನವರು ವ್ಯಕ್ತ ಪಡಿಸುತ್ತಾರೆ ಈ ಕಗ್ಗದಲ್ಲಿ.
ಸಹೃದಯರೇಒಂದು ಸಣ್ಣ ಬೀದಿ ಜಗಳ ದಿಂದ ಹಿಡಿದು ಒಂದು ಮಹಾ ಪ್ರಪಂಚ ಯುದ್ಧಕ್ಕೂ ಮಾನವತೆಯ ಕೊರತೆ ಮತ್ತು ಅಹಂಕಾರಭರಿತ ದಾನವತೆಯೇ ಕಾರಣ. ದ್ವೇಶವೇ ಕಾರಣ ಇದರಿಂದ ನಾಶವೇ ಹೊರತು ಬಾಳು ಇಲ್ಲ ಎಂದು ನಾವೂ ಸಹ ಅರಿತು ನಮ್ಮ ನಮ್ಮಲ್ಲಿ ಇರುವ ಅಂತಹ ವಿನಾಶಕಾರಿ ಭಾವಗಳನ್ನು ತೊಡೆದುಈ ಇಡೀ ಜಗತ್ತನ್ನು ಸುಂದರ ತಾಣವನ್ನಾಗಿ ಪರಿವರ್ತಿಸಲು ಪ್ರಯತ್ನಿಸೋಣ.
ರಸಧಾರೆ - 013
ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ?|
ಧರಣಿಗನುದಿನದ ರಕ್ತಾಭಿಷೇಚನೆಯೇ? ||
ಕರವಾಲವನು ಪುಷ್ಪಸರವೆಂದು ಸೆಳೆದಾಡೆ |
ಪರಿಮಳವ ಸೂಸುವುದೆ  ಮಂಕುತಿಮಾ ||
ಪುರುಷ = ಶಕ್ತಿಪರಮ = ಸರ್ವೋಚ್ಚಸಿದ್ಧಿ = ಪ್ರಯೋಜನಧರಣಿ = ಭೂಮಿಅನುದಿನ = ಪ್ರತಿನಿತ್ಯ,
ಅಭಿಷೇಚನೆ = ಅಭಿಷೇಕಕರವಾಲ = ಕತ್ತಿಸೆಳೆದಾಡೆ = ಎಳೆದಾಡಿದರೆಪರಿಮಳ = ಸುಗಂಧ.
ಪುರುಷ ಸ್ವತಂತ್ರತೆಯು ಪರಮ ಸಿದ್ಧಿಯದೇನು ಧರಣಿಗೆ ಅನುದಿನವೂ ರಕ್ತಾಭಿಷೇಚನೆಯೇ
ಕರವಾಲವನು ಪುಷ್ಪಸರವೆಂದು ಸೆಳೆದಾಡೆ ಪರಿಮಳವ ಸೂಸುವುದೆ-ಮಂಕುತಿಮ್ಮ.
ಆಗ ನಡೆಯುತ್ತಿದ್ದ ಯುದ್ದಯುದ್ದದಿಂದ ಆಗುತ್ತಿದ್ದ ದುಷ್ಪರಿಣಾಮಗಳುಇವುಗಳ ಬಗ್ಗೆ ಮನಕರಗಿ ಭಾವುಕರಾದ ಮಾನ್ಯ ಗುಂಡಪ್ಪನವರು ಶಕ್ತಿಯ ಸ್ವಾತಂತ್ರದ ಸರ್ವೋಚ್ಚ ಗುರಿಈ ಭೂಮಿಗೆ ಪ್ರತಿದಿನವೂ ರಕ್ತದ ಅಭಿಷೇಕವೇಒರೆಯಿಂದ ಕತ್ತಿಯನ್ನು ಹೂವಿನ ಮಾಲೆ ಎಂದು ಎಳೆದರೆ ಅದರಿಂದ ಸುಗಂಧ ಬರಬಹುದೇ ಎನ್ನುತ್ತಾರೆ.
ಪುರುಷ ಎಂದರೆ ಗಂಡಸು ಎನ್ನುವ ಅರ್ಥದಲ್ಲಿ ಸಾಮಾನ್ಯ ಬಳಕೆ. ಆದರೆ ವಾಸ್ತವದಲ್ಲಿ ಪುರುಷ ಎಂದರೆ ಶಕ್ತಿ ಎಂದು ಅರ್ಥ ” ಪುರೇ ಶಯತೀತಿ ಪುರುಷಃ ” ಚೇತನ ಎಂದು ಅಸ್ತಿತ್ವವನ್ನು ಸೂಚಿಸುವಾಗಕ್ರಿಯಾಶೀಲತೆಯನ್ನು ಸೂಚಿಸುವಾಗಚೈತನ್ಯ ಎಂದೂ ಕರೆಯಲಾಗುತ್ತದೆ. ಆದ್ದರಿಂದಲೇ ದೇವರನ್ನು ಸೂಚಿಸುವಾಗ ” ಪರಮ ಅಂದರೆ ಸರ್ವೋಚ್ಚಪುರುಷ ಅಂದರೆ ಶಕ್ತಿ ಎಂಬ ಅರ್ಥದಲ್ಲಿ ” ಪರಮ ಪುರುಷ ” ಅಥವಾ ” ಪರಮಾತ್ಮ ಎಂದು ಕರೆಯುತ್ತಾರೆ. ಒಟ್ಟಾರೆಪುರುಷವೆಂದರೆ ಶಕ್ತಿ. ಈ ಶಕ್ತಿಯ ಉಪಯೋಗ ರಕ್ಷಣೆಗೆ ಮಾತ್ರ. ಹೇಗೆ ಪರಮಪುರುಷನು ತನ್ನ ಸರ್ವೋಚ್ಚ ಶಕ್ತಿಯನ್ನು ಜಗದ್ರಕ್ಷಣೆಗೆ ವಿನಿಯೋಗಿಸುತ್ತಾನೋ ಹಾಗೆಯೇಈ ಜಗತ್ತಿನಲ್ಲಿ ಹೆಚ್ಚು ಶಕ್ತಿ ಇರುವವರು ತಮಗಿಂತ ಕಡಿಮೆ ಶಕ್ತಿ ಇರುವವರನ್ನು ರಕ್ಷಿಸಬೇಕು ಮತ್ತು ಆ ಶಕ್ತಿಯನ್ನು ಕೇವಲ ಆತ್ಮ ರಕ್ಷಣೆ ಮತ್ತು ಇತರರನ್ನು ರಕ್ಷಿಸುವುದಕ್ಕಾಗಿಯೇ ಉಪಯೋಗಿಸಬೇಕು. ಇದು ಧರ್ಮ.
ಇಲ್ಲಿ ಶಕ್ತಿಯೆಂದರೆ ಕೇವಲದೈಹಿಕ ಶಕ್ತಿಯಷ್ಟೇ ಅಲ್ಲ. ಎಲ್ಲ ರೀತಿಯ ಶಕ್ತಿಯೂ ಇದರ ಪರಿಧಿಯೊಳಕ್ಕೆ ಬರುತ್ತದೆ. ದೇಹ ಬಲಧನಬಲಜನಬಲಅಧಿಕಾರ ಬಲಬುದ್ಧಿ ಬಲಇತ್ಯಾದಿ ಇತ್ಯಾದಿ… ಹೀಗೆ ಯಾವುದೇ ರೀತಿಯ ಶಕ್ತಿಯ ಆಧಿಕ್ಯವಿದ್ದರೂ ಅದನ್ನು ಪರರ ರಕ್ಷಣೆಗೆ ಮಾತ್ರ ಉಪಯೋಗಿಸುವುದು ಧರ್ಮ.
ಆದರೆ ಅಂದಿನ ಮತ್ತು ಇಂದಿನ ವಾಸ್ತವತೆಯೇ ಬೇರೆ. ” ಹಿಂದಿಯಲ್ಲಿ ” ಜಿಸ್ಕಿ ಲಾಠಿ ಉಸ್ಕ್ತಿ ಭೈನ್ಸ್” ಎನ್ನುತ್ತಾರೆ. ಅಂದರೆ ಯಾರಕೈಯಲ್ಲಿ ಕೋಲು೦ಟೋ ಅವನದೇ ಎಮ್ಮೆ” ಎಂದು ಯಾರಿಗೆ ಅಧಿಕ ಶಕ್ತಿ ಇದೆಯೋ ಅವನೇ ರಾಜ. ತನಗೆ ಶಕ್ತಿ ಇದೆ. ನಾನು ಏನನ್ನಾದರೂ ಮಾಡಬಹುದುನನ್ನು ಕೇಳುವವರಾರುಕೇಳಿದವರನ್ನು ಸದೆಬಡಿದುಬಿಡುತ್ತೇನೆ” ಎನ್ನುವ ದುರಾಚಾರದ ಜನರೇ ಅಧಿಕವಾಗಿದೆ. ಇದು ಅಹಂಕಾರದ ಪರಮಾವಧಿ. ಎಲ್ಲ ಸಂಘರ್ಶಗಳೂ ಈ ಅಹಂಕಾರ ಜನಿತವಾದ ದಬ್ಬಾಳಿಕೆಯಿಂದಲೇ ನಡೆಯುತ್ತವೆ. ಇದು ತಪ್ಪು. ಇದರಿಂದ ಪ್ರತಿನಿತ್ಯದ ರಕ್ತಪಾತ ಸಾವು ನೋವು ಮಾತ್ರಎನ್ನುತ್ತಾರೆ ಶ್ರೀ ಗುಂಡಪ್ಪನವರು. ಅದಕ್ಕೊಂದು ಉಪಮೆಯನ್ನು ಕೊಡುತ್ತಾರೆ. ಹೂವಿನಮಾಲೆ ಎಂದು ಒರೆಯಿಂದ ಕತ್ತಿಯನ್ನು ಎಳೆದರೆಅದು ಸುಗಂಧವನ್ನು ಬೀರುತ್ತದೆಯೇ.
ವಾಚಕೆ ನಮ್ಮಲ್ಲಿ ಶಕ್ತಿ ಇದ್ದರೆ ನಮ್ಮ ಅವಶ್ಯಕತೆಗೆ ಮೀರಿ ಶಕ್ತಿ ಇದ್ದರೆಅದನ್ನು ಪರಹಿತಕ್ಕಾಗಿ ಉಪಯೋಗಿಸಬೇಕು. ಆ ಪರಮಾತ್ಮನ ಕೃಪೆಯಿಂದ ನಮಗೆ ಸಿಕ್ಕ ಅಧಿಕ ಶಕ್ತಿಯನ್ನು ನಮಗಿಂತ ಕಡಿಮೆ ಶಕ್ತಿ ಇರುವವರ ಒಳಿತಿಗಾಗಿ ಉಪಯೋಗಿಸಬೇಕು. ಹಾಗಾದಾಗ ಪರಸ್ಪರ ಪ್ರೀತಿ ವಿಶ್ವಾಸಗಳು ಬೆಳೆದು ಇಡೀ ಸಮಾಜವೇ ವಾಸಿಸಲು ಒಂದು ಸುಂದರ ತಾಣವಾಗುತ್ತದೆ. ಇಂದಿನ ಸ್ವಾರ್ಥಭರಿತ ಸಮಾಜದಲ್ಲಿ ಎಂತೆಂತಹ ವಿಧ್ಯಮಾನಗಳು ನಡೆಯುತ್ತಿವೆ ಎಂದು ವಿಷದಪಡಿಸುವ ಅವಶ್ಯಕತೆಯೇ ಇಲ್ಲ. ಅದು ಸರ್ವರಿಗೂ ಗೊತ್ತಿರುವ ವಿಷಯವೇ. ಅದು ತಪ್ಪು. ಅದು ಸರಿಯಿಲ್ಲ ಎಂಬ ಅರಿವೂ ಎಲ್ಲರಿಗೂ ಇದೆ. ಹಾಗಾಗಿವಾಚಕರೆನಾವೂ ಆ ನಿಟ್ಟಿನಲ್ಲಿ ಯೋಚನೆ ಮಾಡಬೇಕು. ನಮ್ಮ ಶಕ್ತಿಯನ್ನುಸ್ವರಕ್ಷಣೆಗೆ ಉಪಯೋಗಿಸುವಪರರ ರಕ್ಷಣೆಗೆ ಉಪಯೋಗಿಸುವ ಆದರೆ ದುರಾಸೆಗೆ ಸ್ವಾರ್ಥಕ್ಕೆ ಪರರ ಭಕ್ಷಣೆಗೆ ಉಪಯೋಗಿಸುವ ಬುದ್ಧಿ ನಮಗೆ ಎಂದೂ ಬರದಿರಲಿ ಎಂದು ಪ್ರಾರ್ಥಿಸುತ್ತನಮ್ಮಲ್ಲಿ ಇರಬಹುದಾದ ಕೊರತೆಗಳನ್ನು ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡೋಣ.
ಲೋಕಜೀವನ ಮಂಥನ ರಸಧಾರೆ - 014
ಒಂದೇ ಗಗನವ ಕಾಣುತೊಂದೆ ನೆಲವನು ತುಳಿಯು I
ತೊಂದೆ ಧಾನ್ಯವನುಣ್ಣುತೊಂದೆ ನೀರ್ಗುಡಿದು ||
ಒಂದೇ ಗಾಳಿಯನುಸಿರ್ವ ನರಜಾತಿಯೋಳಗೆಂತು |
ಬಂದುದೀ ವೈಷಮ್ಯ ಮಂಕುತಿಮ್ಮ||
ಉಣ್ಣು = ತಿನ್ನುಉಸಿರ್ವ = ಉಸಿರಾಡುವನರಜಾತಿ = ಮಾನವ ಜನಾಂಗ. ವೈಷಮ್ಯ = ದ್ವೇಷ . ಎಂತು - ಹೇಗೆ.
ಒಂದೇ ಆಕಾಶವ ಕಾಣುತಒಂದೇ ನೆಲವನ್ನು ತುಳಿಯುತ ಒಂದೇ ಧಾನ್ಯವನ್ನು ಉಣ್ಣುತ ಒಂದೇ ಗಾಳಿಯನು ಉಸಿರಾಡುವ ಮಾನವಜಾತಿಯ ಒಳಗೆ ಈ ದ್ವೇಷ ಹೇಗೆ ಬಂತು ಎಂದು ತಮಗೆ ತಾವೇ ಪ್ರಶ್ನಿಸುತ್ತ ಈ ವಿಚಾರವನ್ನು ಓದುಗರ ಮುಂದಿಟ್ಟಿದ್ದಾರೆಶ್ರೀ ಗುಂಡಪ್ಪನವರು.
ಈ ಜಗತ್ತಿನಲ್ಲಿರುವ ಮಾನವರೆಲ್ಲರಿಗೂಮಾನವರಿಗಷ್ಟೇ ಏನು ಸಕಲ ಜೀವಿ ಸಂಕುಲಕ್ಕೂ ತಲೆಯ ಮೇಲಿನ ಆಕಾಶ ಒಂದೇ. ಇರುವ ಭೂಮಿಯೂ ಒಂದೇಎಲ್ಲರೂ ತಿನ್ನುವುದು ಒಂದೇ ರೀತಿಯ ಆಹಾರಕುಡಿಯುವ ನೀರಿಗೂ ಒಂದೇ ಮೂಲಹಾಗಿದ್ದರೂ ಏಕೆ ಈ ವೈಷಮ್ಯಈ ದ್ವೇಷ ಎಂಬ ಪ್ರಶ್ನೆ ಕಾಲಾನುಕಾಲಕ್ಕೆ ಎಲ್ಲ ಚಿಂತಕರ ಮನಗಳಲ್ಲೂ ಸುಳಿದುಉತ್ತರ ಕಂಡು ಕೊಳ್ಳಲು ಪ್ರಯತ್ನ ಆಗಿದೆ.
ಆದರೆ ವಿಚಿತ್ರವೇನೆಂದರೆಅನಾದಿ ಕಾಲದಿಂದಲೂ ಮನುಷ್ಯರ ಗುಂಪುಗಳ ನಡುವೆಒಂದು ದೇಶ ಮತ್ತು ಮತ್ತೊಂದು ದೇಶದ ನಡುವೆಅಣ್ಣ ತಮ್ಮಂದಿರ ನಡುವೆಎರಡು ಊರಿನ ನಡುವೆ ಹೀಗೆ ಎರಡು ಗುಂಪುಗಳ ನಡುವೆ ಉದ್ಭವವಾಗುವ ದ್ವೇಷದ್ವೇಷದಿಂದ ಆವೇಶಇವೆರಡರ ಫಲವಾಗಿ ಜಗಳ ಹೊಡೆದಾಟಕ್ಕೆ ಮೂಲ ಕಾರಣವೇಶ್ರೀ ಗುಂಡಪ್ಪನವರು ಉಲ್ಲೇಖಿಸಿದನೀರು ನೆಲಗಳೇ ಅಲ್ಲವೇಇವುಗಳಿಗಾಗಿಯೇ ಜಗತ್ತಿನ ಎಲ್ಲ ಹೋರಾಟಗಳೂ ನಡೆದಿವೆ. ಇಂದು ನಮ್ಮ ದೇಶದ ನ್ಯಾಯಾಲಯಗಳಲ್ಲಿ ಹೂಡಲ್ಪಡುವ ಕಟ್ಟಳೆಗಳಲ್ಲಿ ೯೦ ಪ್ರತಿಶತ ಭೂಮಿಗೆ ಸಂಬಂಧಿಸಿದುವೆ ಆಗಿರುತ್ತೆ.
ಇಷ್ಟಿದ್ದರೆ ಮತ್ತಷ್ಟರಾಸೆ” ನಮ್ಮ ಜೀವಿಕೆಗೆ ಎಷ್ಟು ಬೇಕೋ ಅಷ್ಟನ್ನು ಪಡೆದು ಹೊಂದಿ ಕಾಯ ಕರ್ಮ ಮಾಡಿ ಜೀವಿಸುವುದು ಸರಿಯಾದ ಕ್ರಮ. ಆದರೆ ಮಾನವನ ಆಸೆಗೆ ಗಗನವೇ ಮಿತಿ. ಅದಕ್ಕೊಂದು ಹಿಂದೆ ನಾ ಕೇಳಿದ ಕಥೆಯನ್ನು ಹೇಳಬೇಕು. ಒಬ್ಬನಿಗೆ ಬಹಳ ಬಹಳ ಭೂಮಿ ಬೇಕೆನ್ನಿಸಿತಂತೆ. ಅವನ ತಪಸ್ಸಿಗೆ ಮೆಚ್ಚಿ ದೇವರು ಏನು ವರಬೇಕೆಂದಾಗ, “ನನಗೆ ಹೆಚ್ಚು ಭೂಮಿ ಬೇಕು” ಎಂದನಂತೆ. ” ನೋಡು ನೀ ನಿಂತಿರುವ ಜಾಗದಿಂದ ಇಂದು ಸಂಜೆಯವರೆಗೆ ಎಷ್ಟುದೂರ ಓಡಿಎಷ್ಟು ಭೂಮಿಯನ್ನು ಕ್ರಮಿಸಿ ಮತ್ತೆ ಸೂರ್ಯಾಸ್ತಮಾನದ ವೇಳೆಗೆ ನೀ ಈಗ ನಿಂತಿರುವ ಜಾಗಕ್ಕೆ ಬಂದು ಸೇರಿದರೆನೀ ಎಷ್ಟು ಭೂಮಿಯನ್ನು ಉಪಕ್ರಮಿಸಿರುತ್ತೀಯೋ ಅದನ್ನೆಲ್ಲ ನಿನಗೆ ಕೊಡುತ್ತೇನೆ” ಎಂದನಂತೆ ಆ ದೇವರು. ಮಾನವರ ಬಲಹೀನತೆ ಆ ದೇವರಿಗೇ ಗೊತ್ತಿಲ್ಲವೇ. ಕೊಟ್ಟದ್ದೂ ಅವನೇ ತಾನೇಸರಿ ಇವ ಓಡಿದಓಡಿದ. ಓಡಿ ಓಡಿ ಇನ್ನೂ ಸ್ವಲ್ಪ ಮುಂದೆ ಹೋಗುವಇನ್ನೂ ಸ್ವಲ್ಪ ಮುಂದೆ ಹೋಗುವಎಂದು ಓಡಿ ಓಡಿ ಮಧ್ಯಾನ್ಹದ ತನಕ ಓಡಿದ. ” ಅಯ್ಯೋ ಹಿಂತಿರುಗಬೇಕಲ್ಲ ಎಂದು ಯೋಚನೆ ಮಾಡಿ ಮತ್ತೆ ಸ್ವಸ್ಥಾನ ಸೇರಲು ಮೊದಲಿಟ್ಟ. ಆರಂಭದ ಹುಮ್ಮಸ್ಸು ಮತ್ತು ಶಕ್ತಿ ಕುಂದಿತ್ತು. ಬರುತ್ತಾ ಬರುತ್ತಾ ಬಹಳ ಸುಸ್ತಾಗಿ ಕುಸಿದ. ಇನ್ನೇನು ತಾ ಶುರುಮಾಡಿದ ಸ್ಥಳ ಅಗೋಅಲ್ಲಿ ಕಾಣುತ್ತಿದೆ” ಎನ್ನುವಾಗ ಆ ಸೂರ್ಯ ಮುಳುಗಿಯೇ ಬಿಟ್ಟ. ಆ ದೇವರೂ ಮಾಯವಾಗಿಬಿಟ್ಟ. ಇವನಿಗೆ ಉಳಿದಿದ್ದು ಏನು ಬರೀ ಶ್ರಮ. ಪಶ್ಚಾತ್ತಾಪ.
ಹೀಗೆ ನಾವು ಮಾಡುವ ಕೆಲಸವಸ್ತುವ್ಯಕ್ತಿವಿಷಯಗಳನ್ನು ಬಯಸುವಾಗನಮ್ಮ ಮಿತಿಗಳನ್ನು ಅರಿತುಕೊಂಡರೆ ಸುಖ ಇಲ್ಲದಿದ್ದರೆಇಲ್ಲದಿದ್ದರೆನಮಗೆ ಸಿಗಲಿಲ್ಲವೆಂದು ಕೋಪನಮಗಿಂತ ಪರರಿಗೆ ಅಧಿಕವಾಗಿ ಸಿಕ್ಕಿದೆ ಎಂದು ಅಸೂಯೆಸಿಕ್ಕರೆ ಮತ್ತಷ್ಟರ ಲೋಭಅಧಿಕವಾಗಿ ಸಿಕ್ಕರೆ ಮದಸಿಕ್ಕದ್ದು ನಾನಲ್ಲೇ ಇರಬೇಕೆನ್ನುವ ಮೋಹ ಹೇಗೆ ಎಲ್ಲವೂ ಅಂಟಿಕೊಳ್ಳುತ್ತದೆ. ಜೀವನವೇ ನರಕವಾಗುತ್ತದೆ .
ಒಂದೇ ಭೂಮಿ ಒಂದೇ ಆಕಾಶ ಈ ಭೂಮ್ಯಾಕಾಶಗಳ ಸಂಬಂಧವನ್ನು ಎಲ್ಲರೂ ಒಂದೇ ರೀತಿಯಲ್ಲಿ ಹೊಂದಿರುವಾಗ ಏಕೆ ಈ ವೈಷಮ್ಯವೆಂದರೆಜಾತಿಮತಭಾಷೆಪ್ರಾಂತದೇಶಗಳ ಎಲ್ಲೆಗಳನ್ನು ಹಾಕಿ ಕೊಂಡು ಮಾನವರು ಅದನ್ನು ದಕ್ಕಿಸಿಕೊಳ್ಳಲುಕಾಪಾಡಲು ಮತ್ತು ತಮ್ಮ ಆಧಿಕ್ಯವನ್ನು ಸಾರಲುಸ್ಥಿರಪಡಿಸಲು ಮಾಡುವ ನಿರಂತರ ಹೋರಾಟದ ಫಲವೇ ಈ ದ್ವೇಷಾಸೂಯೆಗಳ ವಿಷ ವೃತ್ತ. ತೃಪ್ತಿಗೆ ಒಂದು ಎಲ್ಲೆ ಅಥವಾ ಮಿತಿ ಹಾಕಿಕೊಂಡರೆ ಎಲ್ಲರಿಗೂ ಸುಖ ಇಲ್ಲದಿದ್ದರೆ ಎಲ್ಲರಿಗೂ ಹಿಂಸೆ ಮತ್ತು ಈ ಬಾಳೇ ನರಕ ಸದೃಶ. ಈ ಜಗತ್ತಿನ ಮಾನವರೆಲ್ಲ ಒಂದೇ. ಈ ಎಲ್ಲ ಭೂಮಿ ಆಕಾಶ ನೀರು ಎಲ್ಲವನ್ನೂ ಪರಮಾತ್ಮ ಎಲ್ಲರ ಉಪಯೋಗಕ್ಕಾಗಿ ನಿರ್ಮಿಸಿದ್ದಾನೆ. ಇದು ಯಾವುದೋ ನಮ್ಮ ಸ್ವಂತವಾಗಲು ಸಾಧ್ಯವೇ ಇಲ್ಲ. ಏಕೆಂದರೆ ಈ ಭೂಮಿಯೇ ನಮಗೆ ಸ್ವಂತನಿರಂತರ ಮತ್ತು ಶಾಶ್ವತವಲ್ಲದಿದ್ದಮೇಲೆಈ ಭೂಮಿಯ ಮೇಲಿನ ವಸ್ತುಗಳು ಹೇಗೆ ಸ್ವಂತವಾಗಲು ಸಾಧ್ಯ. ಅಂತಕನೊಬ್ಬ ಬಾಳಿನಂಚಲ್ಲಿಕಾದಿಲ್ಲವೇ ಇದಕ್ಕೆಲ್ಲ ಒಂದು ಅಂತ್ಯ ಹಾಡಲು.
ಇಂತಹ ಪ್ರವೃತ್ತಿಯಿಂದ ನಿರಂತರ ದ್ವೇಷಾಸೂಯಗಳ ವಿಷ ವೃತ್ತದಲ್ಲಿ ನಾವು ಬೀಳುವುದು ಬೇಡ. ಹಾಗೆ ಬಿದ್ದವರನ್ನು ಬಿಡಿಸುವ ಪ್ರಯತ್ನ ಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ ಬನ್ನಿ.
ರಸಧಾರೆ - 015
ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿದೆ ಮಾಸಿ |
ಸುಳಿದಿಲ್ಲವಾವ ಹೊಸ ದರ್ಶನದ ಹೊಳಪುಂ ||
ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ |
ತಳಮಳಿಸುತಿದೆ ಲೋಕ  ಮಂಕುತಿಮ್ಮ ||
ಹಳೆಯ ಭಕ್ತಿ ಶ್ರದ್ಧೆಯು ಅಳಿಸಿಹೋಗಿದೆ ಮಾಸಿ. ಸುಳಿದಿಲ್ಲವು ಯಾವ ಹೊಸ ದರ್ಶನದ ಹೊಳಪು
ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ ತಳಮಳಿಸುತಿದೆ ಲೋಕ ಮಂಕುತಿಮ್ಮ
ಮಾಸು = ಅಳಿಸು ದರ್ಶನ = ಸಿದ್ಧಾಂತದ ಹೊಸ ರೂಪತೆರದಿ= ತರಹೆತಳಮಳಿಸು = ಒದ್ದಾಡುಪರದಾಡು
ಈಗ್ಗೆ ಎಪ್ಪತ್ತು ವರ್ಷಗಳ ಕೆಳಗೇ ಗುಂಡಪ್ಪನವರಿಗೆ ಹೀಗೆ ಅನ್ನಿಸಿದ್ದರೆಇಂದು ಅವರು ಏನನ್ನುತ್ತಿದ್ದರೋ ಏನೋ!
ಇರಲಿಪುರಾತನ ಕಾಲದಿಂದಲೂ ಅನೂಚಾನವಾಗಿ ಜನಗಳಲ್ಲಿ ಇದ್ದ ದೇವರಲ್ಲಿ ಭಕ್ತಿ ಮತ್ತು ಸಂಪ್ರದಾಯಗಳಲ್ಲಿ ಇದ್ದ ಶ್ರದ್ಧೆ ಈಗ ಅಳಿಸಿ ಹೋಗಿದೆ. ಇಲ್ಲಿ ಸಂಪ್ರದಾಯ ಎಂದರೆ ಹಿಂದಿನಿಂದ ಬಂದಿರುವ ನಡವಳಿಕೆ ಎಂದಷ್ಟೆ ಅರ್ಥ. ಜನರಲ್ಲಿ ಮತ್ತೆ ಈ ಭಕ್ತಿ ಮತ್ತು ಶ್ರದ್ಧೆಗಳನ್ನು ತರಲು ಯಾವ ಹೊಸ ಸಿದ್ಧಾಂತಗಳೂ ಪ್ರತಿಪಾದಿಸಲ್ಪಟ್ಟು ಪ್ರಚಾರಕ್ಕೆ ಬಂದಿಲ್ಲ. ಹಾಗಾಗಿ ಜನರೆಲ್ಲರೂ ಮೊದಲಿನಿಂದ ಬಂದದನ್ನು ಕಳೆದು ಕೊಂಡು ಹೊಸದಿಲ್ಲದೆ ಒಂದು ಅತಂತ್ರ ಸ್ಥಿತಿಯಲ್ಲಿದ್ದಾರೆ. ಯಾರ ಸಹಾಯವೂ ಇಲ್ಲದೆ ಸುಲಭವಾಗಿ ಮತ್ತು ಚೆನ್ನಾಗಿ ಓಡಾಡಲು ಅಭ್ಯಾಸವಾಗಿರುವ ಮನೆ ಕುಸಿದು ಹೋದರೆಆ ಮನೆಯಲ್ಲಿ ವಾಸಿಸುವ ಕುಂಟನಿಗೋ ಕುರುಡನಿಗೋಪಾಪ ತಳಮಳಿಸುವ ಮತ್ತು ಪರದಾಡುವಂತೆ ಆಗುತ್ತದಲ್ಲವೇಹಾಗೆ ಆಗಿದೆ ಇಂದಿನ ಲೋಕದ ಪರಿಸ್ಥಿತಿ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
ಇಲ್ಲಿ ಭಕ್ತಿ ಎಂದರೆ ಪರಮಾತ್ಮನ ಮೇಲಿರುವ ಭಕ್ತಿ ಎಂದೇ ತಿಳಿಯಬೇಕಿಲ್ಲ. ಆದರೆ ನಾವು ಮಾಡುವ ಎಲ್ಲ ಕೆಲಸಗಳೂ ನಮ್ಮೊಳಗಿರುವ ಪರಮಾತ್ಮ ಸ್ವರೂಪೀ ಜೀವಾತ್ಮನು ತೃಪ್ತನಾಗುವುದಕ್ಕೆಅಂದರೆ ಆತ್ಮ ತೃಪ್ತಿಗೆ ಎಂದುಕೊಂಡಾಗಆ ಕೆಲಸದಲ್ಲಿ ಭಕ್ತಿ. ಆ ಭಕ್ತಿ ಇದ್ದಾಗಮಾಡುವ ಕೆಲಸದಲ್ಲಿ ಶ್ರದ್ಧೆ ಬರುತ್ತದೆ. ಹಾಗೆ ಭಕ್ತಿ ಮತ್ತು ಶ್ರದ್ಧೆ ಎರಡೂ ಇದ್ದಾಗಮಾಡುವ ಕೆಲಸ ಸಮರ್ಪಕವಾಗಿದ್ದು ಅದರ ಫಲವೂ ಒಳ್ಳೆಯದಾಗಿರುತ್ತದೆ. ” ಹೇಗೆ ಮನವೋ ಹಾಗೆ ಭಾವ . ಹೇಗೆ ಭಾವವೋ ಹಾಗೆ ಕಾರ್ಯ. ಹೇಗೆ ಕಾರ್ಯವೋ ಹಾಗೆ ಫಲ.” ಹಾಗಾಗಿ ಮನಸ್ಸಿನಲ್ಲಿ ಭಕ್ತಿ ಮತ್ತು ಶ್ರದ್ಧೆಗಳು ಬಹಳ ಮುಖ್ಯ. ಆದರೆ ಅದು ಈಗ ಮಾಸಿ ಹೋಗಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
ಹೇಗೆ ಮಾಸಿಹೋಯಿತುಹಲವಾರು ಕಾರಣಗಳು. ಕಾಲ ಬದಲಾದಂತೆ ಎಲ್ಲವೂ ಬದಲಾಗುತ್ತದೆ. ಆದರೆ ನಕಾರಾತ್ಮಕ ಬದಲಾವಣೆಯಾದರೆ ಅದು ಸರಿಯಲ್ಲ. ಆದ್ದರಿಂದಲೇ ಮಾಸಿಹೋದದ್ದು. ಹಿರಿಯರು ಮನೆಗಳಲ್ಲಿ ಕಿರಿಯರಿಗೆ ಮಾರ್ಗ ದರ್ಶನ ಮಾಡಬೇಕು. ಅವರ ಅನುಭವ ಮತ್ತು ಜ್ಞಾನದ ಮೂಸೆಯಿಂದ ಕಿರಿಯರಿಗೆ ಜ್ಞಾನವನ್ನು ಎರಕ ಹೊಯ್ದಂಗೆ ಎರೆಯಬೇಕು. ಆದರೆ ನಮ್ಮಲ್ಲಿ ಕಾಲಕ್ರಮೇಣ ಏನು’ ಮಾಡಬೇಕು ಎನ್ನುವುದನ್ನು ಮಾತ್ರ ಹೇಳುತ್ತಿದ್ದರು. ಹೇಗೆ’ ಮಾಡಬೇಕು ಎನ್ನುವುದನ್ನು ಹೇಳುತ್ತಿದ್ದರು ಆದರೆ ಏಕೆ’ ಮಾಡಬೇಕು ಎಂದು ಕೇಳಿದರೆ ಅದಕ್ಕೆ” ಬಂಡಾಯ” ವೆನ್ನುತ್ತಿದ್ದರು. ಹೇಳಿದಷ್ಟು ಮಾಡೋ ತಲೆಹರಟೆ ” ಎನ್ನುತ್ತಿದ್ದರು. ಒಂದು ಅವರಿಗೆ ಹೇಳಲು ಗೊತ್ತಿರಲಿಲ್ಲ ಅಥವಾ ಹೇಳಬೇಕಾದ ವಿಷಯವೇ ಗೊತ್ತಿರಲಿಲ್ಲ ಅಥವಾ ಅವರಿಗೆ ಗೊತ್ತಿದ್ದ ವಿಷಯದ ಸಂಪೂರ್ಣ ಜ್ಞಾನವಿರಲಿಲ್ಲ. ಒಂದು ಕೆಲಸಆ ಕೆಲಸ ಮಾಡುವ ರೀತಿ ಮತ್ತು ಅದರ ಅಂತರ್ಯದ ಉದ್ಧ್ಯೇಶ ಇವುಗಳನ್ನು ಅರಿಯುವುದು ಬಹಳ ಮುಖ್ಯ. ಇದು ಎಲ್ಲ ರೀತಿಯ ಕೆಲಸಗಳಿಗೂ ಅನ್ವಯವಾಗುತ್ತದೆ. ಅದನ್ನು ವಿವರಿಸದೆ ಮಾತ್ರ ಕೆಲಸವನ್ನಷ್ಟೇ ವಿವರಿಸಿ ಮಾಡಲು ಬಿಟ್ಟಾಗಆ ಕೆಲಸದಲ್ಲಿ ಅವರಿಗೆ ತಿರಸ್ಕಾರ ಹುಟ್ಟಿ ಮಾಡುವ ಕೆಲಸದಲ್ಲಿ ಶ್ರದ್ಧೆ ಇರುವುದಿಲ್ಲ. ಶ್ರದ್ಧೆ ಇಲ್ಲದಿದ್ದರೆ ಭಕ್ತಿಯೂ ಹುಟ್ಟುವುದಿಲ್ಲ. ಹಿಂದಿನವರು ಮಾಡಿದ ತಪ್ಪು ಅದೇ.
ಅಂತರ್ಯದ ಭಾವ ಹೇಳಿಕೊಡುವುದು ಅಷ್ಟು ಸುಲಭವಲ್ಲ. ಮೊದಲು ಹೇಳಿಕೊಡುವವನಿಗೆಆ ಭಾವ ಸಿದ್ಧಿಯಾಗಿರಬೇಕು. ಹೇಳಿಕೊಡುವ ಮತ್ತು ಎರಕ ಹೊಯ್ಯುವ ಕಲೆ ಸಿದ್ಧಿಯಾಗಿರಬೇಕುಮತ್ತು ಹೊಯ್ಯಬೇಕಾದ ಪಾತ್ರದ ಪಾತ್ರತೆಯ” ಮತ್ತು ” ಯೋಗ್ಯತೆಯ” ಅರಿವು ಅವನಿಗೆ ಇರಬೇಕು. (transmitter ಮತ್ತು receiver ಎರಡೂ ಸರಿ ಇರಬೇಕು) ಇಬ್ಬರೂ ಒಬ್ಬರಿಗೊಬ್ಬರು ಸರಿ ಹೋದರೆ ಆಗ ಶುದ್ಧ ಸತ್ವ ಮನದೊಳಕ್ಕೆ ಇಳಿಯುತ್ತೆ. ಭಕ್ತಿ ಬರುತ್ತೆ ಮತ್ತು ಶ್ರದ್ಧೆ ಬೆಳೆಯುತ್ತೆ. ಅದನ್ನು ನಮ್ಮ ಹಳೆಯ ಗುರುಕುಲ ಪದ್ದತಿಯಲ್ಲಿ ಕಾಣ ಸಿಗುತ್ತಿತ್ತು. ಒಟ್ಟಾರೆ ಹೇಳಬೇಕೆಂದರೆ ಇಂದು ಹಾಗೆ ಹೇಳಿಕೊಡುವವರಾಗಲೀಕಲಿಯುವವರಾಗಲೀ ಇಲ್ಲ. ಇದನ್ನೇ ಗುಂಡಪ್ಪನವರು
ಮಾಸಿ ಹೋಗಿದೆ” ಎನ್ನುತ್ತಾರೆ. ಇದಕ್ಕೆ ಏನು ಪರಿಹಾರವೆಂದು ಎಲ್ಲರೂ ಯೋಚಿಸಬೇಕು.
ಹಾಗೆ ಮಾಸಿಹೋದದ್ದರಿಂದ ಏನಾಗಿದೆ ಎಂದರೆಮೊದಲೇ ನಾವು ಬಲಹೀನರು. ತತ್ವದ ಬಲವಿಲ್ಲದೆ ಸತ್ವಹೀನರು. ಸತ್ಯದ ಬಲವಿಲ್ಲದೆ ಸತ್ವಹೀನರು . ಯಾವುದೋ ಒಂದನ್ನು ಹಿಡಿದುಕೊಂಡು ಹೇಗೋ ಬದುಕುತ್ತಿದ್ದೆವು. ಈಗ ನಾವು ಹಿಡಿದಂತಾ ವಸ್ತುವೇ ಬಲಹೀನವಾಗಿ ನಮ್ಮ ಅಸ್ತಿತ್ವವೇ ಅಲುಗಾಡುತ್ತಿದೆ. ಹಿಡಿದ ಕೊಂಬೆ ಮುರಿದರೆಹಿಡಿಯಲು ಮತ್ತೊಂದು ಕೊಂಬೆ ಇದ್ದರೆ ಹಿಡಿದು ತೂಗಾಡಬಹುದು. ಇಲ್ಲದಿದ್ದರೆ ಬೀಳುವುದೇ ದಾರಿ. ಚೆನ್ನಾಗಿ ಓಡಾಡಲು ಅಭ್ಯಾಸವಾಗಿರುವ ಮನೆ ಕುಸಿದು ಹೋದರೆಆ ಮನೆಯಲ್ಲಿ ವಾಸಿಸುವ ಕುಂಟನಿಗೋ ಕುರುಡನಿಗೋತೊಂದರೆಯಾಗಿ ಅವನು ತಡಬಡಾಯಿಸುವಂತೆ ನಾವೂ ಸಹ ನಮ್ಮ ಭಕ್ತಿ ಶ್ರದ್ಧೆಗಳನ್ನು ಕಳೆದು ಕೊಂಡು ಅತಂತ್ರದ ಸ್ಸ್ಥಿತಿಯಲ್ಲಿದ್ದೇವೆ ಎಂದು ಹೇಳುತ್ತಾರೆ ಮಾನ್ಯ ಗುಂಡಪ್ಪನವರು.
ಹೋಗಲಿ ಹಳೆಯದನ್ನೇನೋ ಕಳೆದು ಕೊಂಡಿದ್ದೇವೆಹೊಸದೇನಾದರೂ ಇದೆಯೋ ಅದನ್ನು ಹಿಡಿದು ಕೊಳ್ಳೋಣವೆಂದರೆ ಅದೂ ಇಲ್ಲ. ನಮ್ಮ ದೇಶದಲ್ಲೇ ಅಲ್ಲ ಇಡೀ ಜಗತ್ತಿನ ಪರಿಸ್ಥಿತಿಯೇ ಹೀಗಿದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯವಾದುದರಿಂದವಾಚಕರೆಇದನ್ನು ಬೇರೆಯಾಗಿಯೇ ವಿಶ್ಲೇಷಣೆ ಮಾಡಿ ಚರ್ಚಿಸುವುದೇ ಒಳ್ಳೆಯದು ಎಂದು ನನಗನಿಸುತ್ತದೆ. ನಮ್ಮ ಭಾರತೀಯ ಸಮಾಜದಲ್ಲಿ ಬೇರೆ ಯಾವ ದೇಶದಲ್ಲೂ ಸಿಗದಂತ ಅತ್ಯಮೂಲ್ಯವಾದ ಸಂಸ್ಕೃತಿಪರಂಪರೆಧರ್ಮಬೋದನೆ ಎಲ್ಲವೂ ಇದೆ ಅದನ್ನು ಪುನರುಜ್ಜೀವನ ಗೊಳಿಸಿ ಮುಂದಿನ ಪೀಳಿಗೆಗೆ ಎರಕಹೊಯ್ಯಬೇಕಾದ ಉತ್ತರದಾಯತ್ವ ನಮ್ಮೆಲ್ಲರ ಮೇಲಿದೆ. ಕನ್ನಡಿಯ ಮೇಲಿನ ಧೂಳನ್ನು ಒರೆಸಿಶುದ್ಧಿಗೊಳಿಸಿ ಪ್ರತಿಬಿಂಬ ನಿಚ್ಚಳವಾಗಿ ಕಾಣುವಂತೆ ಮಾಡಬೇಕಾಗಿದೆ.
ರಸಧಾರೆ - 016
ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ |
ವಲೆವಂತೆ ಲೋಕ ತಲ್ಲಣಿಸಿಹುದಿಂದು ||
ಹಳೆಧರ್ಮ ಸತ್ತಿಹುದು ಹೊಸ ಧರ್ಮ ಹುಟ್ಟಿಲ್ಲ ||
ತಳಮಳಕೆ ಕಡೆಯೆಂದು  ಮಂಕು ತಿಮ್ಮ ||
ಇಳೆಯ ಬಿಟ್ಟಿನ್ನುಮೆತ್ತಲುಮೈದದ = ಇಳೆಯ + ಬಿಟ್ಟು + ಇನ್ನು + ಎತ್ತಲುಂ + ಐದದಪ್ರೇತವಲೆವಂತೆ = ಪ್ರೇತವು + ಅಲೆವಂತೆಕಡೆಯಂದು = ಕಡೆ + ಎಂದು
ಇಳೆ = ಭೂಮಿಎತ್ತಲುಂ = ಯಾವಕಡೆಗೂಐದದ = ಸೇರದಪ್ರೇತ = ಮರಣಾನಂತರದ ಪ್ರಯಾಣದಲ್ಲಿ ಇರುವ ಆತ್ಮದ ಸ್ಥಿತಿ. ತಲ್ಲಣಿಸಿಹುದು + ಒದ್ದಾಡುತ್ತಿದೆ.
ಈ ಭೂಮಿಯನ್ನು ಬಿಟ್ಟು ಎತ್ತಲೂ ಸೇರದ ಪ್ರೇತದಂತೆ ಲೋಕ ತಲ್ಲಣಿಸುತ್ತಿದೆ. ಹಳೆ ಧರ್ಮ ಸತ್ತಿದೆ. ಹೊಸ ಧರ್ಮ ಹುಟ್ಟಿಲ್ಲ ತಳಮಳಕೆ ಕಡೆ ಎಂದು ಮಂಕುತಿಮ್ಮ ಎಂದು ತಮ್ಮನ್ನು ತಾವೇ ಪ್ರಶ್ನಿಸುತ್ತಾ ಅದೇ ಪ್ರಶ್ನೆಯನ್ನು ನಮ್ಮ ಮುಂದಿಡುತ್ತಾರೆ.
ಭಾರತ ದೇಶವು ಅನ್ಯ ದೇಶದವರ ಆಕ್ರಮಣಕ್ಕೆ ಬಲಿಯಾಗಿಹಾಗೆ ಬಂದ ಆಕ್ರಮಣಕಾರರು ಈ ದೇಶದಲ್ಲೇ ನೆಲೆಯೂರಿ ನಿಂತಾಗಅವರ ನಂಬಿಕೆಗಳು ವಿಶ್ವಾಸಗಳು ಅಚಾರ ವಿಚಾರಗಳು ಉಡುಗೆ ತೊಡಿಗೆಗಳ ಶೈಲಿ ಹೀಗೆ ಎಲ್ಲವೂ ನಮ್ಮ ದೇಶದ ಸಂಸ್ಕೃತಿಯ ಮೇಲೆ ತನ್ನ ಪರಿಣಾಮವನ್ನು ಬೀರುತ್ತಕಾಲಕ್ರಮದಲ್ಲಿ ಇಲ್ಲಿನ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ನೆಲೆ ನಿಂತಿತು. ಆಗ ಅದರದು ಬೇರೆಯೇ ರೂಪ. ಆ ರೂಪ ಹಳೆಯದನ್ನು ಬಿಡಲಾಗದೆಹೊಸದನ್ನು ಸಂಪೂರ್ಣ ಅಳವಡಿಸಿಕೊಳ್ಳಲಾಗದೆ ಒಂದು ಹೊಸರೂಪವನ್ನೇ ತಾಳಿತು. ಆದರೆ ಆ ಹೊಸರೂಪದಲ್ಲೂ ಒಂದು ತಳಮಳಒಂದು ಚಡಪಡಿಕೆ ಇತ್ತು. ಅತ್ತ ಹಳೆಯದನ್ನು ಬಿಟ್ಟರೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಭಯಇತ್ತ ಹೊಸದರ ಹೊಸತನದ ಮೋಜು. ಇವೆರಡರ ರೂಪವೇ ಒಂದು ಎಡಬಿಡಂಗಿ ಸ್ವರೂಪ. ಇಂದು ನಾವು ಇರುವುದೇ ಅಂತಹ ಸ್ಥಿತಿಯಲ್ಲಿ. ಇದನ್ನು ಶ್ರೀ ಗುಂಡಪ್ಪನವರು ”  ಭೂಮಿಯನ್ನು ಬಿಟ್ಟು ಎತ್ತಲೂ ಸೇರದ ಪ್ರೇತದಂತೆ ” ಎಂದು ಹೇಳುತ್ತಾರೆ. ಇದು ಒಂದು ಉಪಮೆ ಅಷ್ಟೇ. ಸನಾತನದಲ್ಲಿ ಅಂತಹ ನಂಬಿಕೆ ಉಂಟು. ಅನ್ಯರಲ್ಲೂ ಬೇರೆ ಬೇರೆ ರೂಪದಲ್ಲಿ ಆ ನಂಬಿಕೆ ಉಂಟು. ಆದರೆ ತಮ್ಮನ್ನು ತಾವು ಪ್ರಗತಿಪರರು ಅಥವಾ ಬುದ್ಧಿಜೀವಿಗಳು ಎಂದು ಅಂದುಕೊಂಡಿರುವ ಕೆಲವರುಇದರ ಸೂಕ್ತತೆಯನ್ನು ಮತ್ತು ಪ್ರಸ್ತುತತೆಯನ್ನು ಪ್ರಶ್ನಿಸುತ್ತಾರೆ. ಹಾಗೆ ಪ್ರಶ್ನೆ ಮಾಡುವಅಲ್ಲಗೆಳೆಯುವ ಮತ್ತು ಟೀಕಿಸುವ ಹಕ್ಕು ಅವರಿಗೆ ಉಂಟು.
ಹಾಗೆ ಹಳೆಯದನ್ನು ಬಿಟ್ಟೂ ಬಿಡದ ಹಂಗೆಹೊಸದನ್ನು ಹಿಡಿದೂ ಹಿಡಿಯದ ಹಂಗೆ ಇಂದಿನ ಸಮಾಜದಲ್ಲಿ ಎಲ್ಲರೂ ಇದ್ದಾರೆ. ಅದಕ್ಕೆ ಹಲವಾರು ಕಾರಣಗಳು. ವಿಧ್ಯಾಭ್ಯಾಸದ ಕ್ರಮ ಬದಲಾವಣೆಹೊಸ ಹೊಸ ಸಾಧನಗಳು ಮತ್ತು ಮಾಹಿತಿ ತಂತ್ರಜ್ಞಾನದ ಸ್ಫೋಟಜಾಗತೀಕರಣಹೀಗೆ ಹತ್ತು ಹಲವಾರು. ಹಿಂದೆ ಇದ್ದದ್ದು ಇಂದು ಇಲ್ಲ. ಇಂದು ಇರುವುದು ಮುಂದಿರುವುದಿಲ್ಲ. ಅಂತಹ ಸ್ಥಿತಿಯಲ್ಲಿ ಜನರು ಯಾವುದೇ ಒಂದು ನಿರ್ಧಿಷ್ಟತೆಯಲ್ಲಿ ಇರದೇ ಒಂದು ಅತಂತ್ರದ ಸ್ಥಿತಿಯಲ್ಲಿದ್ದಾರೆ ಎಂದು ಮಾನ್ಯ ಗುಂಡಪ್ಪನವರ ಹೇಳುತ್ತಾರೆ. ಭಾಷೆಜೀವನದ ಶೈಲಿಉದ್ಯೋಗಸಂಪಾದನೆ ಎಲ್ಲವೂ ಇಂದಿನ ಜನಾಂಗದ ಮೇಲೆ ಪರಿಣಾಮ ಬೀರಿದೆ. ಇಂದು ನಾವು ಹೊಸದಾಗಿ ಕಾಣುತ್ತಿರುವ ಹೊಸ ವಿಧ್ಯಮಾನವೇನಲ್ಲ. ನಮ್ಮ ಭಾರತೀಯ ಇತಿಹಾಸದಲ್ಲೇ ಬೇರೆ ಬೇರೆ ಸಮಯಗಳಲ್ಲಿ ಇಂತಹ ಅತಂತ್ರ ಸ್ಥಿತಿಗಳನ್ನು ನೋಡಬಹುದು. ಅಂದಿನ ಭೌಗೋಲಿಕರಾಜಕೀಯಸಾಂಸ್ಕೃತಿಕ ಮತ್ತು ಆರ್ಥಿಕ ಸ್ಥಿತಿಗಳು ಅಂದಿಗೆಅಂದಿನ ಸ್ಥಿತಿಗೆ ಕಾರಣವಾಗುತ್ತದೆ.
ಚಾಣಕ್ಯನಂತಹ ಮುತ್ಸದ್ಧಿಗಳು ಬಂದಾಗ ಏನೋ ಒಂದು ರೀತಿಯ ಕಲರವ ಉಂಟಾಗಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು. ಆದರೆ ಸ್ವಾಭಾವಿಕವಾಗಿ ಮಾನ್ಯ ಡಿ.ವಿ.ಜಿ ಯವರು ಹೇಳಿದಂತೆ ಮತ್ತೆ ಅದೇ ಅತಂತ್ರ ಸ್ಥಿತಿಗೆ ಒಗ್ಗಿ ಹೋಗುತ್ತದೆ ಇಡೀ ಸಮಾಜ. ಆದರೆ ಇಂತಹ ಪ್ರತಿಪಾದನೆಗಳಿಗೆಕೆಲವು ವ್ಯಕ್ತಿಗಳು ಅಪವಾದವಾಗಿ ಭಿನ್ನವಾಗಿರಬಹುದು. ಶುದ್ಧ ಸತ್ವದಲ್ಲಿ ಯಾವುದು ಪುರಾತನವೋ ಯಾವುದು ಸನಾತನವೋ ಅದನ್ನು ಪಾಲಿಸುತ್ತಿರಬಹುದು. ಆದರೆ ಒಟ್ಟಾರೆ ಸಮಾಜವನ್ನು ನೋಡಿದಾಗ ಎಲ್ಲೋ ಏನೋ ಸರಿಯಿಲ್ಲ ಎನ್ನುವ ಭಾವನೆ ಬರುತ್ತದೆ. ಅದನ್ನೇ ಡಿ.ವಿ.ಜಿ ಯವರು ” ಲೋಕ ತಲ್ಲಣಿಸಿಹುದಿಂದು” ಎಂದರು.
ಆದರೆ ನಾವು ನೋಡಬೇಕಾದದ್ದು ಏನೆಂದರೆಇದು ಸರಿಯೇ ಎಂದು. ಬದಲಾವಣೆಯೇ ಪ್ರಪಂಚದ ಮೂಲ ಗುಣವಾದ್ದರಿಂದ ಇದು ಸರಿ. ಅಸ್ತಿತ್ವವನ್ನು ಕಳೆದುಕೊಳ್ಳುವುದರಿಂದ ಇದು ಸರಿಯಿಲ್ಲ. ಹಾಗಾಗಿ ಏನು ಮಾಡಬೇಕು. ಡಿ.ವಿ.ಜಿ ಯವರೆ ಮುಂದೆ ಯಾವುದೋ ಕಗ್ಗದಲ್ಲಿ ಹೇಳುತ್ತಾರೆ” ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು ಹೊಸ ಯುಕ್ತಿ ಹಳೆ ತತ್ವ…..” ಎಂದು. ಅಂದರೆ ನೈಸರ್ಗಿಕವಾದ ಮತ್ತು ಸ್ವಾಭಾವಿಕವಾದ ಬದಲಾವಣೆ ಬೇಕು ಮತ್ತು ಆಗಬೇಕು. ಆದರೆ ಹೊಸತನ್ನುಹಳೆಯ ಮತ್ತು ಕಾಲದಲ್ಲಿ ಪರಿಕಿಸಿ ನಿರೂಪಿಸಲ್ಪಟ್ಟು ಸರ್ವಕಾಲಕ್ಕೂ ಅನ್ವಯವಾಗುವಂತಾ ಸಿದ್ಧಾಂತಗಳ (theories) ಆಧಾರದಮೇಲೆ ಹೊಸತು ಪಲ್ಲವಿಸ ಬೇಕು. ಆಗ ಹಳತು ಅಂತರ್ಯದಲ್ಲಿ ಉಳಿದು ಹೊಸತು ಪಲ್ಲವಿಸಿ ಬೆಳೆದು ಹಳೆಯದಕ್ಕೆ ಹೊಳಪ್ಪಿತ್ತಂತೆ ಆಗುತ್ತದೆ. ಹೊಸತು ಹೊಳಪಿನ ಬೆಳಕಲ್ಲಿ ಸುಂದರವಾಗಿ ಕಾಣುತ್ತದೆ. ಆಗ ಎರಡೂ ಸಮನ್ವಯಗೊಂಡು ಒಂದು ಹೊಸ ನೆಲೆ ಸಿಕ್ಕಂತಾಗುತ್ತದೆ.
ಆದರೆ ವಿಷಾದವೇನೆಂದರೆ ಇಂದು ಯಾರಿಗೂ ಹಳೆಯದು ಬೇಡ. ಅದರ ಅರ್ಥ ಬೇಡ. ಅದರ ಸತ್ವ ಬೇಡ. ಅದನ್ನು ಗೊಡ್ಡು ಸಂಪ್ರದಾಯ ಎಂದು ಮೂದಲಿಸುವಜರಿಯುವನೇಪಥ್ಯಕ್ಕೆ ಸರಿಸುವ ಇಂದಿನ ಜನಾಂಗವು ಸತ್ಯವಾಗಲೂ ಗುಂಡಪ್ಪನವರು ಹೇಳಿದಂತೆ ಎತ್ತಲೂ ಸೇರದ ಪ್ರೇತದಂತೆ ಲೋಕ ತಲ್ಲಣಿಸುತ್ತಿದೆ”.ಅಂತರ್ಪಿಶಾಚಿಗಳ ತರಹೆ ಇದ್ದಾರೆ.
ಎಲ್ಲರಲ್ಲೂ ಹಳೆಯ ಸತ್ವಯುತವಾದ ಸಿದ್ಧಾಂತಗಳಸಂಸ್ಕೃತಿಯಸಂಸ್ಕೃತಿಯನ್ನು ಒಳಗೊಂಡ ಭಾಷೆಸಾಹಿತ್ಯಕಲೆ ಮುಂತಾದವುಗಳನ್ನು ಪುರುಜ್ಜೀವನ ಮಾಡಲು ಒಂದು ಪ್ರಾಮಾಣಿಕ ಪ್ರಯತ್ನ ನಡೆಯಬೇಕು. ಅಂತಹ ಪ್ರಯತ್ನ ಎಲ್ಲ ಅಯಾಮಗಳಿಂದಲೂ ಒಂದೇ ಸಲಕ್ಕೆ ಒಂದು ಸ್ಫೋಟದಂತೆ ಆದಾಗ ಒಂದು ಸಕಾರಾತ್ಮಕವಾದ ಬದಲಾವಣೆಯನ್ನು ನಾವು ನೋಡಬಹುದು. ನಮ್ಮ ಭಾರತೀಯತೆಯನ್ನುಸಂಸ್ಕೃತಿಯನ್ನು ಉಳಿಸಬೇಕಾದರೆ ಅಂತಹ ಪ್ರಯತ್ನ ಅಗತ್ಯ.
ಬನ್ನಿ ಮಿತ್ರರೇನಾವೂ ಅಂತಹ ಪ್ರಯತ್ನದಲ್ಲಿ ನಮ್ಮನ್ನು ನಾವೇ ತೊಡಗಿಸಿಕೊಳ್ಳೋಣ. ಅಂತಹ ವಿಚಾರಮಾಡುತ್ತಾ ಮುಂದಿನ ಕಗ್ಗಕ್ಕೆ ಹೋಗೋಣ.
ಲೋಕಜೀವನ ಮಂಥನ ರಸಧಾರೆ - 017
ತಳಮಳವಿದೇನಿಳೆಗೆದೇವದನುಜರ್ ಮಥಿಸೆ
ಜಳಧಿಯೊಳಾದಂತೆ ಸುಧೆಗೆ ಪೀಠಿಕೆಯೇಂ?
ಹಾಲಾಹಲವ ಕುಡಿವ ಗಿರೀಶನಿರ್ದೊಡೀ
ಕಳವಳವದೇತಕೆಲೋ ಮಂಕುತಿಮ್ಮ
ತಳಮಳವಿದೇನಿಳೆಗೆ = ತಳಮಳವಿದು + ಏನು + ಇಳೆಗೆದೇವಮನುಜರ್ = ದೇವದ + ಅನುಜರ್
ಜಳಧಿಯೊಳಾದಂತೆ = ಜಲಧಿಯೊಳು + ಆದಂತೆಗಿರೀಶನಿರ್ದೊಡೀ = ಗಿರೀಶನು + ಇರ್ದೊಡೆ,
ಕಳವಳವದೇತಕೆಲೋ = ಕಳವಳವು + ಅದು+ ಏತಕೆ+ ಎಲೋ,
ದೇವದನುಜರ್ = ದೇವಲೋಕದ ಅಣ್ಣ ತಮ್ಮಂದಿರು ಮಥಿಸೆ= ಕಡೆಯೆಜಲಿಧಿ = ಸಮುದ್ರಸುಧೆ = ಅಮೃತಪೀಠಿಕೆ = ಭೂಮಿಕೆಪ್ರಸ್ತಾವನೆಹಾಲಾಹಲ = ವಿಷಗಿರೀಶ = ಶಿವ
ತಳಮಳವದೇನು ಇಳೆಗೆ ದೇವದುಜರು ಮಥಿಸೆ ಜಲಧಿಯೊಳು ಆದಂತೆಸುಧೆಗೆ ಪೀಠಿಕೆಯೇನುಹಲಾಹಲವ ಕುಡಿಯಲು ಗಿರೀಶನಿರುವಾಗ ಕಳವಳವದು ಏತಕೆ ಎಲೋ ಮಂಕುತಿಮ್ಮ.
ಇಲ್ಲಿ ಒಂದು ಆಶಾಭಾವನೆಯನ್ನು ವ್ಯಕ್ತಪಡಿಸುತ್ತಾರೆಶ್ರೀ ಗುಂಡಪ್ಪನವರು. ಆಗ ಎಲ್ಲೆಲ್ಲೂ ಅತಂತ್ರದ ಸ್ಥಿತಿ. ಹಳೆಯ ಭಕ್ತಿ ಶ್ರದ್ಧೆಗಳು ಸಶಿಸಿ ಹೊಸದು ಯಾವುದೋ ಇಲ್ಲದೆಒಂದು ಅತಂತ್ರದ ಸ್ಥಿತಿ ಇದೆ. ಜನರೆಲ್ಲಾ ಕಳವಳ ಗೊಂಡು ತಳಮಳಿಸುತ್ತಿದ್ದಾರೆ. ಅಂತ ಸ್ಥಿತಿಯಲ್ಲಿ ಇವರಿಗೊಂದು ಆಶಾಭಾವನೆ. ಅದನ್ನು ಅವರು ಈ ಕಗ್ಗದಲ್ಲಿ ಸೂಚಿಸುತ್ತಾರೆ.
ಹಿಂದೆದೇವಲೋಕದಲ್ಲಿ ಅಮೃಥವನ್ನು ಪಡೆಯಲು ಸಮುದ್ರ ಮಂಥನ ನಡೆಯಿತು. ಅದನ್ನು ನಡೆಸಿದವರು ದೇವತೆಗಳು ಮತ್ತು ದಾನವರು. ಇವರನ್ನು ಗುಂಡಪ್ಪನವರು ಸೂಕ್ತವಾಗಿ ದೇವಲೋಕದ ಅನುಜರ್” ಎಂದು ಸಂಬೋಧಿಸುತ್ತಾರೆ. ಏಕೆಂದರೆ ಪುರಾಣದ ಪ್ರಕಾರ ಈ ದೇವತೆಗಳು ಮತ್ತು ದಾನವರು ಇಬ್ಬರೂ ಕಶ್ಯಪ ಬ್ರಹ್ಮನ ಮಕ್ಕಳು. ಹಾಗಾಗಿ ಅವರನ್ನು ಅಣ್ಣ ತಮ್ಮಂದಿರು ಎಂದಿದ್ದಾರೆ. ವಾಚಕರು ಈ ದೇವದಾನವರು ನಡೆಸಿದ ಅಮೃತ ಮಂಥನದ ಕಥೆಯನ್ನು ಬೇರೆಯಾಗಿ ಓದಬೇಕಾಗಿ ವಿನಂತಿ. ಆದರೆ ಆ ಮಂಥನದಲ್ಲಿ ಮೊದಲು ಹಾಲಾಹಲ ಅಂದರೆ ವಿಷದ ಉದ್ಭವವಾಯಿತಂತೆ. ಘನ ಘೋರ ವಿಷವನ್ನು ಲೋಕ ಕಲ್ಯಾಣಕ್ಕಾಗಿ ಗಿರಿಜಾಪತಿ ಪರಮಶಿವನು ಕುಡಿದುಬಿಟ್ಟನಂತೆ. ಅದನ್ನು ಪಾರ್ವತಿ ಕಂಠದಲ್ಲೇ ತಡೆದದ್ದರಿಂದ ಅದು ಅಲ್ಲೇ ನಿಂತುಶಿವನು ನೀಲಕಂಠ ಮತ್ತು ವಿಷಕಂಠನಾದನಂತೆ.
ಹಿಂದಿನ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು II ಹಳೆ ಧರ್ಮ ಸತ್ತಿಹುದು ಹೊಸ ಧರ್ಮ ಹುಟ್ಟಿಲ್ಲ – ತಳಮಳಕೆ ಕಡೆಯೆಂದು – ಮಂಕು ತಿಮ್ಮ II ಎಂದು ತಮ್ಮ ಕಳವಳವನ್ನು ವ್ಯಕ್ತಪಡಿಸುತ್ತಾರೆ. ಆ ಕಳವಳಕ್ಕೆ ಉತ್ತರವೆಂಬಂತೆ ಈ ಕಗ್ಗದಲ್ಲಿ ಈ ರೀತಿಯ ಕಳವಳತಳಮಳಗಳು ಸಹಜ. ಒಂದು ಉತ್ತಮವಾದ ವಸ್ತು ಈ ಪ್ರಪಂಚಕ್ಕೆ ಸಿಗಬೇಕಾದರೆ ಈ ರೀತಿಯ ಮಥನ ವಾಗಬೇಕು. ಇಲ್ಲಿ ದೇವದಾನವರ ಉಲ್ಲೇಖಮಾಡಿ ಮನುಷ್ಯನ ಅಂತರ್ಯದಲ್ಲಿರುವ ” ಒಳ್ಳೆಯ ಮತ್ತು ಕೆಟ್ಟ ” ಗುಣಗಳನ್ನು ಸೂಚ್ಯವಾಗಿಸುತ್ತಾರೆ.
ಮನುಷ್ಯನ ಮನಸ್ಸಿನಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಪ್ರಮಾಣ ಮತ್ತು ಪರಿಮಾಣಗಳ ವ್ಯತ್ಯಾಸ ಅಷ್ಟೇ. ಯಾವುದು ಅಧಿಕವಾಗಿದ್ದರೆ ಅದರ ಪ್ರಾಬಲ್ಯ. ಆದರೆ ಒಂದು ವ್ಯಕ್ತಿಯಿಂದ ಮಹತ್ತರ ಕಾರ್ಯವಾಗಬೇಕಾದರೆ ಅಂತರ್ಯದಲ್ಲೂ ತಿಕ್ಕಾಟಗಳು ತುಮಲಗಳು ನಿರಂತರ ನಡೆಯಬೇಕು. ಸಮುದ್ರಮಥನದ ರೀತಿ. ನಮ್ಮ ಲೋಕದ ಮಹಾ ಮಹಿಮರೆಲ್ಲರಿಗೂ ಇಂಥಹ ಅನುಭವವಾಗಿದೆ. ಅವರ ಪ್ರಯತ್ನದಲ್ಲಿ ಅವರಿಗೆ ” ವಿಷದ” ರೂಪದಲ್ಲಿ ಬೇಕಾದಷ್ಟು ಕಷ್ಟಗಳು ಬಂದಿವೆ. ಆ ಮಹಾಮಹಿಮರೆಲ್ಲ ಅಂತಹ ಕಷ್ಟಗಳನ್ನೆಲ್ಲ ” ಪರಶಿವನು ಹಾಲಾಹಲವನ್ನು ಕುಡಿದಂತೆ ” ನುಂಗಿ ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ತ್ಯಾಗಮಾಡಿದ್ದಾರೆ. ಉದಾಹರಣೆಗೆನಮ್ಮ ದೇಶಕ್ಕೆ ಚಾಣಕ್ಯ ವಿಷ್ಣು ಶರ್ಮನ ಕೊಡುಗೆ ಅಪಾರ. ಅಷ್ಟೇ ಕಷ್ಟ ನಿಷ್ಟೂರಗಳನ್ನು ಆಭವಿಸಿದ ಅವನು. ಹೀಗೆಶಂಕರರುರಾಮಾನುಜರುಬಸವಣ್ಣನವರುನಮ್ಮ ದೇಶದ ಸ್ವಾತಂತ್ರ ಹೋರಾಟಗಾರರಾದ ಭಗತ್ ಸಿಂಗ್ಚಂದ್ರಶೇಖರ್ ಅಜಾದ್ರಾಜಗುರುಬೋಸ್ ಮುಂತಾದ ಅನೇಕ ವೀರರು ಸ್ವಾರ್ಥ ತೊರೆದು ಲೋಕಕಲ್ಯಾಣಕ್ಕಾಗಿ ಕಷ್ಟಗಳೆಂಬ ವಿಷವನ್ನುಪರಶಿವನಂತೆ ಕುಡಿದ ದೃಷ್ಟಾಂತಗಳು ನಮಗೆ ಹೇರಳವಾಗಿ ಸಿಗುತ್ತದೆ.
ಅದೇ ರೀತಿ ಇಂದು ಇರುವ ಪರಿಸ್ಥಿತಿಯೂ ಬದಲಾಗಿ ಇಂದಿರುವ ವಿಷ ಮತ್ತ ವಿಷಮ ಪರಿಸ್ಥಿತಿ ಕರಗಿ ಅಮೃತ ಹುಟ್ಟುವುದಕ್ಕೆ ಈ ರೀತಿಯ ತಿಕ್ಕಾಟವೇತುಮುಲಗಳೇತಳಮಳವೇ ಪೀಠಿಕೆಯೋ ಎಂದು ಕೇಳುತ್ತಾರೆ ಶ್ರೀ ಗುಂಡಪ್ಪನವರು. ಅಂದು ಪರ ಶಿವನು ” ವಿಷವನ್ನು ಕುಡಿದು ಲೋಕಕಲ್ಯಾಣವನ್ನು ಮಾಡಿದಹಾಗೆ ಇಂದೂ ಯಾರಾದರೂ ಬರಬಹುದೆಂದು ಅವರ ಆಸೆ. ಅವರ ಅಶಾಭಾವಕ್ಕೆ ಒಂದು ನಮಸ್ಕಾರ.
ಆದರೆ ವಾಚಕರೆವಿಚಾರ ಮಾಡಿ ನೋಡಿ. ಅಂದಿನ ಮಥನದಿಂದ ಅಂದರೆ ಲೋಕದ ದ್ವಂದ್ವಗಳಿಂದ ಮತ್ತು ಆ ದ್ವಂದ್ವಗಳ ತಿಕ್ಕಾಟದಿಂದತೊಳಲಾಟದಿಂದ ಇನ್ನೂ ಅಮೃತ ಬಂದೆ ಇಲ್ಲ. ಎಲ್ಲೆಲ್ಲೂ ವಿಷಮ ಸ್ಥಿತಿಯ ವಿಷದ ಧಾರೆ ಹರಿಯುತ್ತಿದೆ. ದ್ವೇಷಾಸೂಯೆಗಳಭಾಷಾಸೂಯಗಳಅಹಂಕಾರದಜನಬಲದ ಮದಧನಬಲದ ಮದಅಧಿಕಾರ ಮದದ ವಿಷದ ಗಾಳಿ ಎಲ್ಲೆಲ್ಲೂ ಹರಡಿದೆ. ಇಡೀ ಸಮಾಜ ಪ್ರೀತಿ ಕರುಣೆ ವಾತ್ಸಲ್ಯಗಳ ಕೊರತೆಯಿಂದ ಸೊರಗಿದೆ. ಹಳೆಯ ಶ್ರದ್ಧೆ -ಭಕ್ತಿಗಳ ಮತ್ತು ಆಧುನೀಕತೆಯಡಂಬ ತೋರಿಕೆಯ ಜೀವನದ ನಡುವೆಯ ಅಂತರ ಅಗಾಧವಾಗುತ್ತಿದೆ.
ಅಂದು ಅಂದರೆ ಈಗ್ಗೆ ಎಂಬತ್ತು ವರ್ಷಗಳ ಹಿಂದೆ ಡಿ.ವಿ.ಜಿ.ಯವರು ಕಂಡ ಅಮೃತದ ಕನಸು ನನಸಾಗುವ ಕಾಲ ಬಂದೀತೆ ಎಂದರೆನಾವು ಆಶಾಭಾವನೆಯನ್ನು ಎಂದಿಗೂ ಬಿಡಬಾರದುಇಂದಿನ ಯುವ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆಹಿಂದಿನ ತತ್ವಗಳ ಸತ್ವವನ್ನು ತಿಳಿಸಿಕೊಡಬೇಕು. ಅವುಗಳ ಅರಿವು ಮೂಡಿಸಬೇಕು. ಬಹಳಷ್ಟು ಜನ ಆ ಪ್ರಯತ್ನದಲ್ಲಿ ಇದ್ದರೂ ಇಷ್ಟು ವಿಶಾಲವಾದ ದೇಶದಲ್ಲಿ ಆಧುನೀಕತೆಯ ಪೊಳ್ಳು ಸಂಸ್ಕೃತಿಯ ವ್ಯಾಪ್ತಿಯನ್ನು ಮುಟ್ಟಲು ಇನ್ನೂ ಸಾಧ್ಯವಾಗಿಲ್ಲ. ಶೀಘ್ರವೇ ಫಲ ಬೇಕಾದಲ್ಲಿಸಮರೋಪಾದಿ ಕಾರ್ಯಗಳು ನಡೆದು ನಮ್ಮ ಭಾರತೀಯ ಅಸ್ಮಿತೆಯನ್ನು ಅರಿತುಕೊಳ್ಳಲು ಮತ್ತು ಕಾಪಾಡಲು ಎಲ್ಲರೂ ಪ್ರವೃತ್ತರಾಗಬೇಕು. ಅದಕ್ಕೆ ನಾವು ನೀವು ಎಲ್ಲರೂ ಪ್ರಯತ್ನಪಟ್ಟು ನಮ್ಮ ಸುತ್ತು ಮುತ್ತಲಿನವರನ್ನೂ ಅದಕ್ಕೆ ಪ್ರೇರೇಪಿಸಿದರೆ ಅದು ಸಾಧ್ಯ.
ಅಂಥಹ ಪ್ರಯತ್ನವನ್ನು ಮಾಡುವ ಧೃಢ ಸಂಕಲ್ಪವನ್ನು ಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗುವ.
ರಸಧಾರೆ - 018
ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ |
ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲ ವದಕೆ ||
ಬದುಕೇನು ಸಾವೇನು ಸೊದೆಯೇನು ವಿಷವೇನು? |
ಉದಕಬುದ್ಬುದವೆಲ್ಲ !  ಮಂಕುತಿಮ್ಮ ||
ತೆರೆಯವೊಲುರುಳಿ = ತೆರೆಯವೊಲು ಉರುಳಿಉದಕಬುದ್ಬುದವೆಲ್ಲ = ಉದಕ ಬುದ್ಬುದವು ಎಲ್ಲ.
ತೆರೆಯವೊಲು = ನದಿಯ ಅಲೆಯಂತೆ ಮುಗಿವಿಲ್ಲ = ಕೊನೆಯಿಲ್ಲನಿಲುವಿಲ್ಲ = ನಿಲುವು ಅಂದರೆ ಸ್ಥಿರತೆ,. ಸೊದೆಯೇನು = ಅಮೃತವೇನುಉದಕ = ನೀರುಬುದ್ಬುದ = ಗುಳ್ಳೆ
ನದಿಯ ತೆರೆಯಂತೆ ಉರುಳಿ ಹೊರಳುತಿದೆ ಜೀವಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲ ಅದಕೆ ಬದುಕೇನು ಸಾವೇನು ಸೊದೆಯೇನು ವಿಷವೇನು ಉದಕದ ಬುದ್ಬುದವು ಎಲ್ಲ ಮಂಕುತಿಮ್ಮ.
ವಾಚಕರೆ ಹಿಂದಿನ ಕಗ್ಗದಲ್ಲಿ ಈ ಹಳತು ಹೊಸತನದ ತಿಕ್ಕಾಟವನ್ನು ಅಮೃತಕ್ಕಾಗಿ ನಡೆಯುವ ಸಮುದ್ರ ಮಂಥನಕ್ಕೆ ಹೋಲಿಸಿದರು ಮಾನ್ಯ ಡಿ.ವಿ.ಜಿ ಯವರು.ಆದರೆ ಇಂದಿನ ಕಗ್ಗದಲ್ಲಿ ಒಂದು ವೇದಾಂತದ ಮಾತನ್ನು ಸೂಚಿಸಿದ್ದಾರೆ. ಇಡೀ ಜೀವನವನ್ನು ಅವರು ಒಂದು ನದಿಯ ತೆರೆ ಅಥವಾ ಅಲೆಯಂತೆ ಎಂದಿದ್ದಾರೆ. ಒಂದು ನಿಮಿಷವೂ ಒಂದೇ ತೆರನಾಗಿ ಇರದ ನದಿಯ ತೆರೆಗೆ ಹೋಲಿಸಿದ್ದಾರೆ.
ಹೌದು ಯಾರ ಜೀವನವೂ ಎಂದೂ ಒಂದೇ ತೆರನಾಗಿ ಇರುವುದಿಲ್ಲ. ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ನಾನು ಅದನ್ನು kaleidoscopic ಲೈಫ್ ಎಂದು ಕರೆಯುತ್ತೇನೆ. ಕೆಲಿಡೋಸ್ಕೊಪ್ ಎನ್ನುವುದು ನಾವು ಚಿಕ್ಕಂದಿನಲ್ಲಿ ಮೂರು ಬಿಳಿಯ ಗಾಜಿನ ಪಟ್ಟಿಗಳನ್ನು ತೆಗೆದುಕೊಂಡು ಮೂರನ್ನೂ ತ್ರಿಕೋನಾಕಾರದಲ್ಲಿ ಜೋಡಿಸಿ ಎಲ್ಲ ಬದಿಯಿಂದಲೂ ಬಂಧಿಸಿ ಒಂದು ಕೊನೆಯನ್ನು ಮುಚ್ಚ್ಚಿ ಸುತ್ತಲೂ ಕಾಗದವನ್ನು ಸುತ್ತಿ ಬಿಡುತ್ತಿದ್ದೆವು. ತೆರೆದ ಬದಿಯಿಂದ ಒಡೆದ ಗಾಜಿನ ಬಳೆಯ ಚೂರುಗಳನ್ನು ಹಾಕಿದರೆ ಒಂದು ಚಿತ್ತಾರ (ಡಿಸೈನ್) ಮೂಡುತ್ತಿತ್ತು. ಅದನ್ನು ತಿರುಗಿಸುತ್ತಾ ಹೋದಂತೆಲ್ಲಬೇರೆಬೇರೆ ಚಿತ್ತಾರಗಳು ಮೂಡುತ್ತಿದ್ದವು. ಒಂದು ಬಾರಿ ಮೂಡಿದ ಚಿತ್ತಾರ ಮತ್ತೊಂದು ಬಾರಿಗೆ ಎಂದೂ ಬರುವುದಿಲ್ಲ. ಹಾಗೆಯೇ ನಮ್ಮ ಜೀವನಗಳು ಈಗ ಇದ್ದಂತೆ ಎಲ್ಲವೂ ಮತ್ತೆಂದಿಗೂ ಇರುವುದಿಲ್ಲ. ದಿನಕಳೆದಂತೆ ನಮ್ಮ ವಯಸ್ಸು ಒಂದು ದಿನ ಹೆಚ್ಚಾಗುತ್ತದೆ. ಒಂದು ದಿನ ಇದ್ದ ಮನೋಭಾವ ಮತ್ತೊಂದು ದಿನ ಇರುವುದಿಲ್ಲಒಂದು ಗಳಿಗೆ ಇದ್ದ ನಮ್ಮ ಯೋಚನಾ ವಿಧ ಮತ್ತೊಂದು ಗಳಿಗೆ ಇರುವುದಿಲ್ಲ. ಇದನ್ನೇ ಮಾನ್ಯ ಗುಂಡಪ್ಪನವರು ನಿಲುವಿಲ್ಲ ಎಂದರು.
ಇನ್ನು ನಾವು ಈಗ ಮನುಷ್ಯರಾಗಿ ಹುಟ್ಟಿದ್ದೇವೆಹಿಂದೆ ಏನಾಗಿದ್ದೇವೋ ಮುಂದೆ ಏನಾಗುತ್ತೇವೆಯೋ ಗೊತ್ತಿಲ್ಲ. ನಮ್ಮ ಈ ಜೀವನ ಪ್ರಯಾಣ ಎಂದು ಮೊದಲಾಯಿತೋ ಗೊತ್ತಿಲ್ಲ. ಎಂದು ಮುಗಿಯುವುದೋ ಗೊತ್ತಿಲ್ಲ. ಪ್ರಶ್ನೆಗಳು ಉದ್ಭವವಾಗಬಹುದು. ಉತ್ತರವೂ ಮಾತ್ರ ಸಿಗುವುದಿಲ್ಲ. ಇದಕ್ಕೇಮೊದಲಿಲ್ಲ ಕೊನೆಯಿಲ್ಲ ಎನ್ನುತ್ತಾರೆ ಶ್ರೀ ಗುಂಡಪ್ಪನವರು. ನಮ್ಮ ಸನಾತನ ವೇದಾಂತದ ಪ್ರಕಾರ ಒಂದು ಜೀವಿ ಮಾನವನಾಗಿ ಹುಟ್ಟಬೇಕಾದರೆ ಅದಕ್ಕೆ ಮೊದಲು ೮೪ ಲಕ್ಷ ಬಾರಿ (ಏಸು ಕಾಯಂಗಳ ಕಳೆದು ೮೪ ಲಕ್ಷ ಜೀವರಾಶಿಯನ್ನು ದಾಟಿ ಬಂದ ಈ ಶರೀರ ಎಂದು ಪುರಂಧರ ದಾಸರ ಪದ.) ಬೇರೆ ಬೇರೆ ದೇಹಗಳನ್ನು ಹೊಕ್ಕು ಹೊರಗೆ ಬಂದು ಮನುಷ್ಯನಾಗುತ್ತಾನೆಅಂದರೆ ಜೀವ ಈ ಮನುಷ್ಯ ದೇಹವನ್ನು ಹೊಗುತ್ತಾನೆ. ನಾವು ಎಂದು ಈ ಮನುಷ್ಯ ದೇಹವನ್ನು ಹೊಕ್ಕೆವೋ ಇದರಿಂದ ಮುಂದೆ ಏನೋ ಎನ್ನುವುದು ಗೊತ್ತಿಲ್ಲ. ಮತ್ತೆ ಈ ಜನ್ಮದ ನಮ್ಮ ಕರ್ಮಗಳು ಮುಂದಿನ ಜನ್ಮವನ್ನು ನಿರ್ಧರಿಸುತ್ತವೆ ಎಂದೂ ಹೇಳುತ್ತಾರೆ. ಇನ್ನೂ ಕೆಲವರು ಜೀವಿ ತಾನು ಏನಾಗಬೇಕುಎಲ್ಲಿಗೆ ಹೋಗಬೇಕು ಎನ್ನುವುದನ್ನು ತಾನೇ ನಿರ್ಧರಿಸುತ್ತಾನೆ ಎನ್ನುತ್ತಾರೆ. ಆ ನಿರ್ಧಾರಗಳು ನಮ್ಮ ಮನಸ್ಸು ಬುದ್ಧಿಗಳಿಗೆ ಗೊತ್ತಾಗುತ್ತವೆಯೋ ಇಲ್ಲವೋಎಲ್ಲವೂ ಅನಿಶ್ಚಯ. ಇದಕ್ಕೆ ಇರುವ ಆದಿಯೂ ಗೊತ್ತಿಲ್ಲ ಅಂತ್ಯವೂ ಗೊತ್ತಿಲ್ಲ. ಇದನ್ನೇ ಗುಂಡಪ್ಪನವರು ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲ ವದಕೆ” ಎಂದರು.
ಬದುಕಿನ ಅರ್ಥ ಗೊತ್ತಿಲ್ಲಅಥವಾ ನಮಗೆ ಗೊತ್ತಿರುವುದು ನಮ್ಮ ದೃಷ್ಟಿಕೋನವಷ್ಟೇಸಮಗ್ರ ಸತ್ಯವಲ್ಲವಲ್ಲ. ಸಾವಿನ ಅರ್ಥವಂತೂ ಗೊತ್ತಿಲ್ಲ. ಸಾವೆಂದರೆ ನಮಗೆ ಗೊತ್ತಿರುವುದುಒಂದು ವ್ಯಕ್ತಿ ಮೂರ್ಥರೂಪದಲ್ಲಿ ಶರೀರದಿಂದ ಇರಲಾಗದ ಸ್ಥಿತಿಯೇ ಸಾವು. ನಾನು ಇದನ್ನು ರೂಪ ಬದಲಾವಣೆ ಎನ್ನುತ್ತೇನೆ. ಹಾಗಾಗಿ ಸಾವಿನ ಬಗ್ಗೆಯೂ ನಿಖರವಾದ ಅಭಿಪ್ರಾಯವಿಲ್ಲ. ಬದುಕೇ ನಿರ್ಧಿಷ್ಟವಲ್ಲ. ಇನ್ನು ಬದುಕಿಗೆ ಸಂಬಂಧಿಸಿದ ಸುಖವೇನು (ಸೊದೆ=ಅಮೃತ ಅಂದರೆ ಸವಿ.ಆ ಸವಿಯನ್ನೇ ಸುಖ ಎಂದುಕೊಳ್ಳಬೇಕು) ವಿಷ (ದುಃಖ) ವೇನುಅದೂ ಅರ್ಥವಾಗುವುದಿಲ್ಲ. ಬದುಕೆಲ್ಲ ಒಂದು ಉದಕಬುದ್ಬುದ,ಅಂದರೆ ನೀರಿನ ಮೇಲಿನ ಗುಳ್ಳೆ ಎಂದು ಹೇಳುತ್ತಾರೆ ಗುಂಡಪ್ಪನವರು. ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ” ಎಂದು ಪುರಂದರ ದಾಸರು ಯಾರಿಗೆ ಯಾರುಂಟು ಎರವಿನ ಸಂಸಾರ ಎಂಬ ಹಾಡಿನಲ್ಲಿ ಬರೆಯುತ್ತಾರೆ. ಯಾವುದೂ ನಿರಂತರವಲ್ಲನಿಶ್ಚಯವಿಲ್ಲನಿಶ್ಚಯವಿದ್ದರೂ ನಮಗೆ ಅದರ ಅರಿವಿಲ್ಲ. ಅಂತಹ ಭಾವಗಳನ್ನೇ ವ್ಯಕ್ತಪಡಿಸುತ್ತಾರೆ ಶ್ರೀ ಗುಂಡಪ್ಪನವರು.
ಇದು ವೇದಾಂತದ ಮಾತು. ಇದು ಸತ್ಯ. ಈ ಸತ್ಯದ ತಳಹದಿಯಲ್ಲೇ ನಮ್ಮ ಜೀವನ ಸಾಗಬೇಕು. ಆದರೆ ನಾವು ” ಅಯ್ಯೋ ಜೀವನವೆಲ್ಲ ನಶ್ವರಯಾವುದೂ ಶಾಶ್ವತವಲ್ಲ ನಾನೇಕೆ ಏನಾದರೂ ಮಾಡಬೇಕು” ಎಂದು ನಿರಾಸೆಯ ಭಾವ ತಳೆಯಬಾರದು. ಅದು ಬದುಕಿಗೆ ಮಾರಕ. ಬದುಕಿಗೆ ಪೂರಕವಾದ ಸದಾಶಾಭಾವನ್ನೇ ಇಟ್ಟುಕೊಂಡು ಜೀವನವನ್ನು ಸಾಗಿಸಬೇಕು. ” ಸದಶಾಭಾವವಷ್ಟೇ” ಇರಬೇಕು. ಎಲ್ಲವೂ ಯಾವುದೋ ಒಂದು ಪರಮ ಶಕ್ತಿಯ ಅಧೀನದಲ್ಲಿ ಮತ್ತು ಅದರ ಇಚ್ಚೆಯಂತೆ ನಡೆಯುತ್ತದೆ. ನಮ್ಮ ಪ್ರಮೇಯವಿದ್ದಂತೆ ಕಂಡರೂ ಇಲ್ಲದ ಮತ್ತು ಅದಕ್ಕೆ ತದ್ವಿರುದ್ಧವಾದ ಅನುಭವಗಳು ನಮಗೆ ಆಗುತ್ತವೆ. ಹಾಗಾಗಿ ನಾವು ಆ ಪರಮ ಶಕ್ತಿಯ ಅಧೀನದಲ್ಲಿರುವುದರಿಂದ ಅದಕ್ಕೆ ಡಿ.ವಿ.ಜಿ.ಯವರು ಹೇಳುವಂತೆ ” ಆ ವಿಚಿತ್ರಕೆ ಶರಣಾಗೋ ” ಎಂಬಂತೆ ಇರಬೇಕು.
ಆದರೆ ಜೀವನದಲ್ಲಿ ಇದ್ದರೂ ಯಾವುದಕ್ಕೂ ಅಂಟದೆ ತಾವರೆ ಎಲೆಯ ಮೇಲಿನ ನೀರ ಹನಿಯಂತೆ ಇರಬೇಕು. ಇದ್ದರೆ ನೆಮ್ಮದಿಸುಖ ಮತ್ತು ಆನಂದ. ಹೇಳುವುದು ಸುಲಭ ಆಚರಣೆ ಬಹಳ ಕಷ್ಟ. ಆದರೆ ಅಸಾಧ್ಯವಲ್ಲವಲ್ಲ. ಪ್ರಯತ್ನ ಪಡೋಣ ಎಂದೋ ಒಂದು ದಿನ ನಮಗೂ ಆ ಆನಂದದ ನೆಲೆ ಸಿಗಬಹುದು.
ರಸಧಾರೆ - 019
ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು |
ಆಳೆನಿಪುದಂತಾಗದಿರೆ ಬರಿಯ ಹೆಂಟೆ ||
ಬಾಳೇನು ಧೂಳು ಸುಳಿಮರ ತಿಕ್ಕಿದುರಿಯ ಹೊಗೆ|
ಕ್ಶ್ವೇಳವೇನಮೃತವೇಂ  ಮಂಕುತಿಮ್ಮ ||

ಮಣ್ಣು೦ಡೆಯೊಳಹೊಕ್ಕು = ಮಣ್ಣ + ಉಂಡೆ + ಒಳ + ಹೊಕ್ಕು ಹೊರಹೊರಳಲದು = ಹೊರ + ಹೊರಳಲು + ಅದು
ಆಳೆನಿಪುದಂತಾಗದಿರೆ = ಆಳು + ಎನಿಪುದು + ಅಂತೆ + ಆಗದಿರೆತಿಕ್ಕಿದುರಿಯ = ತಿಕ್ಕಿದ + ಉರಿಯಕ್ಶ್ವೇಳವೇನಮೃತವೇಂ = ಕ್ಶ್ವೇಳವೇನು + ಅಮೃತವೇನು
ಈ ದೇಹವನ್ನು ಮಣ್ಣು೦ಡೆಗೆ ಹೋಲಿಸಿದ್ದಾರೆ ಮತ್ತು ಈ ದೇಹದಲ್ಲಿ ಆಡುವ ಉಸಿರು (ಗಾಳಿ) ಆಡುತ್ತಿದ್ದರೆ ನಾವುಗಳು ಆಳು” ಎಂದು ಎನ್ನಿಸಿ ಕೊಳ್ಳುತ್ತೇವೆ. ಇಲ್ಲದಿದ್ದರೆ ಈ ದೇಹ ಬರೀ ಮಣ್ಣಿನ ಹೆಂಟೆ ಎಂದು ಒಂದು ಅತ್ಯುತ್ತ್ತಮ ಸತ್ಯವನ್ನು ಪ್ರತಿಪಾದಿಸುತ್ತಾರೆ. ಇಂದು ನಮ್ಮ ಸ್ನೇಹಿತರೊಬ್ಬರು ಇದಕ್ಕೆ ಸರಿಯಾಗಿ” ಬಡಿತ ನಿಂತರೆ ಬಡಿವಾರ ಬಂದ್ ” ಎಂದು ಹಿಂದಿನ ಕಗ್ಗಕ್ಕೆ ಪ್ರತಿಕ್ರಿಯೆ ನೀಡಿಬಹಳ ಸೂಕ್ತವಾಗಿ ಹೇಳಿದರು. ಬಹುಶಃ ಅವರಿಗೆ ಇಂದಿನ ಕಗ್ಗದ ಪರಿಚಯವಿತ್ತೇನೋ ಎಂದು ಅನ್ನಿಸುತ್ತದೆ. ಇರಲಿ ಗುಂಡಪ್ಪನವರು ಈ ಬಾಳನ್ನು ದೂಳ ಸುಳಿ ಎಂದು ಕರೆಯುತ್ತಾರೆ. ಇದು ಬಹಳ ಸೂಕ್ತವಾಗಿದೆ. ಏಕೆಂದರೆ,
ನಾನು ಹಿಂದೆ ಒಮ್ಮೆ ಈ ಬ್ರಹ್ಮಾಂಡದ ವಿವರಣೆಯನ್ನು ಮಾಡುವಾಗಇಡೀ ಬ್ರಹ್ಮಾಂಡವು ಎಷ್ಟು ದೊಡ್ಡದೆಂದರೆಇದರೆದುರು ನಾವು ಒಂದು ದೂಳ ಕಣವೂ ಅಲ್ಲ ಎಂದು ಹೇಳಿದ್ದೆ. ಈಗ ಮಣ್ಣಿಂದ ಆದಮತ್ತು ಈ ಸಮಸ್ತ ಭೂಮಂಡಲವನ್ನು ನಿವಾಸಸ್ಥಾನವನ್ನಾಗಿಸಿಕೊಂಡ ಪ್ರಾಣಿಗಳೆಲ್ಲವೂ ಧೂಳ ಕಣಗಳೇ ಎಂದು ಗುಂಡಪ್ಪನವರು ಹೇಳುತ್ತಾರೆ.
ಮಣ್ಣಿಂದ ಆದ ಜೀವಕಣಗಳು ಮತ್ತು ಈ ಜೀವಕಣಗಳಿಂದಾದ ಈ ದೇಹವೂ ಮಣ್ಣಲ್ಲವೇ? “ಮಣ್ಣಿಂದ ಕಾಯ ಮಣ್ಣಿಂದ” ಎಂದು ನಾವು ಕೇಳಿಲ್ಲವೇಹಾಗೆ ಮಣ್ಣಿಂದ ಆದ ಈ ದೇಹವನ್ನು ಮಣ್ಣ ಉಂಡೆ ಎಂದು ಹೇಳಿದ್ದಾರೆ. ಈ ಮಣ್ಣ ಉಂಡೆಯಲಿ ಗಾಳಿ ಆಡುತ್ತಿದ್ದರೆ ನಾವೂ ಸಹ ಆಳು” ಅಂದರೆ ಮನುಷ್ಯ ಎಂದು ಕರೆಯಲ್ಪಡುತ್ತೇವೆ. ಇಲ್ಲದಿದ್ದರೆ ಬರೇ ಮಣ್ಣ ಉಂಡೆ. ಆಗ ನಮ್ಮನ್ನು ಹೆಣ ಎನ್ನುತ್ತಾರೆ
ಹಾಗಿದ್ದರೆ ಈ ಬಾಳು ಅಂದರೆ ಜೀವನವು ಏನುಎಂದರೆ ಮಣ್ಣ ಕಣಗಳ ತಿಕ್ಕಾಟವೆನ್ನುತ್ತಾರೆ ಶ್ರೀ ಗುಂಡಪ್ಪನವರು. ಈ ತಿಕ್ಕಾಟದಲ್ಲಿ ಬೆಂಕಿ ಉಂಟಾಗುತ್ತದೆ ಮತ್ತು ಹೊಗೆಯಾಡುತ್ತದೆ. ದ್ವೇಷದ ಬೆಂಕಿಅಸೂಯೆಯ ಬೆಂಕಿ ಕೋಪದ ಬೆಂಕಿ ಹೀಗೆ ಹಲವಾರು ವಿಧದಲ್ಲಿ ಮನುಜ ಮನುಜರ ಮಧ್ಯೆ ಉಂಟಾಗುವ ತಿಕ್ಕಾಟ. ಆ ತಿಕ್ಕಾಟದ ಪರಿಣಾಮ ಸಾವು ನೋವುಗಳ ಪರಿಣಾಮ. ಅದೇ ಈ ಬೆಂಕಿಯಿಂದ ಬರುವ ಹೊಗೆ. ಇದರಿಂದ ಕೆಲವರಿಗೆ ಸುಖ ಕೆಲವರಿಗೆ ದುಃಖ. ಇದನ್ನೇ ಕ್ಶ್ವೇಳ ಅಂದರೆ ವಿಷವೆಂದುಸುಖ ಮತ್ತು ಆನಂದವನ್ನು ಅಮೃತವೆಂದೂ ಕರೆಯುತ್ತಾರೆ ಗುಂಡಪ್ಪನವರು.
ಪರಮಾತ್ಮನೆಂಬ ಮಹಾಜ್ಜ್ವಾಲೆಯಲ್ಲಿ ಉರಿಯುವ ಬೆಂಕಿಯಿಂದ ಸಿಡಿದ ಕೋಟ್ಯಾಂತರ ಕಿಡಿಗಳೇಈ ಜೀವಿಗಳು. ಈ ಜಗತ್ತಿನಲ್ಲಿಮಣ್ಣಿನ ಉಂಡೆಗಳಂತೆ ಇರುವ ನಾವೂ ಮತ್ತು ಈ ಉಂಡೆಯೊಳಗೆ ಗಾಳಿ ಎಂಬಂತೆ ಇರುವ ಆತ್ಮ ಅಥವಾ ಚೇತನದ ಸಮ್ಮಿಲನದಿಂದ ಉಂಟಾದ ಬದುಕೆಂಬ ತಿಕ್ಕಾಟದಲ್ಲಿ ಬೆಂಕಿಯುಗುಳಿವಿಷಕಾರಿಅಮೃತವ ಸವಿದು ಬಾಳ ಸವೆಸಿ ಮತ್ತದೇ ಚೇತನವನ್ನು ಸೇರುವಾಗಇಲ್ಲಿ ಪಡೆದ ಅಮೃತದ ಬೆಲೆಯೇನು ಕುಡಿದ ಅಥವಾ ಕಕ್ಕಿದ ವಿಷದ ಬೆಲೆಯೇನು ಎಂದು ಕೇಳುತ್ತಾರೆ ಶ್ರೀ ಗುಂಡಪ್ಪನವರು.
ಈ ಕಗ್ಗದ ಒಟ್ಟಾರೆ ಅಂತರ್ಯವೇನೆಂದರೆಮಣ್ಣಿಂದ ಆಗಿಮಣ್ಣಲ್ಲೇ ಇದ್ದು ಮಣ್ಣಲ್ಲೇ ಸೇರುವ ಈ ಮಾನವನ ಬಾಳು ಕೇವಲ ಉಸಿರಿರುವ ತನಕ. ಹೀಗೆ ಬದುಕಿರುವಾಗ ನಾವು ಪಡೆಯುವ ಸುಖ ದುಃಖ ಅನುಭವಿಸುವ ಕೋಪ ದ್ವೇಷಅಸೂಯಪ್ರೀತಿಪ್ರೇಮಅನುರಾಗಬಂಧನಗಳಂಥಹ ಭಾವಗಳೆಲ್ಲವೂ, ” ಬಡಿತವಿರುವತನಕ (ಹೃದಯದ)” ಅದು ನಿಂತರೆ ” ಬಡಿವಾರ ಬಂದ್” ಈ ಜೀವನದ ಎಲ್ಲಕ್ಕೂ ಒಂದು ಮಂಗಳವನ್ನು ಹಾಡುವಸಾವನ್ನು ಅಪ್ಪಿ ಎಲ್ಲವನ್ನೂ ಇಲ್ಲೇ ಬಿಟ್ಟು ಹೋಗುವಾಗುವಂಥಾ ಈ ಜೀವನದಲ್ಲಿ ಪಡೆದ ಸುಖಕ್ಕೆ ಏನು ಬೆಲೆದುಃಖಕ್ಕೆ ಏನು ಬೆಲೆ. ಎಲ್ಲವೂ ಶೂನ್ಯ.
ಇಂತಹ ಭಾವಗಳನ್ನು ವ್ಯಕ್ತಪಡಿಸುವ ಈ ಕಗ್ಗದ ಅಂತರ್ಯವನ್ನು ವಾಚಕರು ಅವರದೇ ಅನುಭವದ ಮೂಸೆಯಲ್ಲಿ ಹಾಕಿ ನೋಡಿದಾಗಪ್ರತಿಯೊಬ್ಬರಿಗೂ ಅವರವರದೇ ಅನುಭವದ ಭಾವ ಸಿಗುತ್ತದೆ.
ರಸಧಾರೆ - 020
ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? |
ಚಂಡಚತುರೋಪಾಯದಿಂದಲೇನಹುದು ? ||
ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು |
ಅಂಡಲೆತವಿದಕೇನೋ ಮಂಕುತಿಮ್ಮ ||
ಚಂಡ = ಉಗ್ರಚತುರೋಪಾಯ = ನಾಲ್ಕು ವಿಧವಾದ ಉಪಾಯಗಳುಮುಗಿದೇನಹುದು = ಮುಗಿದು ಏನು ಅಹುದು= ಮುಗಿದರೆ ಏನಾಗುತ್ತದೆ. ತಂಡುಲ = ಅಕ್ಕಿಅಂಡಲೆತ = ಸುಮ್ಮನೆ ಸುತ್ತಾಟ.
ಅಂದಿನ ಮತ್ತು ಇಂದಿನ ವಾಸ್ತವಿಕ ಚಿತ್ರಣವನ್ನು ನಮಗೆ ಗುಂಡಪ್ಪನವರು ಕೊಟ್ಟಿದ್ದಾರೆ ಈ ಕಗ್ಗದಲ್ಲಿ. ನಮ್ಮಲ್ಲಿ ಅನೇಕ ದೇವರುಗಳು. ಆ ದೇವರುಗಳ ಸಂಖ್ಯೆ ಎಷ್ಟಿದೆಯಂದರೆ ಎಣಿಸಲೂ ಸಾಧ್ಯವಿಲ್ಲ. ಒಂದುಕಡೆ ತಿರುಪತಿ ತಿಮ್ಮಪ್ಪನಾದರೆಇನ್ನೊಂದು ಕಡೆಬದರಿಯ ಬದರೀನಾಥಒಂದುಕಡೆ ಮಧುರೆಯ ಮೀನಾಕ್ಷಿಯಾದರೆಇನ್ನೊಂದುಕಡೆ ಕಾಶಿಯ ವಿಶಾಲಾಕ್ಷಿಒಂದುಕಡೆ ಪೂರಿಯ ಜಗನ್ನಾಥನಾದರೆ ಇನ್ನೊಂದುಕಡೆ ತಿರುವನಂತಪುರದ ಅನಂತಪದ್ಮನಾಭಒಂದುಕಡೆ ವಿನಾಯಕನಾದರೆಇನ್ನೊಂದುಕಡೆ ಷಣ್ಮುಖಹೀಗೇ ಬರೆಯುತ್ತಹೋದರೆ ಪಟ್ಟಿ ಬಹಳ ಉದ್ದ ಆದೀತು. ದೇಶ ಕಾಲ ಸಂಧರ್ಭಕ್ಕನುಗುಣವಾಗಿ ನಮಗೆ ನಾವು ಪೂಜಿಸುವ ದೇವತೆಗಳು ಬದಲಾಗುತ್ತ ಹೋಗುತ್ತಾರೆ. ಇದನ್ನೇ ಗುಂಡಪ್ಪನವರು ಕಂಡ ದೈವಕ್ಕೆಲ್ಲ” ಎಂದಿರಬೇಕು.
ಆದರೆ ಇದು ಸರಿಯೇ ಅಲ್ಲವೇ ಎಂದು ಸ್ವಲ್ಪ ವಿಶ್ಲೇಷಿಸೋಣವೇಭಾರತೀಯರಾದ ನಮಗೆ ಎಲ್ಲವೂ ದೈವವೇಗಿಡ ಮರ ಬಳ್ಳಿ ನದಿ ಗುಡ್ಡ ಬೆಟ್ಟಆಕಾಶ ಸೂರ್ಯ ಚಂದ್ರ ಎಲ್ಲ ಗ್ರಹಗಳುಪಕ್ಷಿ ಮೀನು ಪ್ರಾಣಿಗಳು ಎಲ್ಲವೂ ದೇವರೇ. ಅಷ್ಟೇ ಅಲ್ಲ ಎಲ್ಲದರಲ್ಲೂ ದೈವವನ್ನು ಕಾಣುವ ಸಂಸ್ಕೃತಿ ನಮ್ಮದು. ಅವುಗಳನ್ನೆಲ್ಲ ಕಾಪಾಡುವ ಕಾರಣದಿಂದ ಅವುಗಳಿಗೆಲ್ಲ ದೈವತ್ವವನ್ನು ಆರೋಪಿಸಿದ್ದಾರೆ ನಮ್ಮ ಪೂರ್ವಜರು. ಒಂದು ರೀತಿಯಲ್ಲಿ ಇದು ಒಳ್ಳೆಯದೇ ಅಲ್ಲವೇ ವಾಚಕರೆಆದರೆ ವ್ಯಕ್ತಿ ಆಂತರ್ಯದಲ್ಲಿ ಬೆಲ್ಯುತ್ತಾ ಹೋದಂತೆಲ್ಲ ಅನೇಕದಿಂದ ಏಕಕ್ಕೆ ಬರುವುದೇ ಅಧ್ಯಾತ್ಮಸಾಧನೆಯ ಗುರಿ. ಆಕಾರದಿಂದ ನಿರಾಕಾರಕ್ಕೆ ಬರುವುದೇ ಎಲ್ಲ ಸಾಧನೆಯ ಫಲ.
ಆದರೆ ನಾವು ಏಕೆ ಈ ದೈವಕ್ಕೆ ಕೈ ಮುಗಿಯುತ್ತೇವೆಇದಕ್ಕೆ ನನ್ನ ಅರಿವಿನ ಪರಿಮಿತಿಯಲ್ಲಿ ವಿವರಿಸುತ್ತೇನೆ. ನಮಗೆ ಆಸೆಗಳುಂಟು. ಆಸೆಗಳು ನಾವು ಈ ಬದುಕಿಗೆ ಅಂಟಿಕೊಂಡಿರುವುದರಿಂದ ಉಂಟು. ಈ ಆಸೆಯ ಪಕ್ಕ ಪಕ್ಕದಲ್ಲೇ ಒಂದು ಭಯವೂ ಉಂಟು. ಮಾನವರಿಗೆ ಎರಡು ರೀತಿಯ ಭಯಗಳುಂಟು. ಒಂದು ತನ್ನಲ್ಲಿರುವ ವಸ್ತುವಿಷಯ ಅಥವಾ ವ್ಯಕ್ತಿ ಯನ್ನು ಕಳೆದುಕೊಳ್ಳುವ ಭಯ. ಎರಡುತಾನು ಆಸೆ ಪಟ್ಟ ವಸ್ತುವ್ಯಕ್ತಿವಿಷಯಗಳು ಸಿಗದೆಹೋಗುವ ಭಯ. ಮಾನವನ ಎಲ್ಲ ಭಯಗಳನ್ನೂ ಈ ಎರಡು ಅಂದರೆ ಎರಡೇ ವಿಭಾಗಗಳಲ್ಲಿ ಸೇರಿಸಬಹುದು. ಮೂರನೆಯದು ನನಗೆ ಗೋಚರಿಸುತ್ತಿಲ್ಲ.
ಆದರೆ ಈ ಭಯ ಸಹಜವಾದದ್ದೇ. ಮನುಷ್ಯನಿಗೆ ತನ್ನ ಜೀವನದಲ್ಲಿ ತನಗೆ ಸಂಬಂಧಿಸಿದ ಎಲ್ಲ ವ್ಯಕ್ತಿವಿಷಯ ಮತ್ತು ವಸ್ತುವಿನ ಮೇಲೆ ಮಮಕಾರವಿರುತ್ತದೆ. ಈ ಮಮಕಾರವೇ ಈ ಭಯಕ್ಕೆ ಕಾರಣ. ಈ ವ್ಯಕ್ತಿವಿಷಯ ಮತ್ತು ವಸ್ತುಗಳು ಹಲವಿಧದಲ್ಲಿ ಇರಬಹುದುತನ್ನವರುಅವರಿಗೆ ಸಂಬಂಧಿಸಿದ ವಿಷಯಗಳಾದಆರೋಗ್ಯವಿದ್ಯೆಪರಸ್ಪರ ಸಬಂಧಗಳುವಿವಾಹಕ್ಕೆಪ್ರೇಮಕ್ಕೆಉದ್ಯೋಗಹಣಕಾಸುಹೀಗೆ ಹತ್ತು ಹಲವಾರು ವಿಷಯಗಳಿಗೆ ನಾವು ಅಂಟಿಕೊಂಡಿರುತ್ತೇವೆ. ಅವುಗಳಲ್ಲಿ ಇರುವುದು ಕಳೆದು ಹೋಗುವ ಭಯ ಅಥವಾ ಬಯಸಿದ್ದು ಆಗದೆ ಹೋಗಬಹುದಾದ ಭಯ. ಕಳೆದು ಹೋಗುವುದು ಏಕೆಬಯಸಿದ್ದು ಆಗದೆ ಹೋಗುವುದು ಏಕೆಎಂದು ಖಚಿತವಾಗಿ ನಮಗೆ ಅರಿಯದಾದಾಗ ಮತ್ತು ಸಂಶಯಗಳಿದ್ದಾಗನಮಗರಿಯದ ಯಾವುದೋ ಶಕ್ತಿ ಅಥವಾ ನಮ್ಮನ್ನು ಕಾಯುವ ಯಾವುದೋ ಶಕ್ತಿಗೆ ನಾವು ಕೈಮುಗಿದುಬೇಡುವುದೋ ಅಥವಾ ಶರಣಾಗುವುದೋ ಮಾಡುತ್ತೇವೆ. ಅದನ್ನೇ ಗುಂಡಪ್ಪನವರು ” ಆ ವಿಚಿತ್ರಕೆ ಶರಣಾಗೋ ” ಎನ್ನುತ್ತಾರೆ.
ಭಾರತೀಯರಾದ ನಮಗೆ ಎಲ್ಲವೂ ದೇವರೇ ಆದ್ದರಿಂದಇಷ್ಟೊಂದು ಬಗೆಬಗೆಯ ದೇವರುಗಳು ನಮ್ಮಲ್ಲಿಹಣಕ್ಕೊಬ್ಬಗುಣಕ್ಕೊಬ್ಬವಿದ್ಯೆಗೊಬ್ಬಆರೋಗ್ಯಕ್ಕೊಬ್ಬಪಾಪನಾಶನಕ್ಕೊಬ್ಬಪರಮಾರ್ಗಕ್ಕೊಬ್ಬ. ಮತ್ತು ಈ ದೇವತೆಗಳನ್ನು ಒಲಿಸಿಕೊಳ್ಳಲು ಹಲವಾರು ವಿಧಾನಗಳು. ದರ್ಶನಅರ್ಚನೆಅಭಿಷೇಕದಾನ,ಧ್ಯಾನಭಜನೆ ಆನ್ನ ಸಂತರ್ಪಣೆಸಮಾರಾಧನೆಪರೋಪಕಾರದ ಕೆಲಸಗಳುಹೋಮಹವನಯಜ್ಞಯಾಗಾದಿಗಳುಹೀಗೆ ನಮಗೆ ತೋಚಿದ್ದುಮತ್ತು ಪರರಿಂದ ಸೂಚಿಸಲ್ಪಟ್ಟಸಾಮದಾನ ಬೇಧದಂಡದಂತ ತುರೋಪಾಯಗಳನ್ನೂ ಉಪಯೋಗಿಸಿನಮ್ಮ ಕಾರ್ಯ ಸಾಧನೆಗೆ ಆ ದೇವರನ್ನು ಸದಾಕಾಲ ಒಲಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಇದು ಒಂದು ಮಾನಸಿಕ ಸ್ವಯಂ ಚಿಕಿತ್ಸೆ. ನಮ್ಮ ಮನಸ್ಸುಗಳಲ್ಲಿ ಉದ್ಭವಿಸುವ ಹಲವಾರು ಪ್ರಶ್ನೆ ಮತ್ತು ಸಂದೇಹಗಳಿಗೆ ನಾವೇ ಕಂಡುಕೊಳ್ಳುವ ಸಮಾದಾನ.
ಇದು ಅಧ್ಯಾತ್ಮ ಪ್ರಯಾಣದ ಒಂದು ಸ್ತರ. ಅವರವರ ಮಟ್ಟಿಗೆ ಸರಿ. ಆದರೆ ಗುಂಡಪ್ಪನವರು ” ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು” ಒಂದು ಹಿಡಿ ಅಕ್ಕಿಗಾಗಿಹೊಟ್ಟೆ ತುಂಬಿಸಿಕೊಳ್ಳಲುಗೇಣುದ್ದ ಬಟ್ಟೆಗಾಗಿಮೈಮುಚ್ಚಲು ಮನುಷ್ಯ ಇಷ್ಟೆಲ್ಲಾ ಮಾಡಬೇಕೆಎಂಬ ಭಾವದಲ್ಲಿ ಒಂದು ವೈರಾಗ್ಯದ ವಿಷಯವನ್ನು ಪ್ರಸ್ತಾಪ ಮಾಡುತ್ತಾರೆ. ಆದರೆ ವೈರಾಗ್ಯವು ಅನುಭವದಿಂದ ಮಾತ್ರ ಬರಲು ಸಾಧ್ಯ. ಅಂತಹ ಅನುಭವನ್ನ್ನು ಕೊಡುವುದೇ ಜೀವನ. ಅಂತ ಅನುಭವಗಳನ್ನು ಪಡೆದು ಅನುಭವಿಸಿಇಲ್ಲಿ ಯಾವುದರಿಂದಲೂ ಏನೂ ಆಗುವುದಿಲ್ಲನಾನು ಇಲ್ಲಿನವನಲ್ಲನನ್ನ ಮೂಲ ಬೇರೆ ಇದೆ, ” ಅಲ್ಲಿದೆ ನಮ್ಮ ಮನೆ. ನಾನೇಕೆ ಬಂದೆ ಸುಮ್ಮನೆ” ಎಂದು ಪುರಂದರದಾಸರು ಹೇಳುವಹಾಗೆನಮಗೆ ಈ ಪ್ರಪಂಚದಿಂದ ಏನೂ ಆಗಬೇಕಾಗಿಲ್ಲವೆಂಬ ನಿಜ” ವೈರಾಗ್ಯದ ಭಾವ ಮನದಲ್ಲಿ ಸ್ಥಿರವಾಗಿ ಮೂಡಿದರೆ…………….. ಆದರೆ ಕೆಲವರು ಹೀಗೂ ಯೋಚನೆ ಮಾಡುತ್ತಾರೆಆ ವೈರಾಗ್ಯ ಬೇಕೆಈ ಜೀವನದಾಚಿನದು ಏನೋ ಗೊತ್ತಿಲ್ಲ. ಗೊತ್ತಿಲ್ಲದ ವಿಷಯದಲ್ಲಿ ಆಸಕ್ತಿ ತೋರಿಇರುವುದನ್ನು ಬಿಡುವುದು ಸರಿಯಲ್ಲ. ಬದುಕಿರುವ ತನಕ ಬದುಕನ್ನು ಅನುಭವಿಸಿ ಬದುಕಬೇಕುಎನ್ನುತ್ತಾರೆ.
ಏನಾದರಾಗಲಿ ಒಂದುಕಡೆ ಈ ಜಗತ್ತು ಮತ್ತು ಸಂಸಾರದಲ್ಲಿ ರಕ್ತಿ ಇನ್ನೊಂದುಕಡೆ ವಿರಕ್ತಿ. ಯಾವುದು ಬೇಕೋ ಅದನ್ನು ಆಯ್ದುಕೊಳ್ಳಲು ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ. ನಮ್ಮ ನಮ್ಮ ವಿಚಾರಗಳು ನಮಗೆ ಸಂತೋಷ ನೀಡಬೇಕು ಅಷ್ಟೇ.

ಡಿವಿಜಿಯವರ ಮಂಕುತಿಮ್ಮನ ಕಗ್ಗ ಪಿಡಿಎಫ್ | ಕನ್ನಡದ ಭಗವದ್ಗೀತೆ pdf| Mankutimmana Kagga DVG with meaning

ಕನ್ನಡದ ಭಗವದ್ಗೀತೆಯ ಬಗ್ಗೆ ಎಷ್ಟು ಜನಕ್ಕೆ ಗೊತ್ತು?

ಡಿ. ವಿ. ಜಿಯವರ ಮಂಕುತಿಮ್ಮನ ಕಗ್ಗವನ್ನು ಕನ್ನಡದ ಭಗವದ್ಗೀತೆ ಎಂದು ಏಕೆ ಕರೆಯುತ್ತಾರೆ?

ಮಂಕುತಿಮ್ಮನ ಕಗ್ಗ ಮತ್ತು ಭಗವದ್ಗೀತೆಗೆ ಹೋಲಿಕೆಗಳಿವೆ.

೧. ಭಗವದ್ಗೀತೆಯೂ ಯುದ್ಧದ ಸಂದರ್ಭದಲ್ಲಿ ಶುರುವಾಗುತ್ತದೆ. ಅರ್ಜುನ ತಾನು ಹೇಗೆ ಯುದ್ಧ ಮಾಡಲಿ ಎಂದು ದುಃಖಿಸುವ ಸಮಯದಲ್ಲಿ ಭಗವದ್ಗೀತೆಯ ಪ್ರಾರಂಭ. ಕಗ್ಗವೂ ಸಹ ಆಗ ಸದ್ಯ ಆರಂಭವಾಗಿದ್ದ ವಿಶ್ವ ಮಹಾಯುದ್ಧದ ಬಗ್ಗೆ ಆತಂಕಿಸುತ್ತಾ ಶುರುವಾಗುತ್ತದೆ..



Download Mankutimmana Kagga here: DVG MANJUTIMMANA KAGGA PDF

Click here to download the Mankutimmana Kagga with meaning 


ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ

ಮೃತ್ಯು ಕುಣಿಯುತಲಿಹನು ಕೇಕೆಹಾಕುತಲಿ

ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ

ಎತ್ತಲಿದಕೆಲ್ಲ ಕಡೆ? - ಮಂಕುತಿಮ್ಮ

೨. ನಂತರ ದೇವರ ಅಸ್ತಿತ್ವದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಾ , ಅದರ ಬಗ್ಗೆ ಸ್ಪಷ್ಟನೆ ನೀಡುತ್ತಾ ಹೋಗುತ್ತಾರೆ. ಭಗವದ್ಗೀತೆಯಲ್ಲೂ ಕೃಷ್ಣ ತನ್ನ ಬಗ್ಗೆ ಹೇಳಿಕೊಳ್ಳುವ ಶ್ಲೋಕಗಳಿವೆ.

ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು

ಹೊಮ್ಮುವೆನು ಕೋಟಿರೂಪದಲಿ ನಾನೆಂದು

ಬೊಮ್ಮನೆಳಸಿದನಂತೆ. ಯೆಳಸಿಕೆಯೆ ಮಾಯೆ

ನಮ್ಮಿರವು ಮಾಯೆಯಲಿ - ಮಂಕುತಿಮ್ಮ

Mankutimmana Kagga with meaning 

ಕೃಷ್ಣನೂ ಸಹ ತನ್ನಿಂದಲೇ (ಪರಬ್ರಹ್ಮ) ಎಲ್ಲಾ ಹುಟ್ಟಿದೆ ಎಂದು ಹೇಳಿಕೊಳ್ಳುತ್ತಾನೆ. ಅಲ್ಲಿಯ ತತ್ವ,ಇಲ್ಲಿಯ ತತ್ವ ಒಂದೇ ರೀತಿ ಇದೆ.

೩. ಎಲ್ಲಕ್ಕಿಂತ ಮುಖ್ಯವಾಗಿ ಭಗವದ್ಗೀತೆ ಜೀವನದಲ್ಲಿ ಹೋರಾಡುವುದು ಹೇಗೆ ಎಂದು ಹೇಳುತ್ತದೆ. ಫಲಾಪೇಕ್ಷೆ ಇಲ್ಲದೆ ಎಲ್ಲಾ ಭಗವಂತನಿಂದಲೇ ಎಂದು ಭಾವನೆಯನ್ನು ಇಟ್ಟುಕೊಂಡು ನಿನ್ನ ಕೆಲಸವನ್ನು ಮಾಡು ಎಂದು ತಿಳಿಸುತ್ತದೆ. ಕಗ್ಗವೂ ಸಹ ಬದುಕನ್ನು ಹೇಗೆ ನಿರ್ಲಿಪ್ತತೆಯಿಂದ ಜೀವಿಸಬೇಕೆಂದು ಹೇಳುತ್ತದೆ.

ನಗುಮನದಿ ಲೋಗರ ವಿಕಾರಂಗಳನು ನೋಡಿ

ಬಿಗಿ ತುಟಿಯ ದುಡಿವಂದು ನೋವಪಡುವಂದು

ಪೊಗು ವಿಶ್ವಜೀವನದ ಜೀವಾಂತರಂಗದಲಿ

ನಗುನಗುತ ಬಾಳ್, ತೆರಳು - ಮಂಕುತಿಮ್ಮ

ಬೇಡಿದುದನೀವನೀಶ್ವರನೆಂಬ ನೆಚ್ಚಿಲ್ಲ

ಬೇಡಲೊಳಿತಾವುದೆಂಬುದರರಿವುಮಿಲ್ಲ

ಕೂಡಿಬಂದುದನೆ ನೀನ್ ಅವನಿಚ್ಛೆಯೆಂದು ಕೊಳೆ

ನೀಡುಗೆದೆಗಟ್ಟಿಯನು - ಮಂಕುತಿಮ್ಮ

ಮಂಕುತಿಮ್ಮನ ಕಗ್ಗ ಭಗವದ್ಗೀತೆಯ ಸಾರವನ್ನು ಸಾಮಾನ್ಯ ಜನರ ಯೋಚನೆಯ ಮಟ್ಟಕ್ಕೆ ತರಲು ಪ್ರಯತ್ನ ಪಟ್ಟಿದ್ದು ಎಂದು ಹೇಳಬಹುದು. ಆದ್ದರಿಂದ 'ಕನ್ನಡದ ಭಗವದ್ಗೀತೆ' ಎನ್ನುವ ಹೊಗಳಿಕೆ ಮಂಕುತಿಮ್ಮನ ಕಗ್ಗಕ್ಕೆ ಸರಿಯಾಗಿದೆ ಎನ್ನಬಹುದು.

ಕುವೆಂಪು ಅವರ ಅಭಿಪ್ರಾಯ ಕಗ್ಗದ ಬಗ್ಗೆ-

ಹಸ್ತಕ್ಕೆ ಬರೆ ನಕ್ಕೆ; ಓದುತ್ತ ಓದುತ್ತ 
ಮಸ್ತಕಕ್ಕಿಟ್ಟು ಗಂಭೀರವಾದೆ
ವಿಸ್ತರದ ದರ್ಶನಕೆ ತುತ್ತತುದಿಯಲಿ ನಿನ್ನ
ಪುಸ್ತಕಕೆ ಕೈಮುಗಿದೆಮಂಕುತಿಮ್ಮ 

Holding the book in my hands, I laughed

As I read it, I kept it to my head, and meditated

The pinnacle of such an expansive philosophy!

I bow down to your book, Mankutimma


Quora - Chaitraya

 Download Mankutimmana Kagga here: DVG MANJUTIMMANA KAGGA PDF

Mankutimmana Kagga with meaning 

13 Jul 2020

Ranaganayaka Kannada Movie| Web series by Guruprasad| ZEE5 Kannada Web series| ರಂಗನಾಯಕ ಗುರುಪ್ರಸಾದ್ 

 

Ranganayaka


Movie Name: Ranganayaka
Release: Dec 2021
Cast: Jaggesh

Synopsis: Ranganayaka is a political satire and is being touted as a period drama. The director will take viewers back to the Vijayanagara period, while at the same time highlighting today’s political system. The director, who did not wish to reveal any further details about the film, says that he has been working on the subject for a long time now. “I was toying with the idea for the last ten years. I was very particular that Jaggesh is the face of Ranganayaka.


Guruprasad is an actor and director in the Kannada film industry. His debut as a director was the 2006 film Mata which became a cult hit and his second movie as a director is Eddelu Manjunatha. Both the films were received with rave reviews and were considered for many award categories. He is known for portraying satire in a realistic way on the screen.
According to sources, he's currently working on a movie names "Ranganayaka" and he's hoping to get it released by Dec 2021. 


Also, he's working with ZEE5 for a web series. If everything goes well. We may see a Kannada web series in ZEE5 directed by Mata Guruprasad.


11 Jul 2020

Best Gaana Podcasts| Best podcast in India| Ganna Top podcast | Podcast to listen

Whether you're new to the wonderful world of podcasts or looking for your next great listen, we've got you covered. With a similar format to talk radio, podcasts usually feature a host or hosts discussing the subject at hand. That can range from news to cooking, interviewing special guests or each other, sharing personal stories, performing an audio play, or some combination of all of the above. Podcasts vary in length, too. Some of the shortest ones last just five minutes for a bite-sized listen between tasks, while others marathon for hours so you can really settle into the story. Just like you'd turn on a favorite song or radio station, podcasts are a great way to keep your mind occupied while doing chores, prepping dinner, working out or commuting.

Best Gaana Podcasts

  • Tech Flix Podcast: Listen here Technology Podcast in Gaana




  • Paranormal Reality Files : Listen here - Paranormal Podcast in Gaana

  • The worst Traveller: Listen Here - Travel related Podcast in Gaana


  • On Purpose with Jay shetty- Listen Here - Motivational Podcast in Gaana


  • The mind Itself- Listen Here- Self-Improve Podcast in Gaana


  • Money Control- Listen here- Business news podcast in Ganna



Listen to all the best podcast in Gaana




Mundina Nildana Watch Online | Kannada OTT Platform | ಮುಂದಿನ ನಿಲ್ದಾಣ

Watch most loving and feel good movie Mundina Nildana Kannada Movie now on NETFLIX | Kannada OTT Platform


Watch Kannada Movie in OTT platform

As three young professionals chase their wildly different dreams, their relationships with each other indelibly impact their journeys of self-discovery.

Netflix: Mundina Nildana

"A refreshing journey with splendid visuals!"

The story of this film revolves around a guy named Partha, who crosses paths with two women named Meera & Ahana. Their emotional influence on his life is vibrantly shown through various flashback of events which occurs through most of the film.

The film has a rich look and a realistic feel etched into it. All the characters in this film belong to the affluent upper class society. Their relationships, passion and careers are discussed at length. It shows how the confusion & chaos caused by some really bad decisions in life, can also sometimes eventually work wonders for oneself.

One of the standout factors of this movie is it's stunning cinematography. Abhimanyu Sadanandan truly deserves a pat on the back for his magnificent camera work. Each of the scenes are lively and infuses tremendous energy & a fresh feel into the movie. The music of the film is absolutely mellifluous with a mix of folk, soul and ambient genres sure to entice the viewer.

Praveen Tej gives an amazing performance with his charming looks and body language. Radhika Chetan presents a tantalizing act paired with elegance. Ananya Kashyap unveils herself in style with her stunning looks and gorgeous outfits. Her Kathak dance sequence will have you mesmerized!

All in all, this film is a breath of fresh air in Sandalwood. Although the climax could have been slightly better, the refreshing feel and the splendid visuals makes this movie a great watch!
- Raghavendra Rao
close
×

BIMBA STUDIO

Buy Any 2 Kurtis & Save ₹480

Use this exclusive offer for blog readers.

Claim Offer →